ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಮದ್ದೂರು ಕ್ಷೇತ್ರದ ರೈತರ ಹಿತಾಸಕ್ತಿ ನನ್ನ ಮೊದಲ ಆದ್ಯತೆಯಾಗಿರುವುದರಿಂದ ಕಳೆದ ಮೂರು ವರ್ಷಗಳಲ್ಲಿ ನೀರಾವರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತಾಲೂಕು ರಾಜ್ಯದಲ್ಲೇ ಮುಂಚೂಣಿಯಲಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಮೀಪದ ಗುರುದೇವರಹಳ್ಳಿಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಸುಮಾರು 2 ಕೋಟಿ ರು.ವೆಚ್ಚದಲ್ಲಿ ಹೊಸ ಮದ್ದೂರು ಶಾಖಾ ನಾಲೆಯಡಿ ಬರುವ 35ನೇ ವಿತರಣಾ ನಾಲೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರದಿಂದ ಸಾವಿರ ಕೋಟಿಗೂ ಹೆಚ್ಚಿನ ಅನುದಾನ ತಂದು ಕ್ಷೇತ್ರದ ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಂಡು ರೈತರ ಪರ ಕೆಲಸ ಮಾಡುತ್ತಿದ್ದೇನೆ. ರೈತರ ಕೃಷಿ ಜಮೀನುಗಳಿಗೆ ಸುಲಭವಾಗಿ ನೀರು ತಲುಪಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದ್ದೇನೆ. ಸಿಎಂ ಡಿ.ಕೆ.ಶಿವಕುಮಾರ್ ಅವರು ತಾಲೂಕಿನ ಅಭಿವೃದ್ಧಿಗೆ ಹಚ್ಚಿನ ಅನುದಾನ ನೀಡಿದ್ದು ಇನ್ನು ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದರು.

ಸರ್ಕಾರದಲ್ಲಿ ಮಂಡ್ಯ ಜಿಲ್ಲೆಯಿಂದ ಎನ್.ಚಲುವರಾಯಸ್ವಾಮಿ ಅವರಿಗೆ ಜಲ ಸಂಪನ್ಮೂಲ ಖಾತೆ ನೀಡಿರುವುದರಿಂದ ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿದಿರುವ ಅವರಿಗೆ ಅಭಿವೃದ್ಧಿಯ ವೇಗ ಹೆಚ್ಚಿಸಲು ಸಹಾಯವಾಗುತ್ತದೆ ಎಂದರು.


ತಾಲೂಕಿನಲ್ಲಿ ಕೈಗೊಂಡಿರುವ ನಾಲಾ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರಿಗೆ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ ನೀಡಿದ್ದು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಈ ವೇಳೆ ಮನ್ಮುಲ್ ಅಧ್ಯಕ್ಷ ಹರೀಶ್ ಬಾಬು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಸವರಾಜು, ಎಸ್ಸಿ ಬ್ಲಾಕ್ ವಿಭಾದ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದೊಡ್ಡೇಗೌಡ, ಮುಖಂಡರಾದ ಬಿ.ಎಸ್ ಬೊರೇಗೌಡ, ಅಪ್ಪಾಜಿ, ಸಿದ್ದೇಗೌಡ, ಅನಿಲ್ ರಾಜು, ಸುನೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.