ಹೊಸಪೇಟೆ: ಸ್ಥಳೀಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಬಿಜೆಪಿ ಯುವ ಮೋರ್ಚಾದಿಂದ ಆತ್ಮನಿರ್ಭರ ಭಾರತ ಯುವ ಸಮಾವೇಶ ನಡೆಯಿತು.ಬಿಜೆಪಿ ವಿಜಯನಗರ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಪಕ್ಷದ ಮುಖಂಡರು ಯುವಕರನ್ನು ಹೆಚ್ಚು ಹೆಚ್ಚಾಗಿ ಪಕ್ಷಕ್ಕೆ ಸೆಳೆಯಬೇಕು. ಆ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು. ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮಾತನಾಡಿ, ಬಿಜೆಪಿಯ ಮೋರ್ಚಾಗಳಲ್ಲಿ ಯುವ ಮೋರ್ಚಾಕ್ಕೆ ಹೆಚ್ಚಿನ ಜವಾಬ್ದಾರಿ ಇದೆ. ಮಹಿಳಾ ಮೋರ್ಚಾ, ರೈತ ಮೋರ್ಚಾಗಳು ಮಹಿಳೆಯರು ಮತ್ತು ರೈತರಿಗೆ ಮೀಸಲಾದರೆ, ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಎಲ್ಲ ಕ್ಷೇತ್ತದಲ್ಲಿ ಕೆಲಸ ಮಾಡುವ ಅವಕಾಶವಿದೆ. ಅದಕ್ಕಾಗಿ ಯುವ ಮೋರ್ಚಾ ಮುಖಂಡರು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿ ಬೂತ್ ನಲ್ಲಿ ಹತ್ತು ಜನ ಯುವಕರ ತಂಡವನ್ನು ರಚನೆ ಮಾಡಬೇಕು. ಮುಂಬರುವ ದಿನಗಳಲ್ಲಿ ಯುವಕರು ಮತ್ತು ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಇರುವುದರಿಂದ ಮಹಿಳೆಯುರು ಮತ್ತು ಯುವಕರು ಹೆಚ್ಚಾಗಿ ರಾಜಕೀಯಕ್ಕೆ ಬರಬೇಕು. ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರೆ, ಪಕ್ಷ ಅಂತಹವರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಲಿದೆ ಎಂದರು.

ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ. ಮಲ್ಲಿಕಾರ್ಜುನ ಬಾಳೆಕಾಯಿ ಮಾತನಾಡಿ, ಇಂದು ಭಾರತ ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸ್ವಾವಲಂಬಿ ಭಾರತವನ್ನು ನಿರ್ಮಿಸಲಾಗಿದೆ. ರಕ್ಷಣಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ರಕ್ಷಣಾ ಕ್ಷೇತ್ರಗಳಲ್ಲಿನ ಸಾಮಗ್ರಿಗಳ ಆಮದು ಶೇ. 90ರಷ್ಟು ಕಡಿಮೆ ಆಗಿದೆ ಎಂದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ಜಿಲ್ಲೆಯಲ್ಲಿ ಯುವ ಮೋರ್ಚಾ ಪ್ರಬಲವಾಗಿದೆ. ತಾಲೂಕು ಘಟಕದ ಪದಾಧಿಕಾರಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಇನ್ನು ಹೆಚ್ಚಿನ ಯುವಕರನ್ನು ಪಕ್ಷಕ್ಕೆ ಸೆಳೆಯುವ ಮೂಲಕ ಪಕ್ಷವನ್ನು ಬಲಪಡಿಸಿ ಎಂದರು.

ಸಮಾವೇಶದಲ್ಲಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್. ರಾಘವೇಂದ್ರ, ಮುಖಂಡರಾದ ಶಂಕರ್ ಮೇಟಿ, ಸಂದೀಪ್‌ ಸಿಂಗ್‌, ಸಚಿನ್ ಕುಮಾರ್, ಪ್ರಕಾಶ್, ವಿನೋದ್, ಸಂಗಮೇಶ್, ಸೂರಿ ಬಂಗಾರು, ಶಂಕರ ನವಲಿ, ರಾಘವೇಂದ್ರ, ಸಂತೋಷ್, ಮಂಜುನಾಥ, ಮಣಿಕಂಠ, ಶ್ರೀಧರ, ಸಚಿನ್, ವಿಕ್ರಮ್, ವಿನೋದ್ ಸೇರಿದಂತೆ ಯುವ ಮೋರ್ಚಾ ವಿವಿಧ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.