ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಶಾಶ್ವತವಾಗಿ ಅಂಗ ವೈಕಲ್ಯತೆಯಿಂದ ಮುಕ್ತ ಮಾಡಬಹುದು. ಮುಂದೆ ಯಾವುದೇ ರೀತಿಯ ಅಂಗ ವೈಫಲ್ಯತೆ ಮಕ್ಕಳಿಗೆ ಕಾಡದಿರಲು ಸರ್ಕಾರದೊಂದಿಗೆ ಕೈ ಜೋಡಿಸಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ.

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರತಿಯೊಬ್ಬರೂ ಕಡ್ಡಾಯವಾಗಿ ಜಿಲ್ಲೆಯಲ್ಲಿನ ಒಂದು ವರ್ಷದಿಂದ 5 ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಭಾನುವಾರ ಜಿಲ್ಲಾಡಳಿತ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ನಗರದ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮತನಾಡಿದರು.

ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಶಾಶ್ವತವಾಗಿ ಅಂಗ ವೈಕಲ್ಯತೆಯಿಂದ ಮುಕ್ತ ಮಾಡಬಹುದು. ಮುಂದೆ ಯಾವುದೇ ರೀತಿಯ ಅಂಗ ವೈಫಲ್ಯತೆ ಮಕ್ಕಳಿಗೆ ಕಾಡದಿರಲು ಸರ್ಕಾರದೊಂದಿಗೆ ಕೈ ಜೋಡಿಸಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಆರ್.ನಂದಿನಿ ಮಾತನಾಡಿ, ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವುದು ಎಲ್ಲರ ಜವಾಬ್ದಾರಿ. ಜಿಲ್ಲೆಯ ಎಲ್ಲಾ ಮಕ್ಕಳನ್ನು ಪೋಲಿಯೋ ಲಸಿಕೆಗೆ ಒಳಪಡಿಸಿ ಎಂದರು.

ಭಾರತದ ಈಗಾಗಲೇ ಪೋಲಿಯೋ ಮುಕ್ತ ದೇಶವಾಗಿದ್ದು, ಆದರೆ, ಇತರೆ ದೇಶಗಳಲ್ಲಿ ಪೋಲಿಯೋ ಸೋಂಕು ಇರುವುದರಿಂದ ಮಕ್ಕಳ ಹಿತಾಸಕ್ತಿಗಾಗಿ ಸರ್ಕಾರ ಪೋಲಿಯೋ ಅಭಿಯಾನ ನಡೆಸಿಕೊಂಡು ಬರುತ್ತಿದೆ. ಎರಡು ಹನಿ ಮಕ್ಕಳ ಅಂಗ ವೈಫಲ್ಯತೆ ತಪ್ಪಿಸಿ ಮಕ್ಕಳ ಸರ್ವತೋಮುಖ ಹಾಗೂ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗುತ್ತದೆ. ಹಾಗಾಗಿ ನಿಮ್ಮ ಹತ್ತಿರದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ತಪ್ಪದೆ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸಿ ಎಂದರು.

ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ, ಆರ್.ಸಿ.ಎಚ್. ಅಧಿಕಾರಿ ಡಾ.ಕೆ.ಪಿ.ಅಶ್ವಥ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಜವರೇಗೌಡ, ನಗರಸಭಾ ಆಯುಕ್ತೆ ಯು.ಪಿ.ಪಂಪಾಶ್ರೀ ಹಾಜರಿದ್ದರು.