ಹೈಕಮಾಂಡ್ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೇ ಟಿಕೆಟ್ ನೀಡಿದರೂ ನಾನು ಹಾಗೂ ಸಿ.ಎಂ.ಆರ್ ಶ್ರೀನಾಥ್ ಒಟ್ಟಾಗಿ ಕೆಲಸ ಮಾಡುತ್ತೇವೆ, ಕಾರ್ಯಕರ್ತರು ಕೂಡ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಕೋಲಾರ
ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ಗ್ರಾಮಗಳಲ್ಲಿ ಮೈತ್ರಿ ಸಂಘಟಿಸಿ ಮುಂಬರಲಿರುವ ಗ್ರಾಪಂ, ಜಿಪಂ, ತಾಪಂ, ಎಪಿಎಂಸಿ ಚುನಾವಣೆಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕು ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಕರೆ ನೀಡಿದರು.ತಾಲೂಕಿನ ದೊಡ್ಡಹಸಾಳದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಹೈಕಮಾಂಡ್ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೇ ಟಿಕೆಟ್ ನೀಡಿದರೂ ನಾನು ಹಾಗೂ ಸಿ.ಎಂ.ಆರ್ ಶ್ರೀನಾಥ್ ಒಟ್ಟಾಗಿ ಕೆಲಸ ಮಾಡುತ್ತೇವೆ, ಕಾರ್ಯಕರ್ತರು ಕೂಡ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.ಕೋಲಾರ ಕ್ಷೇತ್ರವು ಅಭಿವೃದ್ಧಿಯಾಗಬೇಕಾದರೆ ಮೈತ್ರಿ ಅಭ್ಯರ್ಥಿಗಳು ಶಾಸಕರಾಗಬೇಕು, ಅದಕ್ಕಾಗಿ ಮೈತ್ರಿ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ಗ್ರಾಪಂ ಸದಸ್ಯರನ್ನು ಗೆಲ್ಲಿಸಬೇಕೆಂದು ಸೂಚಿಸಿದರು.
ಜೆಡಿಎಸ್ ಮುಖಂಡ ಸಿ.ಎಂ.ಆರ್ ಶ್ರೀನಾಥ್ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರದ ಆಸೆಗೆ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದು ಸಾರ್ವಜನಿಕ ಕೆಲಸಗಳನ್ನು ಮಾಡದೆ ಸಿಎಂ ಕುರ್ಚಿಗಾಗಿ ದಿನವೂ ಕಿತ್ತಾಡಿಕೊಳ್ಳುತ್ತಿದ್ದಾರೆ, ಅವರಿಗೆ ರಾಜ್ಯ ಅಭಿವೃದ್ಧಿ ಮಾಡುವ ಚಿಂತನೆ ಇಲ್ಲ ಎಂದು ತಿಳಿಸಿದರು.ಕಂದಾಯ, ಕೃಷಿ, ಸಾರಿಗೆ ಇಲಾಖೆ ಇನ್ನು ಅನೇಕ ಇಲಾಖೆಗಳನ್ನು ನಷ್ಟದಲ್ಲಿ ಇರಿಸಿರುವುದೇ ಕಾಂಗ್ರೆಸ್ಸಿಗರ ದೊಡ್ಡ ಗ್ಯಾರಂಟಿಯಾಗಿದೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ೧೫೦ ಸೀಟುಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದು ರಾಜ್ಯವನ್ನು ಅಭಿವೃದ್ಧಿಪಡಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡರಾದ ಬೆಗ್ಲಿ ಸೂರ್ಯಪ್ರಕಾಶ್, ಬಣಕನಹಳ್ಳಿ ನಟರಾಜ್, ಬಂಕ್ ಮಂಜುನಾಥ್, ಜಿಪಂ ಮಾಜಿ ಸದಸ್ಯ ಅರುಣ್ಪ್ರಸಾದ್, ತಾಪಂ ಮಾಜಿ ಅಧ್ಯಕ್ಷ ಸೂಲೂರು ಆಂಜನಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಸಿ.ಡಿ.ರಾಮಚಂದ್ರಗೌಡ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಬೀಚಗೊಂಡಹಳ್ಳಿ ದಿಲೀಪ್ ಇದ್ದರು.