, ಮಾಘ ಶುದ್ಧ ಹುಣ್ಣಿಮೆಯಂದು ಇಲ್ಲಿನ ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಶ್ರೀ ನಿಮಿಷಾಂಬ ದೇವಿ ದರ್ಶನ ಪಡೆದರೆ ಇಷ್ಟಾರ್ಥ ಸಿದ್ಧಿಸುವ ನಂಬಿಕೆಯಿದ್ದು, ಬರುವ ಭಕ್ತರಿಗೆ ಸೂಕ್ತ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಅಂದು ಮಧ್ಯ ರಾತ್ರಿ 2 ಗಂಟೆಯಿಂದಲೇ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಗಂಜಾಂ ಶ್ರೀ ನಿಮಿಷಾಂಬ ದೇಗುಲದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 1 ಲಕ್ಷಕ್ಕೂ ಹೆಚ್ಚಿನ ಭಕ್ತರು ರಾಜ್ಯದ ವಿವಿಧೆಡೆಗಳಿಂದ ಆಗಮಿಸುವ ನಿರೀಕ್ಷೆಯಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್.ಎನ್ ದಯಾನಂದ ತಿಳಿಸಿದರು.

ದೇವಾಲಯದ ಬಳಿ ಮಾಘ ಶುದ್ಧ ಹುಣ್ಣಿಮೆ ಪೂರ್ವ ಸಿದ್ಧತೆಗಳ ಕುರಿತು ಮಾತನಾಡಿ, ಮಾಘ ಶುದ್ಧ ಹುಣ್ಣಿಮೆಯಂದು ಇಲ್ಲಿನ ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಶ್ರೀ ನಿಮಿಷಾಂಬ ದೇವಿ ದರ್ಶನ ಪಡೆದರೆ ಇಷ್ಟಾರ್ಥ ಸಿದ್ಧಿಸುವ ನಂಬಿಕೆಯಿದ್ದು, ಬರುವ ಭಕ್ತರಿಗೆ ಸೂಕ್ತ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಅಂದು ಮಧ್ಯ ರಾತ್ರಿ 2 ಗಂಟೆಯಿಂದಲೇ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ವಿಶೇಷ ಪೂಜೆಗಳೊಂದಿಗೆ ಹೋಮ- ಹವನ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಫೆ.1 ರ ಮಧ್ಯ ರಾತ್ರಿ 1 ಗಂಟೆಯಿಂದಲೇ ಇಲ್ಲಿನ ಕಾವೇರಿ ನದಿಯಲ್ಲಿ ಭಕ್ತರಿಗೆ ಮಾಘ ಶುದ್ಧ ಸ್ನಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಫೆ.2ರ ರಾತ್ರಿ 10 ಗಂಟೆಯವರೆಗೂ ಮಾಘ ಶುದ್ಧ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬರುವ ಭಕ್ತರಿಗೆ ಸೂಕ್ತ ಮೂಲ ಸೌಲಭ್ಯಗಳನ್ನು ಕಲ್ಪಿಸುತ್ತಿರುವುದಾಗಿ ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾವೇರಿ ನದಿಯಲ್ಲಿ ಮಧ್ಯರಾತ್ರಿಯಿಂದಲೇ ಸ್ನಾನ ಮಾಡಲು ಹಾಗೂ ಬಟ್ಟೆ ಬದಲಿಸಿಕೊಳ್ಳಲು ನದಿ ತೀರದಲ್ಲಿ ಬ್ಯಾರಿಕೇಡ್‌ಗಳ ನಿರ್ಮಿಸಿ ಸಿದ್ಧತೆಗಳ ಅಗತ್ಯ ಕ್ರಮಕೈಗೊಳ್ಳಲಾಗಿದೆ. ನದಿ ಪಾತ್ರದಲ್ಲಿ ಮುಂಜಾಗ್ರತ ಕ್ರಮವಾಗಿ ಅಗ್ನಿ ಶಾಮಕ ದಳ ನಿಯೋಜನೆ, ವಿದ್ಯುತ್ ದೀಪಗಳ ವ್ಯವಸ್ಥೆ ಹಾಗೂ ವಾಹನಗಳ ನಿಲುಗಡೆಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ, ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡದಂತೆ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ.

