ಮದ್ದೂರು; ಕಾನೂನು ಕಾಲೇಜಿಗೆ ಅನುಮೋದನೆ: ಶಾಸಕ ಉದಯ್

| Published : Sep 02 2025, 12:00 AM IST

ಸಾರಾಂಶ

ಕಳೆದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಸರ್ಕಾರಿ ಮಹಿಳಾ ಕಾಲೇಜಿಗೆ ಮುಂದಿನ ಬಜೆಟ್‌ನಲ್ಲಿ ಡಿಪ್ಲೊಮಾ ಮತ್ತು ಕಾನೂನು ಕಾಲೇಜಿಗೆ ಅನುಮೋದನೆ ದೊರಕುವ ಸಾಧ್ಯತೆ ಇದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಸರ್ಕಾರಿ ಮಹಿಳಾ ಕಾಲೇಜಿಗೆ ಮುಂದಿನ ಬಜೆಟ್‌ನಲ್ಲಿ ಡಿಪ್ಲೊಮಾ ಮತ್ತು ಕಾನೂನು ಕಾಲೇಜಿಗೆ ಅನುಮೋದನೆ ದೊರಕುವ ಸಾಧ್ಯತೆ ಇದೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಕಾಲೇಜು ಆವರಣದಲ್ಲಿ ಒಂದು ಕೋಟಿ ರು. ವೆಚ್ಚದಲ್ಲಿ ಹೆಚ್ಚುವರಿ ತರಗತಿಗಳ ಕೊಠಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಕಳೆದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಹೀಗಾಗಿ ಮುಂದಿನ ಬಜೆಟ್‌ನಲ್ಲಿ ಅನುಮೋದನೆ ದೊರೆಕುವ ಸಾಧ್ಯತೆ ಇದೆ ಎಂದು ಭರವಸೆ ನೀಡಿದರು.

ಈಗಾಗಲೇ ಮಹಿಳಾ ಕಾಲೇಜಿನಲ್ಲಿ ಎಂಕಾಂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಂಶೋಧನಾ ಕೇಂದ್ರ (ಪಿಎಚ್.ಡಿ) ಸ್ಥಾಪನೆಗೆ ಸರ್ಕಾರ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ನೀಡುವುದು ವಿಳಂಬವಾದರೆ ವೈಯಕ್ತಿಕ ಅಥವಾ ಪುರಸಭೆಯಿಂದ ಆರ್ಥಿಕ ನೆರವು ದೊರಕಿಸಿಕೊಡುವುದಾಗಿ ಭರವಸೆ ನೀಡಿದ ಶಾಸಕರು, ಅವಶ್ಯವಿರುವ ಹೆಚ್ಚುವರಿ ಕೊಠಡಿಗಳನ್ನು 5 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಖಾಸಗಿ ಶಾಲಾ ಕಾಲೇಜುಗಳಿಗೆ ದುಬಾರಿ ಶುಲ್ಕ ತೆತ್ತು ವಿದ್ಯಾಭ್ಯಾಸ ಮಾಡುವುದು ಇಂದಿನ ದಿನಗಳಲ್ಲಿ ಕಷ್ಟಕರ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಶಾಲೆಗಳು ನೀಡುವ ಸೌಲಭ್ಯವನ್ನು ನೀಡಿದರೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗಲಿದ್ದು, ಹೀಗಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಶಿಕ್ಷಣ ಕ್ಷೇತ್ರಕ್ಕೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಂಡು ದೇಶಕ್ಕೆ ಕೊಡುಗೆಯಾಗಿ ಬೆಳೆಯಬೇಕು. ಶಾಲೆಯಲ್ಲಿ ಶ್ರದ್ಧೆಯಿಂದ ಕಲಿತು ಪೋಷಕರಿಗೆ, ನಾಡಿಗೆ ಕೀರ್ತಿ ತರಬೇಕು ಎಂದರು.

ಇದೇ ವೇಳೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್, ಸದಸ್ಯರಾದ ಸಿದ್ದರಾಜು, ಮೋಹನ್, ಗ್ರಾ.ಪಂ ಸದಸ್ಯ ಮಾದೇಶ್, ಬಸವರಾಜು ಪ್ರಾಂಶುಪಾಲ ನಾರಾಯಣ್ ಮುಖಂಡರಾದ ಜಯಂತಿ ಲಾಲ್ ಪಟೇಲ್, ಸಂತೋಷ್ ಮತ್ತಿತರರು ಇದ್ದರು.