ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮದ್ದೂರು ತಾಲೂಕು ಪ್ರಥಮ ಸ್ಥಾನ ಪಡೆಯಬೇಕು: ಶಾಸಕ ಕೆ.ಎಂ.ಉದಯ್

| Published : Oct 15 2025, 02:06 AM IST

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮದ್ದೂರು ತಾಲೂಕು ಪ್ರಥಮ ಸ್ಥಾನ ಪಡೆಯಬೇಕು: ಶಾಸಕ ಕೆ.ಎಂ.ಉದಯ್
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಕರು ಮತ್ತು ಪೋಷಕರು ಪ್ರತಿನಿತ್ಯ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು. ನಮ್ಮಿಂದ ಶಾಲೆಗಳಿಗೆ ಏನು ಸೌಕರ್ಯ, ಸವಲತ್ತು ಬೇಕಾಗುತ್ತೋ ಕೇಳಿ ಪೂರೈಕೆ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಮದ್ದೂರು

ಗುಣಮಟ್ಟದ ಶಿಕ್ಷಣದೊಂದಿಗೆ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ತಾಲೂಕು ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆಯಲು ಶ್ರಮಿಸಬೇಕು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಪಟ್ಟಣದ ಪೂರ್ಣಪ್ರಜ್ಞಾ ಶಾಲೆಯಲ್ಲಿ ತಾಲೂಕು ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡಿಸುವ ಸಂಬಂಧ ಮುಖ್ಯ ಶಿಕ್ಷಕರ ಸಮಾಲೋಚನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ 15 ವರ್ಷಗಳಿಂದ ತಾಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನಗಳಿಸುತ್ತಿತ್ತು. ಆದರೆ, ಈ ಪ್ರಸಕ್ತ ಸಾಲಿನಲ್ಲಿ ಫಲಿತಾಂಶ ತೀರಾ ಕಳೆಪೆಯಾಗಿದೆ. ಶಾಲೆಗಳ ಮುಖ್ಯ ಶಿಕ್ಷಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದರು.

ಶಿಕ್ಷಕರು ಮತ್ತು ಪೋಷಕರು ಪ್ರತಿನಿತ್ಯ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು. ನಮ್ಮಿಂದ ಶಾಲೆಗಳಿಗೆ ಏನು ಸೌಕರ್ಯ, ಸವಲತ್ತು ಬೇಕಾಗುತ್ತೋ ಕೇಳಿ ಶಾಸಕರ ಅನುದಾನ ಹಾಗೂ ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪೂರೈಕೆ ಮಾಡಲಾಗುವುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ಧನಂಜಯ ಮಾತನಾಡಿ, ಪ್ರತಿ ಶಾಲೆಯಲ್ಲಿಯೂ ಶಿಕ್ಷಣದಲ್ಲಿ ಹಿಂದುಳಿದಿರುವ ಮಕ್ಕಳನ್ನು ಗುರುತಿಸಿ ಶಾಲಾ ಹಂತದಲ್ಲಿ ಕಠಿಣ ವಿಷಯಗಳ ಬಗ್ಗೆ ಪರೀಕ್ಷೆ ನಡೆಸಬೇಕು. ವಿಧ್ಯಾರ್ಥಿಗಳಿಗೆ ವಿಶೇಷ ತರಗತಿ, ಗುಂಪು ಅಧ್ಯಯನ ನಡೆಸುವ ಮೂಲಕ ಗುಣಮಟ್ಟದ ಶಿಕ್ಷಣ ಹೆಚ್ಚಿಸಿ ಉತ್ತಮ ಫಲಿತಾಂಶ ತರಬೇಕೆಂದು ತಾಕೀತು ಮಾಡಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಎಸ್ಸೆಸ್ಸೆಲ್ಸಿ ಮಂಡಳಿ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು. ಈ ವೇಳೆ ತಾಲೂಕು ಫ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಂತೇಗೌಡ, ಪೂರ್ಣ ಪ್ರಜ್ಞಾ ಸಂಸ್ಥೆ ಅಧ್ಯಕ್ಷೆ ಕಸ್ತೂರಿ ಅನಂತೇಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೆಶಕಿ ರಾಜೇಶ್ವರಿ.

ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ನಾಗೇಶ್, ತಾಲೂಕು ಕಾರ್ಯದರ್ಶಿ ಚಂದ್ರಶೇಖರ್ ಮತ್ತಿತರರು ಇದ್ದರು.