ಅನಗತ್ಯ ನೂಕು ನುಗ್ಗಲು ತಡೆಯಲು ಬ್ಯಾರಿಗೇಟ್ ವ್ಯವಸ್ಥೆ, ಸೂಕ್ತ ಸ್ಥಳಗಳಲ್ಲಿ ಆರಕ್ಷಕ ಸಿಬ್ಬಂದಿಯನ್ನು ನೇಮಿಸಿ ಬಿಗಿ ಪೊಲೀಸ್ ಬಂದೋಬಸ್ತ್, ಜೊತೆಗೆ ಭಕ್ತರಿಗೆ ಪ್ರಸಾದ, ಕುಡಿಯುವ ನೀರು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಭಕ್ತರಿಗೆ ವಿತರಿಸಲು 1 ಲಕ್ಷ ಲಾಡು ತಯಾರಿಸಲಾಗಿದೆ. ಅಂದು ಪ್ರತಿ ವರ್ಷದಂತೆ ಬೆಂಗಳೂರಿನ ದಾನಿಯೊಬ್ಬರು ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ ಹಾಗೂ ಸಂಜೆ ತಿಂಡಿ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ. ಅಲ್ಲದ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ದೇವಾಲಯದವರೆಗೆ ಸರ್ಕಾರಿ ಬಸ್ ಸೌಲಭ್ಯಗಳನ್ನು ಒದಗಿಸುತ್ತಿರುವುದಾಗಿ ಹೇಳಿದರು.

ಫೆ.1ರ ಸಂಜೆಯಿಂದಲೇ ಸ್ಥಳೀಯ ಹಾಗೂ ನುರಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದೇವಾಲಯದ ಮುಂಭಾಗದ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಭಕ್ತಿ ಗೀತೆ, ಸುಗಮ ಸಂಗೀತ, ಭಜನೆ, ಹರಿಕಥೆ, ಭರತನಾಟ್ಯ ಸೇರಿದಂತೆ ವಿವಿಧ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

ಅಂದು ರಾತ್ರಿಯಿಂದಲೇ ದೇವಿಗೆ ವಿಶೇಷ ಅಲಂಕಾರದೊಂದಿಗೆ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ, ಪೂರ್ವಕ ಮಹಾಭಿಷೇಕ, ಗಣಕಹೋಮ, ನಕ್ಷತ್ರಹೋಮ, ದುರ್ಗಾಹೋಮ, ಸತ್ಯನಾರಾಯಣ ಪೂಜೆ ಸೇರಿದಂತೆ ವಿಶೇಷ ಪೂಜೆಗಳನ್ನು ಲೋಕ ಕಲ್ಯಾಣಾರ್ಥ ಏರ್ಪಡಿಸಲಾಗಿದೆ. ಪೂಜಾ ಕಾರ್ಯಗಳು ನಡೆದ ನಂತರ ಮಹಾ ಮಂಗಳಾರತಿ ಮಾಡಿ ಬಳಿಕ ಜೊತೆಗೆ ಬರುವ ಎಲ್ಲಾ ಭಕ್ತರಿಗೂ ಪ್ರಸಾದ ವಿತರಣೆಯಾಗಲಿದೆ ಎಂದು ದೇವಾಲಯದ ಇಒ ಮಹೇಶ್ ಮಾಹಿತಿ ನೀಡಿದರು.

ನಿಮಿಷಾಂಬ ದೇಗುಲದಲ್ಲಿ ಫೆ.1 ರಂದು ನಡೆಯುವ ಮಾಘ ಶುದ್ಧ ಪೌರ್ಣಮಿ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆಯಿದೆ. ಜಿಲ್ಲಾಡಳಿತ ಹಾಗೂ ಕ್ಷೇತ್ರದ ಶಾಸಕರ ಸಹಕಾರದೊಂದಿಗೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ದಯಾನಂದ್ , ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ.