ಮಡಿಕೇರಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ ಅಂತ್ಯ

| Published : Mar 14 2024, 02:01 AM IST

ಸಾರಾಂಶ

ಡಿಸೆಂಬರ್ ತಿಂಗಳ ವೇತನ ಬುಧವಾರ ಪಾವತಿಸಲಾಗಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಧರ್ಮ ಅವರ ಕೋರಿಕೆಯ ಮೇರೆಗೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಧರಣಿಯನ್ನು ಹಿಂತೆಗೆದುಕೊಳ್ಳುವುದೆಂದು ಮಡಿಕೇರಿಯಲ್ಲಿ ಧರಣಿ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರು ನಿರ್ಧರಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ ಬಾಕಿ ವೇತನಕ್ಕೆ ಆಗ್ರಹಿಸಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಬುಧವಾರ ಹಿಂಪಡೆಯಲಾಯಿತು‌. ಡಿಸೆಂಬರ್ ತಿಂಗಳ ವೇತನ ಬುಧವಾರ ಪಾವತಿಸಲಾಗಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಧರ್ಮ ಅವರ ಕೋರಿಕೆಯ ಮೇರೆಗೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಧರಣಿಯನ್ನು ಹಿಂತೆಗೆದುಕೊಳ್ಳುವುದೆಂದು ತೀರ್ಮಾನಿಸಲಾಯಿತು. ಈ ಪ್ರತಿಭಟನೆ ಸಂದರ್ಭ ಅತಿಥಿ ಉಪನ್ಯಾಸಕರಿಗೆ ಹಲವು ಸಂಘ ಸಂಸ್ಥೆಗಳು ನೈತಿಕ ಮತ್ತು ಪ್ರತ್ಯಕ್ಷ ಬೆಂಬಲ ನೀಡಿದನ್ನು ಸ್ಮರಿಸಿದ ಡಾ. ಸೋಮಣ್ಣ ಅವರು ಅತಿಥಿ ಉಪನ್ಯಾಸಕರ ಪರವಾಗಿ ಧರಣಿ ಹಿಂತೆಗೆದುಕೊಳ್ಳುವ ಕುರಿತು ತೀರ್ಮಾನಿಸಲಾಗಿದೆ. ಎಂದು ಹೇಳಿಕೆ ನೀಡಿದರು. ಮುಂದಿನ ದಿನಗಳಲ್ಲಿ ನಮ್ಮ ಉಳಿದ ಬೇಡಿಕೆಗಳನ್ನು ವಿಶ್ವವಿದ್ಯಾನಿಲಯವು ಬಹುಬೇಗ ಈಡೇರಿಸಬಹುದೆಂಬ ಆಶಾಭಾವನೆಯನ್ನು ಉಪನ್ಯಾಸಕರು ವ್ಯಕ್ತಪಡಿಸಿದ್ದಾರೆ.

ಹನ್ನೊಂದು ದಿನ ಪೂರೈಸಿದ ಅತಿಥಿ ಉಪನ್ಯಾಸಕ ಪ್ರತಿಭಟನೆ

ಬಾಕಿ ವೇತನ ಪಾವತಿಗಾಗಿ ಆಗ್ರಹಿಸಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಹನ್ನೊಂದನೆಯ ದಿನ ಪೂರೈಸಿತು.ತರಗತಿ ಬಹಿಷ್ಕಾರ ಮಾಡಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಇನ್ನೂ ಕೂಡ ಬಾಕಿ ವೇತನ ಪಾವತಿಯಾಗಿಲ್ಲ. ಇದರಿಂದ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಕಡೆಯಲ್ಲಿ ವಿದ್ಯಾರ್ಥಿಗಳಿಗೂ ಕೂಡ ತರಗತಿ ನಡೆಯದೆ ಸಮಸ್ಯೆ ಎದುರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಮತ್ತು ಪದಾಧಿಕಾರಿಗಳು ಹಾಜರಿದ್ದರು.

ಪೋಸ್ಟರ್ ಬಿಡುಗಡೆ;ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಇವರ ಸಹಯೋಗದಲ್ಲಿ ‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟರಾಜ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಬಿಡುಗಡೆಗೊಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಮಹಿಳೋದಯ ಒಕ್ಕೂಟದ ಸಂಚಾಲಕಿ ಜಾಯ್ಸಿ ಮೆನೆಜಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.