ಸಾರಾಂಶ
ಕೊಪ್ಪಳ: ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿ ಕ್ಯಾ. ಮಹೇಶ್ ಮಾಲಗಿತ್ತಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಯಂತಿ ಆಚರಿಸುವ ಕುರಿತಂತೆ ಚರ್ಚಿಸಲು ಉಪ ವಿಭಾಗಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿಯನ್ನು ಫೆ.24ರಂದು ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ನಡೆಯಲಿವೆ. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ, ಆಮಂತ್ರಣ ಪತ್ರಿಕೆ, ವೇದಿಕೆ ಬ್ಯಾನರ್, ಭಾವಚಿತ್ರ, ಹೂವಿನ ಹಾರ, ಪೂಜಾ ಸಾಮಗ್ರಿಗಳ ವ್ಯವಸ್ಥೆ ಜತೆಗೆ ಮೆರವಣಿಗೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಒದಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜಯಂತಿ ದಿನ ಎಲ್ಲ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸರ್ವಜ್ಞರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಎಲ್ಲ ಮುಖಂಡರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ವಿವರಿಸಿದರು.ಸಮಾಜದ ಮುಖಂಡರಾದ ಕಳಕಪ್ಪ ಕುಂಬಾರ, ಅಶೋಕ ಕುಂಬಾರ, ಮಲ್ಲಪ್ಪ ಕುಂಬಾರ, ಮಲ್ಲಪ್ಪ ಮುದ್ದಾಬಳ್ಳಿ, ಸುರೇಶ ಕುಂಬಾರ, ಗವಿಸಿದ್ದಪ್ಪ ಬಂಡಿಮ್ಯಾಗಳ, ಪಲ್ಲಣ್ಣ ಕುಂಬಾರ, ಅಂದಪ್ಪ ಕುಂಬಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.