ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸೆ.14ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸುಧೀರ್ ಮನವಿ ಮಾಡಿದರು.ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ವಕೀಲರು ಭಾಗವಹಿಸಿ ರಾಜೀಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಸಹಕರಿಸುವಂತೆ ಕೋರಿದರು.
ಸಣ್ಣ ಪುಟ್ಟ ಕಾರಣಗಳಿಗೆ ಕಿತ್ತಾಡಿಕೊಂಡು ಪೊಲೀಸ್ ಠಾಣೆಯ ಮೆಟ್ಟಿಲೇರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಸಂಬಂಧಗಳ ನಡುವೆ ಒಡಕು ಮೂಡಿರುವ ಮನಸ್ಸುಗಳನ್ನು ಒಂದು ಗೂಡಿಸಲು ಯುವ ವಕೀಲರು ಮುಂದಾಗಬೇಕು. ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ವಕೀಲರಿಗೆ ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.ಈ ವೇಳೆ ಅಪರ ಸಿವಿಲ್ ನ್ಯಾಯಾಧೀಶರಾದ ದೇವರಾಜು, ಶಕುಂತಲಾ, ಅರ್ಪಿತಾ, ವಕೀಲರ ಸಂಘದ ಅಧ್ಯಕ್ಷ ಎನ್.ಆರ್. ರವಿಶಂಕರ್, ಪ್ರಧಾನ ಕಾರ್ಯದರ್ಶಿ ಆರ್. ಕೆ.ರಾಜೇಗೌಡ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ವಕೀಲರು ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಕ ಅದಾಲತ್ ಯಶಸ್ವಿ ಗೊಳಿಸಲು ಸಂಕಲ್ಪ ಮಾಡಿದರು.ಸಾರ್ವಜನಿಕರ ಕುಂದುಕೊರತೆ ಸಭೆ ಸ್ಥಳ ಬದಲಾವಣೆಮದ್ದೂರು: ಮಂಡ್ಯ ಲೋಕಾಯುಕ್ತ ವಿಭಾಗದಿಂದ ಸೆ.11ರಂದು ಬೆಳಗ್ಗೆ 11 ರಿಂದ 1.30 ಗಂಟೆಗೆ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದುಕೊರತೆ, ದೂರು, ಅಹವಾಲು ಸ್ವೀಕಾರ ಸಭೆಯನ್ನು ಕಾರಣಾಂತರಗಳಿಂದ ತಾಪಂ ಕಚೇರಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ನಿಗದಿಪಡಿಸಿದ ಸ್ಥಳದಲ್ಲಿ, ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ದೂರು ಮತ್ತು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮಂಡ್ಯ ಕರ್ನಾಟಕ ಲೋಕಾಯುಕ್ತ ಪೋಲಿಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.