ಕಡಿಮೆ ಲಿಂಗಾನುಪಾತ : ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

| N/A | Published : Jun 12 2025, 06:21 AM IST / Updated: Jun 12 2025, 10:12 AM IST

sex ratio

ಸಾರಾಂಶ

ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತ 1000ಕ್ಕೆ 978 ಹೆಣ್ಣು ಇದ್ದು, ಅತೀ ಕಡಿಮೆ ಲಿಂಗಾನುಪಾತ ವ್ಯತ್ಯಾಸದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. 

 ಉಡುಪಿ :   ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತ 1000ಕ್ಕೆ 978 ಹೆಣ್ಣು ಇದ್ದು, ಅತೀ ಕಡಿಮೆ ಲಿಂಗಾನುಪಾತ ವ್ಯತ್ಯಾಸದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಆದರೂ ಜಿಲ್ಲೆಯಲ್ಲಿ 22 ಹೆಣ್ಣುಮಕ್ಕಳ ಸಂಖ್ಯೆ ವ್ಯತ್ಯಾಸ ಇರುವುದರಿಂದ ಹೆಣ್ಣು ಮಕ್ಕಳ ಪ್ರಮಾಣ ಇನ್ನೂ ಹೆಚ್ಚಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.2023-24 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 5845 ಗಂಡು ಮಕ್ಕಳು ಮತ್ತು, 5827 ಹೆಣ್ಣು ಮಕ್ಕಳ ಜನಿಸಿದ್ದಾರೆ, ಅಂದರೆ ಲಿಂಗಾನುಪಾತ 1000ಕ್ಕೆ 968 ಇತ್ತು. 2024-25 ನೇ ಸಾಲಿನಲ್ಲಿ ಈ ವ್ಯತ್ಯಾಸ ಕಡಿಮೆಯಾಗಿರುವುದು ಸಂಸತಸ ವಿಷಯ.

 ದಾವಣಗೆರೆ, ರಾಮನಗರ. ಶಿವಮೊಗ್ಗ ಕ್ರಮವಾಗಿ ನಂತರದ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಅನುಪಾತ ವ್ಯತ್ಯಾಸವು ಇನ್ನೂ ಸಹ ಕಡಿಮೆಯಾಗಬೇಕು ಎಂದರು.ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯಡಿ ಜಿಲ್ಲೆಯಾದ್ಯಂತ ಹೆಣ್ಣುಮಕ್ಕಳ ಬಗ್ಗೆ ಮಾಹಿತಿ ಶಿಕ್ಷಣ ಚಟುವಟಿಕೆಗಳನ್ನು ನಡೆಸಬೇಕು. ಹೆಚ್ಚು ಲಿಂಗಾನುಪಾತ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚುಹೆಚ್ಚು ಅರಿವು ಕಾರ್ಯಕ್ರಮಗಳು ಮಾಡಬೇಕು ಎಂದರು.

ಪ್ರತಿಯೊಂದು ಸ್ಕ್ಯಾನಿಂಗ್ ಸೆಂಟರ್‌ಗಳು ಸರ್ಕಾರದ ಮಾರ್ಗಸೂಚಿ ಅನ್ವಯ ದಾಖಲೆಗಳನ್ನು ನಿರ್ವಹಣೆ ಮಾಡಬೇಕು. ಒಂದೊಮ್ಮೆ ಇದನ್ನು ಉಲ್ಲಂಘಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಅವರು, ಕಮಿಟಿಯ ಸದಸ್ಯರು ಆಗಿಂದಾಗ್ಗೆ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಅನಿರೀಕ್ಷಿತ ಭೇಟಿ ನೀಡಬೇಕು ಎಂದರು.

ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಈ ಅಪರಾಧಕ್ಕೆ ಕಾರಣರಾದ ವೈದ್ಯಾಧಿಕಾರಿಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್ ಗಳ ಮಾಲೀಕರಿಗೆ 10,000 ರು. ದಂಡ, 3 ವರ್ಷ ಜೈಲು ಶಿಕ್ಷೆ, ಪುನರಾವರ್ತನೆಯಾದಲ್ಲಿ 50,000 ರು ದಂಡ, 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ., ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಡಿ.ಎಸ್.ಓ ಡಾ. ನಾಗರತ್ನ, ಜಿಲ್ಲಾ ಏಡ್ಸ್ ರೋಗ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ಜನ್ ಡಾ. ಹೆಚ್.ಅಶೋಕ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಕೆ.ಎಂ.ಸಿ.ಯ ತಜ್ಞ ವೈದ್ಯರುಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಮತ್ತಿತರರಿದ್ದರು.

Read more Articles on