ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲು ಮಸೂದೆಗೆ ಸೋಲಾಗುವಂತೆ ನೋಡಿಕೊಳ್ಳುವ ಮೂಲಕ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶದ ಮಹಿಳೆಯರಿಗೆ ಅವಮಾನ ಮಾಡಿವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಆರೋಪಿಸಿದ್ದಾರೆ.
ಮಡಿಕೇರಿ: ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲು ಮಸೂದೆಗೆ ಸೋಲಾಗುವಂತೆ ನೋಡಿಕೊಳ್ಳುವ ಮೂಲಕ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶದ ಮಹಿಳೆಯರಿಗೆ ಅವಮಾನ ಮಾಡಿವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ ಆರೋಪಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೯ರ ಲೋಕಸಭಾ ಚುನಾವಣೆ ಸಂದರ್ಭ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.೩೩ ರಷ್ಟು ಮೀಸಲಾತಿ ಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಉತ್ತಮ ಮಸೂದೆ ಮಂಡಿಸಿತ್ತು. ಮಹಿಳೆಯರಿಗೆ ಹೆಚ್ಚಿನ ಸ್ಥಾನ ಮಾನ ನೀಡಲು, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹೆಚ್ಚಿಸಲು ಸಹಕಾರಿ ಆಗಿದ್ದ ಈ ಮಸೂದೆಯನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ಹೇಳಿದರು.ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ಮಹಿಳೆಯರನ್ನು ಬಳಸಿಕೊಳ್ಳುತ್ತಿದೆ. ಆದರೆ ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ವಿಷಯ ಬಂದಾಗ ವಿಭಿನ್ನ ನಡೆ ಪ್ರದರ್ಶಿಸಿದೆ. ಇದಕ್ಕೆ ತಕ್ಕ ಉತ್ತರ ದೇಶದ ಜನತೆ ನೀಡುತ್ತಾರೆ. ಯಾವತ್ತಿದ್ದರೂ ಈ ಮಸೂದೆ ಮಂಡನೆ ಆಗಲೇಬೇಕು ಎಂದರು.
40 ವರ್ಷಗಳ ಬೇಡಿಕೆ: ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿ, ಜನಸಂಖ್ಯೆಯ ಶೇ.೫೦ರಷ್ಟು ಇರುವ ಮಹಿಳೆಯರಿಗೆ ಲೋಕಸಭೆಯಲ್ಲಿ ಶೇ.೩೩ರಷ್ಟು ಸ್ಥಾನ ನೀಡಬೇಕು ಎನ್ನುವುದು ೪೦ ವರ್ಷಗಳಷ್ಟು ಹಳೇ ಬೇಡಿಕೆ. ದೇವೇಗೌಡ ಪ್ರಧಾನಿ ಆಗಿದ್ದಾಗಲೇ ಈ ಸಂಬಂಧ ಪ್ರಯತ್ನ ನಡೆದಿತ್ತು. ಆದರೆ ಆಗಲೂ ಕಾಂಗ್ರೆಸ್ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ನಂತರ ಒಂದಲ್ಲಾ ಒಂದು ಕಾರಣಕ್ಕೆ ಈ ಮಸೂದೆ ಮುಂದಕ್ಕೆ ಹೋಗುತ್ತಲೇ ಇದೆ ಎಂದರು. ಪ್ರತಿಪಕ್ಷಗಳ ಎಲ್ಲಾ ಸಂಶಯಗಳಿಗೂ ಸರ್ಕಾರದಿಂದ ಸಕಾರಾತ್ಮಕ ಉತ್ತರ ಸಿಕ್ಕಿದರೂ ಮಸೂದೆ ವಿಷಯದಲ್ಲಿ ರಾಜಕೀಯ ಮಾಡಲಾಗಿದೆ. ಸಂವಿಧಾನ ತಿದ್ದುಪಡಿಗೆ ಅವಕಾಶ ಮಾಡಿಕೊಡದಿರುವ ಮೂಲಕ ಸ್ತ್ರೀಯರಿಗೆ ಅವಮಾನ ಮಾಡಲಾಗಿದೆ. ಕಾಂಗ್ರೆಸ್ ಮಸೂದೆಯನ್ನು ತಿರಸ್ಕರಿಸುತ್ತಾ ಬರುತ್ತಿದ್ದರೂ ಕಾರಣ ಕೊಟ್ಟಿಲ್ಲ. ವಿರೋಧ ಪಕ್ಷಗಳು ದೇಶವನ್ನು ಉತ್ತರ ಭಾರತ, ದಕ್ಷಿಣ ಭಾರತ ಎಂದು ಒಡೆಯಲು ಹೊರಟಿದ್ದಾರೆ. ಜನರ ಬಳಿಗೆ ತೆರಳಿ ಸತ್ಯಾಂಶದ ಮಾಹಿತಿ ನೀಡಲಾಗುವುದು ಎಂದರು.ಪಕ್ಷದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌಮ್ಯ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ ಸುದ್ದಿಗೋಷ್ಠಿಯಲ್ಲಿದ್ದರು.ಬಾಕ್ಸ್ಸಶೀಘ್ರ ಚುನಾವಣೆ ಆಗ್ರಹಿಸಿ ೨೪ರಂದು ಪ್ರತಿಭಟನೆ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಮೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿಗಳ ಕಚೇರಿ ಮುಂದೆ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು. ಏ.೨೪ರಂದು ಮಡಿಕೇರಿ ತಾಲೂಕು ಪಂಚಾಯಿತಿ, ಏ.೨೭ರಂದು ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಇಒ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಅಧಿಕಾರ ವಿಕೇಂದ್ರೀಕರಣ ನೀತಿಯನ್ನು ಬುಡಮೇಲು ಮಾಡುತ್ತಿದೆ ಎಂದು ನಾಪಂಡ ರವಿಕಾಳಪ್ಪ ಆರೋಪಿಸಿದರು.