ಲೋಕ್ ಅದಾಲತ್ ಸದುಪಯೋಗಪಡಿಸಿಕೊಳ್ಳಿ: ನ್ಯಾಯಾಧೀಶ ಎಂ.ಆನಂದ್

| Published : Jul 06 2025, 01:48 AM IST

ಲೋಕ್ ಅದಾಲತ್ ಸದುಪಯೋಗಪಡಿಸಿಕೊಳ್ಳಿ: ನ್ಯಾಯಾಧೀಶ ಎಂ.ಆನಂದ್
Share this Article
  • FB
  • TW
  • Linkdin
  • Email

ಸಾರಾಂಶ

ಈ ಬಾರಿಯ ಲೋಕ್ ಅದಾಲತ್‌ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿಯೊಂದಿಗೆ ಜು.12 ರಂದು ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಈ ಬಾರಿಯ ಲೋಕ್ ಅದಾಲತ್‌ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿಯೊಂದಿಗೆ ಜು.12 ರಂದು ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ್ ಹೇಳಿದರು.

ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ವರ್ಷದಲ್ಲಿ ನಡೆಯುತ್ತಿರುವ ಎರಡನೇ ಲೋಕ್ ಅದಾಲತ್ ಇದಾಗಿದ್ದು, ಬಾಕಿ ಇರುವ ಸಿವಿಲ್ ಪ್ರಕರಣಗಳು, ವಿಭಾಗದ ದಾವೆಗಳು, ಹಣಕಾಸು ವಸೂಲಾತಿ ದಾವೆಗಳು, ಮೋಟಾರು ವಾಹನಗಳ ಪ್ರಕರಣಗಳು, ಎಂ.ಎಂ.ಆರ್. ಡಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ತೆಗೆದುಕೊಂಡು ಇತ್ಯರ್ಥ ಮಾಡಲಾಗುವುದು ಎಂದರು.

ತಾಲೂಕಿನ ಎಲ್ಲಾ ನ್ಯಾಯಾಲಯಗಳಲ್ಲಿ ವ್ಯಾಜ್ಯಪೂರ್ವ ಪ್ರಕಾರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ್ ಅದಾಲತ್ ನಲ್ಲಿ ಭಾಗವಹಿಸಿ ಪ್ರಕರಣಗಳನ್ನು ಕಾನೂನು ಬದ್ಧವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಮನವಿ ಮಾಡಿದರು.

90 ದಿನಗಳ ಮಧ್ಯಸ್ಥಿಕೆ ಅಭಿಯಾನ:

ಈ ಬಾರಿ 90 ದಿನಗಳ ಮಧ್ಯಸ್ಥಿಕೆ ಆಂದೋಲನವನ್ನು ಜು.1 ರಿಂದ ಅಕ್ಟೋಬರ್ 7 ರವರೆಗೆ ಹಮ್ಮಿಕೊಳ್ಳಲಾಗಿದೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ವಹಿಸುವ ಮೂಲಕ ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

‘ನೇಷನ್ 90 ಡೆಸ್’ ಎಂಬ ಘೋಷವಾಕ್ಯದಡಿ ಏಳು ತಾಲೂಕಿನಲ್ಲೂ ಮಧ್ಯಸ್ಥಿಕೆ ವಹಿಸಿ ಕಾನೂನು ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಮಧ್ಯಸ್ಥಿಕೆ ಡ್ರೈವ್‌ನಲ್ಲಿ ನುರಿತ ವಕೀಲರು ಹಾಗೂ ಕಕ್ಷಿದಾರರು ಇರುತ್ತಾರೆ. ಇಬ್ಬರಿಗೂ ಸಮಾಧಾನ ತರುವಂತೆ ನ್ಯಾಯಸಮ್ಮತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವುದು ಎಂದರು.