ಕಳ್ಳಭಟ್ಟಿ ತಯಾರಿಕೆ ಮತ್ತು ಅಕ್ರಮ ಮದ್ಯದ ವಹಿವಾಟಿನ ವಿರುದ್ಧ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು.

ಹೊಸಪೇಟೆ: ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಕೆ, ಅಕ್ರಮ ಮದ್ಯ ಮಾರಾಟ, ಸಾಗಣೆಯನ್ನು ಸಂಪೂರ್ಣವಾಗಿ ನಿಯಂತ್ರಿಸಿ ಕಳ್ಳಬಟ್ಟಿ ಮುಕ್ತ ಜಿಲ್ಲೆಯಾಗಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಳ್ಳಭಟ್ಟಿ ನಿರ್ಮೂಲನೆ ಕುರಿತ ಆಯೋಜಿಸಲಾಗಿದ್ದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳ್ಳಭಟ್ಟಿ ತಯಾರಿಕೆ ಮತ್ತು ಅಕ್ರಮ ಮದ್ಯದ ವಹಿವಾಟಿನ ವಿರುದ್ಧ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು. ಅಕ್ರಮ ಮದ್ಯ ಮಾರಾಟ ಅಥವಾ ಸಾಗಾಟ ಮಾಡುವುದು ಕಂಡು ಬಂದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನೆರೆ ಜಿಲ್ಲೆ ಅಥವಾ ರಾಜ್ಯಗಳಿಂದ ಅಕ್ರಮವಾಗಿ ಮದ್ಯ ಸಾಗಣೆಯಾಗುವ ಸಂಭವವಿರುವುದರಿಂದ ಜಿಲ್ಲೆಯ ಗಡಿ ಭಾಗದ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು. ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಯು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಸಂಶಯಾಸ್ಪದ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ನಡೆಸಬೇಕು. ಗ್ರಾಮೀಣ ಭಾಗದ ಹೊಟೇಲ್, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಬೀಟ್ ಪೊಲೀಸರು ಮತ್ತು ಅಬಕಾರಿ ನಿರೀಕ್ಷಕರು ಹೆಚ್ಚಿನ ಕಾರ್ಯಾಚರಣೆ ನಡೆಸಬೇಕು. ಅಕ್ರಮ ಮದ್ಯ ಸಾಗಣೆಯಲ್ಲಿ ತೊಡಗಿರುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಮಾತ್ರವಲ್ಲದೆ, ಪ್ರಕರಣ ದಾಖಲಿಸಬೇಕು. ಜಿಲ್ಲೆಯ ಜನರ ಆರೋಗ್ಯ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆ. ಕಳ್ಳಭಟ್ಟಿ ಸಾರಾಯಿ ತಯಾರಿಕೆ ಅಥವಾ ಅಕ್ರಮ ಮಾರಾಟದ ಮಾಡುವುದು ಕಂಡು ಬಂದಲ್ಲಿ ಸಾರ್ವಜನಿಕರು ನಿರ್ಭಯವಾಗಿ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.ಅಬಕಾರಿ ಉಪ ಆಯುಕ್ತ ಡಾ. ಮಾದೇಶ್ ಮಾತನಾಡಿ, ಜಿಲ್ಲೆಯಲ್ಲಿ ಪರವಾನಗಿ ಪಡೆದ 160 ಮದ್ಯದಂಗಡಿಗಳು ಇದ್ದು, ಇವುಗಳ ಮೇಲೆ ಸದಾ ನಿಗಾ ವಹಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಲ ಕಾಲಕ್ಕೆ ಸರಿಯಾಗಿ ಕಳ್ಳಭಟ್ಟಿ ಸಾರಾಯಿ ನಿರ್ಮೂಲನೆ, ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆ ಕುರಿತು ಗ್ರಾಮ ಸಭೆ, ಜಾಗೃತಿ ಕಾರ್ಯಾಗಾರ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ 2010 ರಿಂದ ಈವರೆಗೆ ಯಾವುದೇ ರೀತಿಯ ಪ್ರಕರಣಗಳು ದಾಖಲಾಗಿಲ್ಲ. ಆದರೆ ನೆರೆ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಯಾವುದೇ ಪರವಾನಗಿ ಇಲ್ಲದೇ ಸಾಗಾಟ ಮಾಡುತ್ತಿದ್ದನ್ನು ತಡೆದು 2023ರಿಂದ 2026ರ ಫೆಬ್ರವರಿ ಅಂತ್ಯಕ್ಕೆ 7 ಪ್ರಕರಣ ದಾಖಲಿಸಿ, 293.45 ಲೀ. ಮದ್ಯ ವಶ ಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ದಾಳಿ ನಡೆಸಲಾಗಿದ್ದು, 2024 ಜುಲೈ ನಿಂದ 2025ರ ಜೂನ್ ವರೆಗೆ 892 ಕಡೆ ಹಾಗೂ 2025ರ ಜುಲೈ ನಿಂದ ಫೆಬ್ರವರಿ 16ರವರೆಗೆ 872 ಸೇರಿ ಒಟ್ಟು 1764 ಕಡೆ ದಾಳಿ ನಡೆಸಿ 755 ಲೀಟರ್ ಮದ್ಯ ಮತ್ತು 152 ಲೀ. ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಸಹಾಯಕ ಆಯುಕ್ತರು ವಿವೇಕಾನಂದ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.