ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ಎಂ.ಜೆ ದೇವರಾಜು ಅವರು ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಕನ್ನಡ ಶಿಕ್ಷಕರಾಗಿ ತಮ್ಮ ಸೇವಾವಧಿಯಲ್ಲಿ ಹತ್ತು ವರ್ಷಗಳ ಕಾಲ ಸತತವಾಗಿ ಪ್ರಥಮ ಭಾಷೆ ಕನ್ನಡದಲ್ಲಿ ಶೇ. ನೂರರಷ್ಟು ಫಲಿತಾಂಶ ತಂದು ಪ್ರಶಂಸನೀಯ ಸೇವೆ ಸಲ್ಲಿಸಿರುವುದಕ್ಕಾಗಿ ಕನ್ನಡ ಅಧ್ಯಾಪಕರು ಹಾಗೂ ಗಮಕಿಗಳು ಆಗಿದ್ದ ದಿ. ಬಿ ಎಸ್ ನಂಜುಂಡಯ್ಯನವರ ಸ್ಮರಣಾರ್ಥ ೨೦೨೪ನೇ ಸಾಲಿನ ವಿಶೇಷ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ಜ್ಞಾನ ದೀಪಿಕಾ ಶೈಕ್ಷಣಿಕ ದತ್ತಿ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಸ್ವೀಕರಿಸಿದ ದೇವರಾಜು ಅವರನ್ನು ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡಶ್ರೀ ಬಾ. ನಂ. ಲೋಕೇಶ್ ಹಾಗೂ ಮಧುರನಹಳ್ಳಿ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡಪ್ರಭ ಪತ್ರಿಕೆಯ ಸಂಪಾದಕರಾದ ರವಿ ಹೆಗಡೆ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.