ಸಾರಾಂಶ
ಕನ್ನಡಪ್ರಭ ವಾರ್ತೆ ಸಕಲೇಶಪುರ
ಕಾರ್ಮಿಕರು ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ಬಳಸಿಕೊಂಡು ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಪಟ್ಟಣದ ಪುರಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ವರ್ಗದ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಜಾರಿಯಲ್ಲಿರುವ ಸಾಮಾಜಿಕ ಭದ್ರತ ಯೋಜನೆಗಳು ಹಾಗೂ ಕಾರ್ಮಿಕ ಕಾಯ್ದೆಗಳ ಬಗ್ಗೆ ತಾಲೂಕು ಮಟ್ಟದ ಕಾರ್ಯಾಗಾರ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟನೆ ಮಾಡಿದ ನಂತರ ಮಾತನಾಡಿ, ದೇಶದ ಅಭಿವೃದ್ಧಿಗೆ ಬೆನ್ನೆಲುಬು ಕಾರ್ಮಿಕರಾಗಿದ್ದಾರೆ. ಭಾರತ ವಿಶ್ವ ಗುರು ಆಗಬೇಕಾದರೆ ಹಾಗೂ ದೇಶ ಹೆಚ್ಚಿನ ಅಭಿವೃದ್ಧಿ ಕಾಣಬೇಕಾದರೆ ಕಾರ್ಮಿಕರ ಶ್ರಮ ಮುಖ್ಯ, ಕಾರ್ಮಿಕರ ಜೀವನ ಅತ್ಯಂತ ಕಷ್ಟಕರವಾಗಿದ್ದು ಕೆಲಸ ಮಾಡುವಾಗ ಯಾವುದೇ ಸಂದರ್ಭದಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಕುಟುಂಬದ ರಕ್ಷಣೆಗಾಗಿ ಹಾಗೂ ಕಾರ್ಮಿಕರ ಏಳಿಗೆಗಾಗಿ ಕಾರ್ಮಿಕ ಇಲಾಖೆ ವತಿಯಿಂದ ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳದಿದ್ದಲ್ಲಿ ಯಾವುದೇ ಯೋಜನೆಗಳನ್ನು ಪಡೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಕಾರ್ಮಿಕರು ಮೊದಲಿಗೆ ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡು ಇಲಾಖೆಯ ಸೌಲಭ್ಯಗಳನ್ನು ಪಡೆದು ಸದ್ಭಳಕೆ ಮಾಡಿಕೊಳ್ಳಬೇಕು ಹಾಗೂ ಕೆಲಸ ಮಾಡುವಾಗ ಅತಿ ಹೆಚ್ಚಿನ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿ ಕಾರ್ಮಿಕ ಉಪ ಅಧೀಕ್ಷಕಿ ಯಮುನಾ, ಪುರಸಭಾ ಮುಖ್ಯಾಧಿಕಾರಿ ನಟರಾಜ, ಪುರಸಭಾ ಸದಸ್ಯೆ ವನಜಾಕ್ಷಿ, ತಾಲೂಕು ಕಾರ್ಮಿಕ ಇಲಾಖೆಯ ಉಪ ನಿರೀಕ್ಷಕ ರವಿ, ಆಲೂರು ಕಾರ್ಮಿಕ ಇಲಾಖೆಯ ನಿರೀಕ್ಷಕ ಶಿವರಾಮ ಮತ್ತಿತರರು ಹಾಜರಿದ್ದರು.