ಕುಡಿವ ನೀರಿನ ಸಮಸ್ಯೆ ಸಮರ್ಪಕವಾಗಿ ನಿರ್ವಹಿಸಿ : ಶುಭಾ ಕಲ್ಯಾಣ್

| Published : Apr 02 2024, 01:01 AM IST

ಸಾರಾಂಶ

ತುಮಕೂರು ಜಿಲ್ಲೆಯ ತಾಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಅಧಿಕಾರಿಗಳು‌ ಸ್ವತಃ ಭೇಟಿ ನೀಡಿ, ತ್ವರಿತ ಗತಿಯಲ್ಲಿ ನೀರು ಪೂರೈಕೆಗೆ ಕ್ರಮವಹಿಸುವ ಮೂಲಕ ಪರಿಸ್ಥಿತಿಯನ್ನು ‌ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರು

ತಾಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಅಧಿಕಾರಿಗಳು‌ ಸ್ವತಃ ಭೇಟಿ ನೀಡಿ, ತ್ವರಿತ ಗತಿಯಲ್ಲಿ ನೀರು ಪೂರೈಕೆಗೆ ಕ್ರಮವಹಿಸುವ ಮೂಲಕ ಪರಿಸ್ಥಿತಿಯನ್ನು ‌ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಮತ್ತು ಕುಡಿಯುವ ನೀರು, ಮೇವು ಪೂರೈಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ವಿಡಿಯೋ ಕಾನ್ಫರೆನ್ಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ತೀರ್ಮಾನದಂತೆ ನಿಯಮಾನುಸಾರ ಅವಶ್ಯಕತೆಗನುಗುಣವಾಗಿ ಹೊಸ ಕೊಳವೆ ಬಾವಿಗಳನ್ನು ಕೊರೆಸಿ, ಅಂತರ್ಜಲ ಮೂಲವಿಲ್ಲದ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಸೂಚಿಸಿದರು.ಕುಡಿಯುವ ನೀರು ಪೂರೈಕೆ ಕುರಿತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯು ಕಾಲ ಕಾಲಕ್ಕೆ ಸಭೆ ನಡೆಸಿ ಕುಡಿಯುವ ನೀರಿನ ಪೂರೈಕೆಯ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡುವಂತೆ ಸೂಚಿಸಿದರು.ಗ್ರಾಮ ಲೆಕ್ಕಿಗರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿನ ಕೊಳವೆ ಬಾವಿಗಳ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು. ಪಿಡಿಒಗಳ ಮೂಲಕವೂ ಸಹ ತಹಸೀಲ್ದಾರ್ ಮತ್ತು ಇಒಗಳು ಮಾಹಿತಿ ಪಡೆಯಬೇಕು, ಇದಕ್ಕೂ ಮುಂಚೆ ಸಮಸ್ಯಾತ್ಮಕ ಗ್ರಾಮಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಪೂರೈಸಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಪಡೆದು ನೀರು ಪೂರೈಸಬೇಕು. ಈ ಯಾವುದು ಪ್ರಯತ್ನಗಳು ಕೈಗೂಡದಿದ್ದಲ್ಲಿ ಮಾತ್ರ ಹೊಸ ಕೊಳವೆ ಬಾವಿಗೆ ಶಾಸಕರ ನೇತೃತ್ವದ ಟಾಸ್ಕ್ ಪೋರ್ಸ್ ಸಮಿತಿಗೆ ಪ್ರಸ್ತಾವನೆ ಸಲ್ಲಿಸಿ, ಅನುಮೋದನೆ ಪಡೆದು ಹೊಸ ಕೊಳವೆ ಬಾವಿಗಳ ಕೊರೆಸುವಿಕೆಗೆ ಮುಂದಾಗಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.ಬರಪರಿಶೀಲನೆ ಮತ್ತು ಕುಡಿಯುವ ನೀರಿನ ಪೂರೈಕೆಗಾಗಿ ನೇಮಿಸಲಾಗಿರುವ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಬೇಕು ಮತ್ತು ರೈತರೊಂದಿಗೆ ಮಾತನಾಡಬೇಕು. ಖಾಸಗಿ ಬೋರ್‌ವೆಲ್ ಹೊಂದಿರುವ ರೈತರನ್ನು ಸಂರ್ಕಿಪಸಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಕ್ಷೇತ್ರ ಭೇಟಿ ಮಾಡಬೇಕು. ಇಲ್ಲದಿದ್ದಲ್ಲಿ ಅಂತಹವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಸಿದರು.ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಅವರು ಮಾತನಾಡಿ, ಅತೀ ತರ್ತು ಸಂದರ್ಭದಲ್ಲಿ ಹೆಚ್ಚು ಮನೆಗಳಿರುವ ಗ್ರಾಮಗಳಿಗೆ ಜೆ.ಜೆ.ಎಂ ಯೋಜನೆಯಲ್ಲಿ ಅವಕಾಶ ಇರುವುದರಿಂದ ಅನುಮೋದನೆ ಪಡೆದು ಪ್ರಸ್ತಾವನೆ ಸಲ್ಲಿಸಿ ಹೊಸ ಕೊಳವೆ ಬಾವಿಗಳನ್ನು ಕರೆಸಿಕೊಳ್ಳುವಂತೆ ಸೂಚಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಹಾಗೂ ಜಿಲ್ಲಾ ಮಟ್ಟದ ಬರ ನರ್ವಮಹಣೆ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.