ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಶಿವ ದೇವಾಲಯಗಳಲ್ಲಿ ಮಹಾ ಶಿವರಾತ್ರಿ ಹಬ್ಬವನ್ನು ಭಾನುವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಅಸಂಖ್ಯಾತ ಭಕ್ತಾದಿಗಳು ಮುಂಜಾನೆಯಿಂದಲೇ ದೇವಾಲಯಗಳಿಗೆ ಭೇಟಿ ನೀಡಿ ಸರತಿಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆದರು. ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀ ವೈದ್ಯನಾಥೇಶ್ವರ ದೇವಾಲಯದಲ್ಲಿ ಮುಂಜಾನೆ ಮೂಲ ವಿಗ್ರಹಕ್ಕೆ ಕ್ಷೀರಾಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ದೊಂದಿಗೆ ಪುಷ್ಪಾಲಂಕಾರ ಸೇವೆ ನಂತರ ಮಹಾಮಂಗಳಾರತಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.ಗ್ರಾಮದ ಶ್ರೀ ಪ್ರಸನ್ನ ಪಾರ್ವತಂಬ ವೈದ್ಯನಾಥೇಶ್ವರ ಟ್ರಸ್ಟ್ ವತಿಯಿಂದ ಅಧ್ಯಕ್ಷ ವಿ.ಟಿ ಶಿವರಾಜು ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಅನ್ನ ಸಂತರ್ಪಣೆ, ಸಂಜೆ ಲಘು ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಮದ್ದೂರಿನ ಕೋಟೆ ಬೀದಿಯ ಹ ಳೇ ಬಸ್ ನಿಲ್ದಾಣಸಮೀಪ ಇರುವ ಶ್ರೀ ಕಾಶಿ ವಿಶ್ವೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಅಂಗವಾಗಿ ಬೆಳಗ್ಗೆ ಸಾಮೂಹಿಕ ರುದ್ರ ಹೋಮ, ಪ್ರಥಮ ರುದ್ರಾಭಿಷೇಕ ದ ತರುವಾಯ ಮಹಾಮಂಗಳಾರತಿ ಪ್ರಸಾದ ವಿತರಣೆ ಹಮ್ಮಿಕೊಳ್ಳಲಾಗಿತ್ತು.
ಸಂಜೆ ದ್ವಿತೀಯ ಯಾಮ ರುದ್ರಾಭಿಷೇಕ ರೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಮಳವಳ್ಳಿ ರಸ್ತೆಯ ಶ್ರೀ ವಿಶ್ವನಾಥ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಹೋಮ, ಹವನಾದಿಗಳು ಜರುಗಿದವು. ಸಂಜೆ ರುದ್ರಾಭಿಷೇಕ, ಪುಷ್ಪಾಲಂಕಾರ ದೊಂದಿಗೆವಿಶೇಷ ಪೂಜಾ ಕಾರ್ಯಗಳು ಜರುಗಿದವು.ತಾಲೂಕಿನ ಆತಗೂರು ಹೋಬಳಿ ಚಿಕ್ಕ ಅಂಕನಹಳ್ಳಿಯ ಶ್ರೀನಂದಿ ಬಸವೇಶ್ವರ ದೇವಾಲಯ, ಸೋಮನಹಳ್ಳಿಯ ಮಹದೇಶ್ವರ ಸೇರಿದಂತೆ ವಿವಿಧ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆಯೊಂದಿಗೆ ಜನರು ಶಿವರಾತ್ರಿಯನ್ನು ಶ್ರದ್ಧಭಕ್ತಿಯಿಂದ ಆಚರಿಸಿದರು. ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಧನ್ಯವಾದ ಭಾವ ಮೆರೆದರು..