ಸಾರಾಂಶ
ಮಂಡ್ಯ/ಮದ್ದೂರು : ಮದ್ದೂರಿನಲ್ಲಿ ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಖಂಡಿಸಿ ಸೋಮವಾರ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯರು ಸೇರಿ 500 ಹಿಂದೂಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರತಿಭಟನಾ ಮೆರವಣಿಗೆ ವೇಳೆ ನಗರದ ಕೆಮ್ಮಣ್ಣು ನಾಲಾ ಸಮೀಪದ ಮುಖ್ಯ ಮಸೀದಿ ಬಳಿ ಕರ್ಪೂರ ಮತ್ತು ಟೈರ್ಗೆ ಬೆಂಕಿ ಹಚ್ಚಿ, ಭಗವಾಧ್ವಜ ಹಾರಿಸಿ, ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಈ ವೇಳೆ, ಪ್ರತಿಭಟನಾಕಾರರ ಮೇಲೆ ಒಂದು ಗುಂಪು ಕಲ್ಲು ತೂರಾಟ ನಡೆಸಿ, ಮಾರಕಾಸ್ತ್ರಗಳನ್ನು ಝಳಪಿಸಿತು. ಇದರಿಂದ ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದಾಗ, ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತ ಗುಂಪನ್ನು ಚದುರಿಸಿದ್ದರು. ಈ ವೇಳೆ, ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಗಿರೀಶ್, ಸೌಮ್ಯ, ರಮ್ಯ, ಪಲ್ಲವಿ ಎಂಬುವರು ಸೇರಿ 500 ಹಿಂದೂಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಮಧ್ಯೆ, ಪ್ರತಿಭಟನಾ ಮೆರವಣಿಗೆ ನಡೆದ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ, ಮುಸ್ಲಿಂ ಬಾವುಟಕ್ಕೆ ಬೆಂಕಿ ಹಚ್ಚಿ, ಬಂಟಿಂಗ್ಸ್ ಕಿತ್ತೆಸೆದವರು ಹಾಗೂ ಪ್ರತಿಭಟನಾ ಮೆರವಣಿಗೆ ವೇಳೆ ಮಸೀದಿಗೆ ನುಗ್ಗಲು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟೂ 5 ಎಫ್ಐಆರ್ ಗಳು ದಾಖಲಾಗಿವೆ.
ಮದ್ದೂರು ಬಂದ್ ಶಾಂತಿಯುತ:
ಈ ಮಧ್ಯೆ, ಪಟ್ಟಣದಲ್ಲಿ ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ಜಿಲ್ಲೆ ಮದ್ದೂರು ಬಂದ್ ಗೆ ಮಂಗಳವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದ ರಾಮ್ ರಹೀಮ್ ನಗರ ಹಾಗೂ ಚನ್ನೇಗೌಡ ಬಡಾವಣೆಯಲ್ಲಿ ಮಹಿಳೆಯರ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಸೇರಿ ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಬಂದ್ ಬಹುತೇಕ ಶಾಂತಿಯುತವಾಗಿತ್ತು. ವರ್ತಕರು, ಹೋಟೆಲ್ ಮಾಲೀಕರುಗಳು ತಮ್ಮ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಬಂದ್ ಗೆ ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದರು.