ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಹೇಳುತ್ತಾರೆ. ಆದರೆ ಸಹಕಾರ ಕ್ಷೇತ್ರ ಸೇರಿದಂತೆ ಪ್ರತಿಯೊಂದು ರಂಗದಲ್ಲಿಯೂ ಸಹ ಜಾತಿ, ಸಮಾಜ, ರಾಜಕಾರಣ ಇದ್ದೇ ಇದೆ. ಇದರ ನಡುವೆಯೂ ಹಿಂದಿನವರು ಕಟ್ಟಿಕೊಂಡು ಬಂದಿರುವ ಸಹಕಾರ ಕ್ಷೇತ್ರ ಬಲಪಡಿಸುವುದು ಅತ್ಯವಶ್ಯಕ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಪ್ರತಿಪಾದಿಸಿದ್ದಾರೆ.ನಗರದ ಬಾಲಭವನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆಯಿಂದ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ಸಹಕಾರ ಕ್ಷೇತ್ರದಲ್ಲಿ ಯಾರೂ ಸಹ ಮೂಗು ತೂರಿಸಬಾರದು ಎಂದು ಹೇಳುತ್ತಾರೆ. ಆದರೆ ಎಲ್ಲಾ ರಂಗದಲ್ಲಿಯೂ ಒಂದಲ್ಲ ಒಂದು ರೀತಿಯ ರಾಜಕಾರಣ ಇರುತ್ತದೆ. ಇದರಿಂದ ಯಾವುದೇ ರಂಗ ಹೊರತಾಗಿಲ್ಲ ಎಂದು ಮನುಮುತ್ತಪ್ಪ ನುಡಿದರು.
ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ರಾಜ್ಯದಲ್ಲಿ ಬಲಿಷ್ಠವಾಗಿದೆ. ಹಲವು ಸಹಕಾರ ಸಂಘಗಳನ್ನು ಕಟ್ಟುವಲ್ಲಿ ಹಿರಿಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆದರೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಮೀನ-ಮೇಷ ಎಣಿಸುತ್ತಾರೆ ಎಂದು ಮನುಮುತ್ತಪ್ಪ ಅವರು ಬೇಸರ ವ್ಯಕ್ತಪಡಿಸಿದರು.ಹಿರಿಯ ಸಹಕಾರಿ ರಾಣಿ ಮಾಚಯ್ಯ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸಹಕಾರ ಸಂಘಗಳನ್ನು ಹಿರಿಯರು ಉಳಿಸಿ, ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಸಹಕಾರ ಸಂಘಗಳನ್ನು ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಸಾಧಿಸುವತ್ತ ಗಮನಹರಿಸಬೇಕು ಎಂದರು.
ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಸೇರಿದಂತೆ ಕಲೆ, ಸಾಹಿತ್ಯ, ಜಾನಪದ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಇಲ್ಲಿನ ಕಲೆ, ಸಂಸ್ಕೃತಿ, ಪರಂಪರೆಗೆ ಒತ್ತು ನೀಡಲು ಶ್ರಮಿಸಲಾಗಿದೆ. ಎಲ್ಲರ ಸಹಕಾರದಿಂದ ಇಂತಹ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಯಿತು ಎಂದು ಸ್ಮರಿಸಿದರು.ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್ ಕುಮಾರ್ ಮಾತನಾಡಿ, ಸಹಕಾರ ಸಂಘಗಳ ಮಹತ್ವದ ಬಗ್ಗೆ ಮಾಹಿತಿ ನೀಡುವಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಚಿಂತನ-ಮಂಥನ ನಡೆಯಬೇಕು ಎಂದರು.
ಇಂದಿನ ಜಾಗತಿಕ ಯುಗದಲ್ಲಿ ಸಹಕಾರ ಸಂಘಗಳು ಮತ್ತಷ್ಟು ಬಲಯುತವಾಗಬೇಕು. ಸಹಕಾರ ಸಂಘಗಳ ಉಳಿವಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.ಕೆಐಸಿಎಂ ನಿವೃತ್ತ ಪ್ರಾಂಶುಪಾಲ ಎಂ.ಎಂ.ಶ್ಯಾಮಲ ಸಹಕಾರ ಕ್ಷೇತ್ರದ ಮಹತ್ವ ಕುರಿತು ಮಾತನಾಡಿದರು.
ಕೊಡಗು ಜಿಲ್ಲೆಯ ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿಯನ್ನು ನಂದಿನೆರವಂಡ ರವಿ ಬಸಪ್ಪ, ಕಾಯಪಂಡ ಟಾಟ ಚಂಗಪ್ಪ, ಪಾಸುರ ಎನ್.ಉತ್ತಪ್ಪ, ಹಾಗೂ ಶ್ರೇಷ್ಠ ಮಹಿಳಾ ಸಹಕಾರಿ ಮೊಳ್ಳೆರ ಸರಸು ಪೊನ್ನಪ್ಪ ಅವರನ್ನು ಗೌರವಿಸಲಾಯಿತು.ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷ ಪಟ್ಟಡ ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕ ಬಿದ್ದಾಟಂಡ ರಮೇಶ್ ಚಂಗಪ್ಪ, ಪಿ.ಸಿ.ಅಚ್ಚಯ್ಯ, ಪ್ರೇಮ ಸೋಮಯ್ಯ, ಕೋಡಿರ ಎಂ.ತಮ್ಮಯ್ಯ, ವಿ.ಕೆ.ಅಜಯ್ ಕುಮಾರ್, ಪಿ.ಬಿ.ಯತೀಶ್, ಎ.ಎಸ್.ಶ್ಯಾಮ್ ಚಂದ್ರ, ಎನ್.ಎರ್ಯಾಲಿ ಮಾದಯ್ಯ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಶೈಲಜಾ, ಮತ್ತಿತರರು ಇದ್ದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರೂಪಿಸಿ, ವಂದಿಸಿದರು, ಮಂಜುಳಾ ಪ್ರಾರ್ಥಿಸಿದರು.