ಸಾರಾಂಶ
ಮದ್ದೂರು:
ತಾಲೂಕಿನ ನೂತನ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ತಾಲೂಕು ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.ಕಳೆದ 9 ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದ ಡಾ.ಸ್ಮಿತಾರಾಮು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಪರಶುರಾಮ್ ಸತ್ತಿಗೇರಿ ಅವರನ್ನು ನೇಮಕ ಮಾಡಲಾಗಿತ್ತು. ತಹಸೀಲ್ದಾರ್ ಪರಶುರಾಮ್ ಅವರಿಗೆ ಉಪ ತಹಸೀಲ್ದಾರ್ ಸೋಮಶೇಖರ್ ಅಧಿಕಾರ ಹಸ್ತಾಂತರ ಮಾಡಿದರು.
ಈ ವೇಳೆ ಮಾತನಾಡಿದ ಪರಶುರಾಮ್ ಸತ್ತಿಗೇರಿ, ಅಧಿಕಾರಿಗಳ ಸಭೆ ನಡೆಸಿ ಕಚೇರಿ ಸಂಪೂರ್ಣ ಮಾಹಿತಿ ಪಡೆದ ಬಳಿಕ ಆಡಳಿತಕ್ಕೆ ಚುರುಕು ನೀಡಲಾಗುವುದು. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದರು.ತಾಲೂಕು ಕಚೇರಿಯ ಪ್ರತಿಯೊಂದು ಕೆಲಸಗಳನ್ನು ನಿರ್ದಿಷ್ಟ ಅವಧಿಯಲ್ಲಿ ನೀಡಬೇಕು. ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು ಎಂದರು. ಇದೇ ವೇಳೆ ತಾಲೂಕು ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.ಮನ್ಮುಲ್ ನಿರ್ದೇಶಕರಿಗೆ ಇಂದು ಅಭಿನಂದನಾ ಸಮಾರಂಭ
ಮಳವಳ್ಳಿ:ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕಿನಿಂದ ಆಯ್ಕೆಯಾಗಿರುವ ನೂತನ ಮನ್ಮುಲ್ ನಿರ್ದೇಶಕರಿಗೆ ಜುಲೈ 20 ರಂದು ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿರುವ ಕಾರ್ಯಕ್ರಮವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸಲಿದ್ದಾರೆ. ಸಂಘದ ತಾಲೂಕು ಅಧ್ಯಕ್ಷ ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸುವರು. ಮನ್ಮುಲ್ ಗೆ ನೂತನ ಚುನಾಯಿತ ನಿರ್ದೇಶಕ ಡಿ.ಕೃಷ್ಣೇಗೌಡ ಹಾಗೂ ನಾಮನಿರ್ದೇಶನ ನಿರ್ದೇಶಕ ಆರ್.ಎನ್.ವಿಶ್ವಾಸ್ ಅವರನ್ನು ಅಭಿನಂದಿಸಲಾಗುವುದು. ಕಾರ್ಯಕ್ರಮದಲ್ಲಿ ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹಾಗೂ ನಿರ್ದೇಶಕರು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಸಂಘದ ಅಧ್ಯಕ್ಷ ಶಿವಲಿಂಗೇಗೌಡ ತಿಳಿಸಿದ್ದಾರೆ.