ಸಾರಾಂಶ
ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ: ತರಬೇತಿ ಕಾರ್ಯಕ್ರಮ ಉದ್ಘಾಟನೆಕನ್ನಡಪ್ರಭ ವಾರ್ತೆ ಕೊಪ್ಪಳ
ಎಲ್ಲಾ ಮಕ್ಕಳು ಶಾಲಾ ಅವಧಿಯಲ್ಲಿ ಶಾಲೆಯಲ್ಲಿರುವುದು ಕಡ್ಡಾಯವಾಗಿದ್ದು, ಈ ಅವಧಿಯಲ್ಲಿ ಮಕ್ಕಳು ಶಾಲೆಯಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ್ ಹೇಳಿದರು.ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ 2023ರ ಹಾಗೂ ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಎಂಬ ವಿಷಯದ ಕುರಿತು ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಒಂದು ವೇಳೆ ಮಕ್ಕಳು ಶಾಲೆಯಿಂದ ಹೊರಗುಳಿದಲ್ಲಿ, ದುಶ್ಚಟಗಳಿಗೆ ಬಲಿಯಾಗಬಹುದು. ಮಾದಕ ವ್ಯಸನಿಗಳಾಗಬಹುದು, ಕಾರ್ಮಿಕರಾಗಿ ದುಡಿಯುತ್ತಾ ಕಿರುಕುಳ, ಹಲ್ಲೆ ಅಥವಾ ದೌರ್ಜನ್ಯಗಳಿಗೆ ಸಿಲುಕಬಹುದಾಗಿದೆ. ಅಲ್ಲದೇ ಬಾಲ್ಯವಿವಾಹಕ್ಕೆ ತುತ್ತಾಗಿ ಪ್ರತಿ ದಿನವು ಲೈಂಗಿಕ ದೌರ್ಜನ್ಯಗಳಿಗೆ, ಬಾಲ ಗರ್ಭಿಣಿಯರಾಗಿ ಸಾವಿಗೆ ತುತ್ತಾಗಬಹುದಾಗಿದೆ ಅಥವಾ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಬಹುದಾಗಿದೆ. ಆದ್ದರಿಂದ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಇದನ್ನು ಕಾನೂನು ಸೇವೆಗಳ ಪ್ರಾಧಿಕಾರವು ಸಹಿಸುವುದಿಲ್ಲ. ಯಾವುದೇ ತುರ್ತು ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ-1098 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಟಿ. ಶಂಕ್ರಯ್ಯ ಮಾತನಾಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012ರಡಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿರುವ ಘಟನೆಗಳು ವರದಿಯಾಗಿವೆ. ಆದ್ದರಿಂದ ಜಿಲ್ಲೆಯಲ್ಲಿನ ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಮಕ್ಕಳ ಸುರಕ್ಷತಾ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಮಾತನಾಡಿ, ರಾಜ್ಯವು ಯಾವುದೇ ಮಗು, ಯಾವುದೇ ರೀತಿಯ ದೈಹಿಕ ಅಥವಾ ಮಾನಸಿಕ ಹಿಂಸೆ, ದೌರ್ಜನ್ಯ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಸಿಲುಕಿರುವವರನ್ನು ಅಥವಾ ಒಳಗಾಗಬಹುದಾದವರನ್ನು ರಕ್ಷಿಸಲು ಮುಂಜಾಗ್ರತಾ ಮತ್ತು ಸುಧಾರಣೆಯ ಎರಡು ರೀತಿಯ ಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಸರ್ಕಾರವು ರಾಜ್ಯದಲ್ಲಿನ ಎಲ್ಲಾ ಮಕ್ಕಳ ಕಾನೂನಾತ್ಮಕ ಹಕ್ಕುಗಳನ್ನು ರಕ್ಷಿಸುವುದರೊಂದಿಗೆ ಅವರ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಅಗತ್ಯಗಳನ್ನು ಒಳಗೊಂಡಂತೆ ಅವರ ಸುರಕ್ಷತೆಯನ್ನು ಖಚಿತಪಡಿಸಲು ಸೂಕ್ಷ್ಮ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶಾಲೆಗಳಲ್ಲಿ ಅವಶ್ಯವಿರುವ ಯಾವುದೇ ಮೂಲಭೂತ ಅವಶ್ಯಕತೆಗಳನ್ನು ಗ್ರಾಪಂಯಲ್ಲಿ ಲಭ್ಯವಿರುವ, ಮಕ್ಕಳ ಆಯ್ಯ-ವ್ಯಯದಲ್ಲಿ ಭರಿಸಲು ಅವಕಾಶವಿದ್ದು ಹಾಗೂ ಸ್ಥಳೀಯ ಸಂಪನ್ಮೂಲ ಬಳಸಿಕೊಂಡು ಕಡ್ಡಾಯವಾಗಿ ಒದಗಿಸಿ. ಪ್ರತಿಯೊಂದು ಸಂಸ್ಥೆಯಲ್ಲೂ ಅಧಿಕಾರಿಗಳು, ಸಿಬ್ಬಂದಿ ಪೊಲೀಸ್ ಪರಿಶೀಲನೆ, ಮಕ್ಕಳ ಬದ್ಧತಾ ಪತ್ರ, ಮಕ್ಕಳ ಸಲಹಾ ಪೆಟ್ಟಿಗೆಗಳನ್ನು, ಸಿಬ್ಬಂದಿಗಳ ಬದ್ಧತಾ ಪತ್ರವನ್ನು ಪಡೆಯುವುದು ಅತ್ಯವಶ್ಯಕವಾಗಿದೆ ಎಂದರು.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯಕರ್ತ ರವಿ ಪವಾರ್ ಮಕ್ಕಳ ಹಕ್ಕುಗಳ ಬಗ್ಗೆ ಮತ್ತು ಔಟರೀಚ್ ವರ್ಕರ್ ಪ್ರತಿಭಾ ಕಾಶಿಮಠ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ 2023ರ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಪ್ಪಳ ಮತ್ತು ಅಳವಂಡಿ ವಲಯದ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.