ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

| Published : Sep 26 2025, 01:00 AM IST

ಸಾರಾಂಶ

ವಾಲ್ಮೀಕಿ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಅ.7 ರಂದು ಬೆಳಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ

ಕೊಪ್ಪಳ: ಅ.7ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಸೂಚನೆ ನೀಡಿದರು.

ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಾಲ್ಮೀಕಿ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಅ.7 ರಂದು ಬೆಳಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ವೇದಿಕೆ ಕಾರ್ಯಕ್ರಮ, ಪೂಜೆ, ಶ್ರೀಮಹರ್ಷಿ ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮ ಜರುಗಲಿವೆ. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಸಕಲ ಸಿದ್ಧತೆ ಕೈಗೊಳ್ಳಬೇಕು. ಸಮಾರಂಭಕ್ಕೂ ಪೂರ್ವದಲ್ಲಿ ಅಂದು ಬೆಳಗ್ಗೆ 8 ಗಂಟೆಗೆ ನಗರದ ಸಿರಸಪ್ಪಯ್ಯನ ಮಠದಿಂದ ಸಾಹಿತ್ಯ ಭವನದವರೆಗೆ ಶ್ರೀಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಮೆರವಣೆಗೆ ಹೊರಡುವ ಮಾರ್ಗದಲ್ಲಿ ಮತ್ತು ಸಾಹಿತ್ಯ ಭವನದಲ್ಲಿ ನಗರಸಭೆಯಿಂದ ಸ್ವಚ್ಛತಾ ಕಾರ್ಯವಾಗಬೇಕು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಮಾಡಿಕೊಡಬೇಕು. ಮೇರವಣಿಗೆಗೆ ವಿಶೇಷ ಕಲಾತಂಡ ಕರೆತರಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜು, ಗ್ರಾಪಂ ಮತ್ತು ಇತರೆ ಕಚೇರಿಗಳಲ್ಲಿ ಆಚರಿಸುವಂತಾಗಬೇಕು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಇಲಾಖಾ ಮುಖ್ಯಸ್ಥರು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅರ್ಥಪೂರ್ಣವಾಗಿ ಆಗಬೇಕು. ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ ಹಿರಿಯರನ್ನು ಗುರುತಿಸಿ, ಗೌರವಿಸಬೇಕು. ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಟಿ. ಕೃಷಿಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಂ ಶೆಟ್ಟಪ್ಪನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ಶಂಕರಗೌಡ ಪಾಟೀಲ್, ಸುರೇಶ ಡೊಣ್ಣಿ, ಕೊಟೇಶ್ ತಳವಾರ, ವೆಂಕಟೇಶ್ ಪೂಜಾರ, ಲಕ್ಷ್ಮಣ ಚೌಡ್ಕಿ, ಶ್ರೀನಿವಾಸ ಗಿಣಿಗೇರಾ, ಶರಣಪ್ಪ ನಾಯಕ, ಗಿರಿಯಪ್ಪ ನಿಂಗಪ್ಪ ಡಂಬ್ರಳ್ಳಿ ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.