ವಾರದಲ್ಲಿ ಮ್ಯಾಜಿಸ್ಟ್ರೇಟ್‌ ‘ಕಪ್‌’ತುಳಿತ ತನಿಖಾ ವರದಿ

| N/A | Published : Jun 18 2025, 12:43 AM IST / Updated: Jun 18 2025, 12:11 PM IST

ವಾರದಲ್ಲಿ ಮ್ಯಾಜಿಸ್ಟ್ರೇಟ್‌ ‘ಕಪ್‌’ತುಳಿತ ತನಿಖಾ ವರದಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ), ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ (ಡಿಎನ್‌ಎ) ಸಂಸ್ಥೆಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

  ಬೆಂಗಳೂರು :  ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ), ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ (ಡಿಎನ್‌ಎ) ಸಂಸ್ಥೆಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಪ್ರಕರಣದ ಸಂಬಂಧ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ ಅವರ ನೇತೃತ್ವದ ವಿಭಾಗೀಯ ಪೀಠ, ಕೆಎಸ್‌ಸಿಎ, ಡಿಎನ್‌ಎ ಮತ್ತು ಆರ್‌ಸಿಬಿಯನ್ನು ಪ್ರತಿವಾದಿಯನ್ನಾಗಿಸಿ, ನೋಟಿಸ್‌ ಜಾರಿ ಮಾಡಲು ರಿಜಿಸ್ಟ್ರಿಗೆ ನಿರ್ದೇಶಿಸಿತು. ಜೊತೆಗೆ, ಸೂಕ್ತ ಸಂದರ್ಭದಲ್ಲಿ ಪ್ರಕರಣದಲ್ಲಿ ಅಮಿಕಸ್‌ ಕ್ಯೂರಿಯನ್ನು (ಕೋರ್ಟ್‌ ಸಹಾಯಕರು) ನೇಮಕ ಮಾಡಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಜೂ.23ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಪರ ಅಡ್ವೋಕೆಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಹಾಜರಾಗಿ, ಈವರೆಗಿನ ಪ್ರಕರಣದ ತನಿಖೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದ ನಂತರ, ಈಗ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆ. ಮ್ಯಾಜಿಸ್ಟೀರಿಯಲ್‌ ತನಿಖಾ ವರದಿ ವಾರದಲ್ಲಿ ಬರಲಿದೆ. 25 ದಿನಗಳಲ್ಲಿ ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಕುನ್ಹಾ ಅವರ ನೇತೃತ್ವದ ವಿಚಾರಣಾ ಆಯೋಗದ ವರದಿ ಸಲ್ಲಿಕೆ ಆಗಲಿದೆ. ಕೆಲವು ಮಾಹಿತಿ ನೀಡಿದ್ದೇವೆ. ಅವುಗಳು ಮಾಧ್ಯಮದಲ್ಲಿ ಪ್ರಕಟವಾಗಿ ಪೂರ್ವಾಗ್ರಹ ಉಂಟಾಗುವುದು ಬೇಕಾಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಪರಿಹಾರ ಹೆಚ್ಚಳ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿರುವ ಸಂತ್ರಸ್ತರೊಬ್ಬರ ಪರ ವಕೀಲರು ವಾದಿಸಿ, ಮುಚ್ಚಿದ ಲಕೋಟೆಯ ವರದಿಯನ್ನು ಬಹಿರಂಗಪಡಿಸಬೇಕು. ಈ ವಿಚಾರದಲ್ಲಿ ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದರು.

ವಕೀಲ ಜಿ.ಆರ್‌.ಮೋಹನ್‌ ಅವರು, ಮೂರು ರೀತಿಯ ತನಿಖೆಗಳು ನಡೆಯುತ್ತಿವೆ. ಆದರೆ, ಒಂದೇ ಒಂದು ವರದಿಯೂ ನ್ಯಾಯಾಲಯದ ಮುಂದೆ ಬಂದಿಲ್ಲ. ದುರ್ಘಟನೆಯ ದಿನ ಎಷ್ಟು ಮುಂದೆ ಕ್ರೀಡಾಂಗಣದ ಮುಂದೆ ಇದ್ದರು ಎಂಬ ಮಾಹಿತಿ ಇಲ್ಲ. ಸಂಪೂರ್ಣವಾಗಿ ಅಂದು ಗುಪ್ತದಳ ವಿಫಲವಾಗಿತ್ತು ಎಂದು ತಿಳಿಸಿದರು. ಅಂತಿಮವಾಗಿ ನ್ಯಾಯಪೀಠವು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎಗೆ ಸೂಚಿಸಿ ವಿಚಾರಣೆ ಮಂದೂಡಿತು.

Read more Articles on