ಸಾರಾಂಶ
ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರಮನುಷ್ಯ ಇಲ್ಲದಿದ್ದರೂ ಪರಿಸರ ಇರುತ್ತದೆ. ಆದರೆ, ಪರಿಸರವಿಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಪ್ರಾಂಶುಪಾಲೆ ಸಿಸ್ಟರ್ ಶುಭಾ ಹೇಳಿದರು.ಮೌಂಟ್ ಕಾರ್ಮೆಲ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಈ ಪ್ರಕೃತಿಯ ಮಡಿಲು ದೇವರು ಕೊಟ್ಟ ವರವಾಗಿದ್ದು ಮನುಷ್ಯನ ಉಳಿವಿಗಾಗಿ ಪ್ರಕೃತಿ ಗಾಳಿ,ಬೆಳಕು, ನೀರನ್ನು ಕೊಟ್ಟಿದೆ. ಮನುಷ್ಯನ ಸ್ವಾರ್ಥಕ್ಕೆ ಪರಿಸರವೇ ನಾಶವಾಗುತ್ತಿದೆ. ಪರಿಸರ ನಾಶದಿಂದ ಜಲಮಾಲಿನ್ಯ, ವಾಯು ಮಾಲಿನ್ಯ ಉಂಟಾಗುತ್ತಿದೆ. ಮುಂದಿನ ಪೀಳಿಗೆಯ ಉಪಯೋಗಕ್ಕಾಗಿ ಪರಿಸರ ಉಳಿಸುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳು ಪರಿಸರದ ದಿನವಾದ ಇಂದು ಮನೆ ಸುತ್ತ ಮುತ್ತ ಒಂದೊಂದು ಗಿಡ ನೆಟ್ಟು ಅದನ್ನು ಪೋಷಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.ರಾಜ್ಯ ಶಾಸ್ತ್ರ ಉಪನ್ಯಾಸಕ ಟಿ.ಮಂಜುನಾಥ್ ಮಾತನಾಡಿ, ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ 1972 ರಿಂದ ವಿಶ್ವಸಂಸ್ಥೆ ಪರಿಸರ ದಿನಾಚರಣೆ ಜಾರಿಗೆ ತಂದಿದೆ. ಪ್ರತಿಯೊಬ್ಬರು ಪರಿಸರದ ಬಗ್ಗೆ ಪ್ರೀತಿ ಬೆಳೆಸಿಕೊಂಡು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು ಎಂದರು.
ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಬಗ್ಗೆ ನೃತ್ಯ ಪ್ರದರ್ಶಿಸಿದರು. ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ದರ್ಶನ ಹಾಗೂ ಬೇಬಿ ಆಯಿಷಾ ಪರಿಸರ ದಿನಾಚರಣೆ ಮಹತ್ವದ ಬಗ್ಗೆ ಭಾಷಣ ಮಾಡಿದರು. ಉಪನ್ಯಾಸಕರಾದ ನಂದಿನಿ, ಅನುಷಾ, ಅರವಿಂದ್ ,ನಾಗರಾಜ್ ಇದ್ದರು.