ಸಮರ್ಪಕವಾದ ಯೋಜನೆ ರೂಪಿಸಿಕೊಂಡು ಗುರಿ ಸಾಧಿಸಿ

| Published : Jan 04 2025, 12:33 AM IST

ಸಾರಾಂಶ

ಶಿವಮೊಗ್ಗ: ಎಲ್ಲ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಗುರಿ, ಕನಸು ಮತ್ತು ಪ್ರತಿಭೆಗಳು ಇರುತ್ತವೆ. ಸಮರ್ಪಕವಾದ ಯೋಜನೆ ರೂಪಿಸಿಕೊಂಡು ಅವುಗಳನ್ನು ಸಾಧಿಸಬೇಕು ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಹೇಳಿದರು.

ಶಿವಮೊಗ್ಗ: ಎಲ್ಲ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಗುರಿ, ಕನಸು ಮತ್ತು ಪ್ರತಿಭೆಗಳು ಇರುತ್ತವೆ. ಸಮರ್ಪಕವಾದ ಯೋಜನೆ ರೂಪಿಸಿಕೊಂಡು ಅವುಗಳನ್ನು ಸಾಧಿಸಬೇಕು ಎಂದು ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಹೇಳಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ 10ನೇ ಅಂತರ ಮಹಾವಿದ್ಯಾಲಯಗಳ ಯುವ ಜನೋತ್ಸವ 2024-25 ''''''''ಯುವ ಸವಿಷ್ಕಾರ'''''''' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂತರ ಕಾಲೇಜಿನ ಯುವ ಜನೋತ್ಸವ ಒಂದು ವಿಶೇಷವಾದ ಮತ್ತು ಅಪರೂಪದ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿನ ವಿವಿಧ ರೀತಿಯ ಪ್ರತಿಭೆ ಅನಾವರಣಗೊಳಿಸಲು ಇದು ಸೂಕ್ತ ವೇದಿಕೆ ಎಂದರು.

ವಿದ್ಯಾರ್ಥಿಗಳಿಗೆ ಈಗ ಗುರು ಇದ್ದಾರೆ. ತಮ್ಮದೇ ಗುರಿ ಇಟ್ಟುಕೊಂಡು ಅದನ್ನು ಸಾಧಿಸುವೆಡೆ ಗಮನ ಹರಿಸಬೇಕು. ತಂದೆ ತಾಯಿಗಳು, ಶಿಕ್ಷಕರು ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಕನಸು ಕಟ್ಟಿರುತ್ತಾರೆ. ಈ ನಿಟ್ಟಿನಲ್ಲಿ ಹೆಮ್ಮೆ ಪಡುವಂತಹ ಸಾಧನೆ ಮಾಡಿರಿ. ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಬಹುದು. ಕೃಷಿಯಲ್ಲಿ ಸಹ ಉತ್ತಮ ಸಾಧನೆ ತೋರಬಹುದು. ವಿದ್ಯಾರ್ಥಿಗಳು ತಮ್ಮ ಕನಸು ಮತ್ತು ಗುರಿ ಸಾಧಿಸಲು ದೃಢ ಹೆಜ್ಜೆಗಳನ್ನು ಇಡಬೇಕು ಎಂದು ತಿಳಿಸಿದರು.

ಚಲನಚಿತ್ರ ನಟ ಭದ್ರಾವತಿಯ ದಿಲೀಪ್ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಓದು ಮುಖ್ಯ. ಆದರೆ ಪ್ರತಿಭೆ ಅನಾವರಣ ಸಹ ಬಹಳ ಮುಖ್ಯ. ನಮ್ಮನ್ನು ನಾವು ಸಮಾಜದಲ್ಲಿ ಒಂದಿಲ್ಲೊಂದು ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಹಗಲು ರಾತ್ರಿ ಶ್ರಮಿಸಬೇಕು. ನಮ್ಮ ಕನಸು, ಗುರಿ ತಲುಪುವವರೆಗೆ ನಿಲ್ಲಬಾರದು ಎಂದು ಕರೆ ನೀಡಿದರು.

ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಉತ್ತಮ ಕೃಷಿ ಮಾಡಬಹುದು ಎಂದು ತಾವು ನೆದರ್‌ಲ್ಯಾಂಡ್‌ನಲ್ಲಿ ಕಂಡ ಮಾದರಿ ಕೃಷಿ ಬಗ್ಗೆ ಉಲ್ಲೇಖಿಸಿದರು.

ಶಿಕ್ಷಣ ತಜ್ಞರು ಮತ್ತು ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ.ಪಿ.ಕೆ.ಬಸವರಾಜ ಅವರು ಯುವ ಸವಿಷ್ಕಾರದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಮನೋಭಾವದಿಂದ ಮತ್ತು ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.

ಕೃಷಿ ಉದ್ದಿಮೆದಾರ ಮತ್ತು ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ.ಬಿ.ಕೆ.ಕುಮಾರಸ್ವಾಮಿ ಮಾತನಾಡಿ, ಹಿಂದೆಲ್ಲ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳ ಉತ್ಸಾಹ ಬಹಳ ಇತ್ತು. ಈಗಲೂ ಅದು ಕಡಿಮೆ ಆಗಬಾರದು. ಸಾಮಾಜಿಕ ಜಾಲತಾಣಗಳಿಂದ ವಿದ್ಯಾರ್ಥಿಗಳು ದೂರ ಇದ್ದು, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮನಸ್ಸು ಹಾಗೂ ದೇಹವನ್ನು ಸದೃಢಗೊಳಿಸುತ್ತದೆ ಜೊತೆಗೆ ಸಾಧನೆಗೆ ಸಹಕಾರಿಯಾಗಿದೆ. ಆದ್ದರಿಂದ ನಿರ್ಲಕ್ಷ್ಯ ವಹಿಸದೇ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ ಮಾತನಾಡಿ, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಮಾಡಬೇಕು. ವಿದ್ಯಾರ್ಥಿಗಳು ಪ್ರತಿ ವಿಭಾಗದಲ್ಲಿ ಉತ್ಕೃಷ್ಟತೆ ತೋರಬೇಕು ಎಂದರು.

ಎಲ್ಲರಲ್ಲಿ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ವಿಶ್ವವಿದ್ಯಾಲಯ ಎಲ್ಲ ವಿಭಾಗಗಳಲ್ಲಿ ಜಾಗರೂಕತೆಯಿಂದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ವಿಶ್ವವಿದ್ಯಾಲಯಕ್ಕೆ ಕೃಷಿಕರು ಮತ್ತ ವಿದ್ಯಾರ್ಥಿಗಳು ಮುಖ್ಯ ಅಂಗವಾಗಿದೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರತರುವುದು ವಿಶ್ವವಿದ್ಯಾಲಯದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಮಾಜಿ ಕುಲಪತಿ ಡಾ.ವಾಸುದೇವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡೀನ್ (ವಿದ್ಯಾರ್ಥಿ ಕಲ್ಯಾಣ) ಡಾ.ಎನ್.ಎಸ್.ಮಾವರ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡೀನ್ (ಕೃಷಿ) ಡಿ.ತಿಪ್ಪೇಶ್, ಶಿಕ್ಷಣ ನಿರ್ದೇಶಕ ಹೇಮ್ಲಾನಾಯ್ಕ, ಡಾ.ಧನಂಜಯ ನಾಯಕ್, ಡಾ.ಶಶಿಧರ್, ಡಾ.ದುಷ್ಯಂತ ಕುಮಾರ್, ಡಾ.ಬಿ.ಕೆ.ಶಿವಣ್ಣ ಮತ್ತಿತರರಿದ್ದರು.