ನಗರದಲ್ಲಿ ಉದ್ಯಾನವನಗಳು ಸ್ವಚ್ಛವಾಗಿದ್ದರೆ ಅಲ್ಲಿನ ಸುತ್ತಮುತ್ತಲಿನ ಪರಿಸರ ಚೆನ್ನಾಗಿರುತ್ತದೆ. ಈ ನಿಟ್ಟಿನಲ್ಲಿ ಘನ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಕಾರ್ಯ ಅತಿಮುಖ್ಯವಾಗಿದೆ.

ಗದಗ: ನಗರದ ಸ್ವಚ್ಛತೆ ಹಾಗೂ ಸೌಂದರ್ಯ ಕಾಪಾಡಿದರೆ ಪರಿಸರ ರಕ್ಷಣೆಯೊಂದಿಗೆ ಆರೋಗ್ಯಕರ ವಾತಾವರಣ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಸ್ವಚ್ಛ ಭಾರತ ಅಭಿಯಾನದಡಿ ಘನತ್ಯಾಜ್ಯ ನಿರ್ವಹಣೆ ಕುರಿತು ನಡೆದ ಒಂದು ದಿನದ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನಗರದಲ್ಲಿ ಉದ್ಯಾನವನಗಳು ಸ್ವಚ್ಛವಾಗಿದ್ದರೆ ಅಲ್ಲಿನ ಸುತ್ತಮುತ್ತಲಿನ ಪರಿಸರ ಚೆನ್ನಾಗಿರುತ್ತದೆ. ಈ ನಿಟ್ಟಿನಲ್ಲಿ ಘನ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಕಾರ್ಯ ಅತಿಮುಖ್ಯವಾಗಿದೆ. ನಮ್ಮ ಮನೆಯ ಒಳಗಡೆ ಹೇಗೆ ನಾವು ಸ್ವಚ್ಛತೆ ಕಾಯ್ದುಕೊಳ್ಳುತ್ತೇವೆಯೋ ಹಾಗೆಯೇ ಸಾರ್ವಜನಿಕ ಸ್ಥಳಗಳನ್ನು ಸಹ ಸ್ವಚ್ಛವಾಗಿಟ್ಟುಕೊಳ್ಳಲು ಶ್ರಮಿಸಬೇಕು. ಸ್ವಚ್ಛತೆಗೆ ಆದ್ಯತೆ ಕೊಟ್ಟು ಪರಿಸರ ಮಾಲಿನ್ಯವನ್ನು ತಡೆಗಟ್ಟಿ ನಗರವನ್ನು ಅಭಿವೃದ್ಧಿಪಡಿಸಲು ಕ್ರಮ ವಹಿಸಬೇಕೆಂದರು. ನಗರಸಭೆ ಸದಸ್ಯ ಎಲ್.ಡಿ. ಚಂದಾವರಿ ಮಾತನಾಡಿ, ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾರ್ವಜನಿಕರ ಪಾತ್ರವು ಮಹತ್ವದ್ದಾಗಿದೆ. ನಗರದ ಸ್ವಚ್ಛತೆ ಕಾಪಾಡುವುದು ಸ್ವಚ್ಛತಾ ಸಿಬ್ಬಂದಿಯವರೊಂದಿಗೆ ಸಾರ್ವಜನಿಕರ ಜವಾಬ್ದಾರಿಯೂ ಆಗಿರುತ್ತದೆ. ಕಾಲೇಜುಗಳಲ್ಲಿ ತ್ಯಾಜ್ಯವಸ್ತುಗಳ ನಿರ್ವಹಣೆ ಹಾಗೂ ವಿಲೇವಾರಿ ಕುರಿತು ತಿಳಿವಳಿಕೆ ಕಾರ್ಯಕ್ರಮ ಆಯೋಜಿಸಬೇಕು ಎಂದರು.ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಮಾತನಾಡಿ, ಘನತ್ಯಾಜ್ಯ ನಿರ್ವಹಣಾ ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳಬೇಕು. ಕಮ್ಯುನಿಟಿ ಮೊಬೈಲೈಜರ್‌ಗಳು ವಾರ್ಡವಾರು ಮಾಹಿತಿಯನ್ನು ಅಪ್‌ಡೇಟ್ ಮಾಡುತ್ತಾರೆ. ಅವರ ಸಲಹೆಗಳೊಂದಿಗೆ ಸ್ಯಾನಿಟರಿ ಸೂಪರ್‌ವೈಜರ್ಸ್ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ನಗರವನ್ನು ಮೂಲ ಸೌಕರ್ಯಗಳೊಂದಿಗೆ ಸ್ವಚ್ಛ ನಗರವನ್ನಾಗಿಸಲು ಎಲ್ಲರೂ ಸಹಕರಿಸಬೇಕೆಂದರು.

ನಗರಸಭೆ ಸದಸ್ಯರಾದ ಮಹಾಂತೇಶ ನಲವಡಿ, ಸುನಂದಾ ಬಾಕಳೆ, ಶಕುಂತಲಾ ಅಕ್ಕಿ, ಲಕ್ಷ್ಮೀ ಖಾಕಿ, ಮೆಹಬೂಬಸಾಬ ನದಾಫ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಸೇರಿದಂತೆ ಇತರರು ಇದ್ದರು. ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ(ಪರಿಸರ) ಆನಂದ ಬದಿ ನಿರೂಪಿಸಿ, ವಂದಿಸಿದರು.