ಸಾರಾಂಶ
ಕೊಪ್ಪಳ: ಜಿಲ್ಲೆಯನ್ನು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಕೃಷಿ ಇಲಾಖೆಯ ಸಭಾಂಗಣದಲ್ಲಿ ಕೂಲಿಗಲ್ಲ ಶಾಲೆಗೆ ಅಭಿಯಾನದ ಕುರಿತು ವಿವಿಧ ಭಾಗೀದಾರರ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ದುಡಿಮೆ, ದೇಶಕ್ಕೆ ಕಳಂಕ ಎಂದು ಮಕ್ಕಳ ದುಡಿಮೆ ನಿಷೇಧಿಸಿ ಸರ್ಕಾರವು ಕಿಶೋರ ಕಾರ್ಮಿಕ ಪದ್ಧತಿ (ನಿಷೇಧ) ಹದಿಹರೆಯದ ಮಕ್ಕಳ ದುಡಿಮೆ ನಿಯಂತ್ರಣ ಕಾಯ್ದೆ ಜಾರಿಗೆ ತಂದಿದೆ. ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿರೀಕ್ಷಕರುಗಳನ್ನಾಗಿ ಕರ್ತವ್ಯ ಮತ್ತು ಜವಾಬ್ದಾರಿ ನಿಗದಿಪಡಿಸಿ ನೇಮಿಸಿ ಆದೇಶಿಸಿದೆ. ಈ ಕಾರ್ಮಿಕ ನಿರೀಕ್ಷಕರು ಸಕ್ರೀಯವಾಗಿ, ಸಮನ್ವಯತೆಯಿಂದ ಕಾರ್ಯ ನಿರ್ವಹಿಸದೆ ಇರುವುದರಿಂದ ಜಿಲ್ಲೆಯಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿದು ಕೂಲಿ ಕೆಲಸ, ಇಟ್ಟಂಗಿ ಬಟ್ಟಿ, ಗ್ಯಾರೇಜ್ , ಹೊಟೇಲ್, ಕೋಳಿ ಫಾರ್ಮ, ಬೀಜೋತ್ಪಾದನೆ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ಕಂಡುಬರುತ್ತಿದೆ ಎಂದರು.ವೇತನ ತಾರತಮ್ಯ, ವಯಸ್ಸಿಗೆ ಮೀರಿದ ಹೆಚ್ಚಿನ ಹೊರೆಯ ಕೆಲಸ ನೀಡುವುದು ಮತ್ತು ಅಗತ್ಯ ರಕ್ಷಣಾ ಪರಿಕರ ಒದಗಿಸದೇ ಅವರುಗಳನ್ನು ಶೋಷಿಸುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಅಧಿಕಾರಿಗಳ ನಿಷ್ಕ್ರೀಯತೆ, ಗಮನ ನೀಡದೇ ಇರುವುದರಿಂದ ಸಂವಿಧಾನವು ನೀಡಿರುವ ಹಕ್ಕುಗಳಿಂದ ಜಿಲ್ಲೆಯ ಮಕ್ಕಳು ವಂಚಿತರಾಗುತ್ತಿದ್ದಾರೆ. ಶಿಕ್ಷಣ ಹಕ್ಕನ್ನು ಪ್ರತಿ ಮಗುವಿಗೂ ಖಾತ್ರಿಪಡಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕೊಪ್ಪಳ ಜಿಲ್ಲಾಡಳಿತದೊಂದಿಗೆ ವಿನೂತನವಾಗಿ ಕೂಲಿಗಲ್ಲ, ಶಾಲೆಗೆ ಅಭಿಯಾನ ಎಂಬ ಶಿರ್ಷಿಕೆಯಡಿ ಕಾರ್ಯಕ್ರಮ ಆರಂಭಿಸುತ್ತಿದೆ ಎಂದರು.
ಎಲ್ಲ ಇಲಾಖೆಗಳಲ್ಲಿರುವ ಅಧಿಕಾರಿಗಳಿಗೆ ಸಕ್ರೀಯವಾಗಿ ಕಾರ್ಯ ನಿರ್ವಹಿಸುವಂತೆ ಅಗತ್ಯ ನಿರ್ದೇಶನ ನೀಡಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮತ್ತು ಕಿಶೋರಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ ಎಂದು ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ.ಶೆಟೆಪ್ಪನವರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾಗರಗ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))