ಕನ್ನಡಪ್ರಭ ವಾರ್ತೆ ಮದ್ದೂರು

ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಮತ್ತು ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಮಂಡ್ಯ ರೈತರು ಬೆಂಬಲ ನೀಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಪಟ್ಟಣದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಜಿಪಂ ಮಾಜಿ ಅಧ್ಯಕ್ಷೆ ಲಲಿತಾ ಪ್ರಕಾಶ್ ಪುತ್ರನ ವಿವಾಹ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಂಡಿದ್ದ ಔತಣಕೂಟದಲ್ಲಿ ಪಾಲ್ಗೊಂಡು ವಧು-ವರರನ್ನು ಆಶೀರ್ವದಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಡದಿ ಟೌನ್ ಶಿಪ್ ಹೋರಾಟಕ್ಕೆ ಈಗಾಗಲೇ ರೈತಪರ ಮತ್ತು ಕನ್ನಡ ಪರ ಸಂಘಟನೆಗಳು ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ ಮಂಡ್ಯ, ತುಮಕೂರು ಮತ್ತು ಮೈಸೂರು ಭಾಗದ ರೈತರು ಬಿಡದಿ ರೈತರ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಕೋರಿದರು.

ಟೌನ್ ಶಿಪ್ ವಿರುದ್ಧ ನಾವು ಯಾವುದೇ ರಾಜಕೀಯ ಲಾಭಕ್ಕಾಗಿ ಹೋರಾಟ ಮಾಡುತ್ತಿಲ್ಲ. ಭೂಮಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ರೈತರಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಹೋರಾಟಕ್ಕೆ ಕೈಜೋಡಿಸಿದೆ ಎಂದು ಸ್ಪಷ್ಟಪಡಿಸಿದರು.


ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ವಂಚಿತ ಶಾಸಕರು ಜೆಡಿಎಸ್ ಸೇರುತ್ತಾರಾ ಎಂಬ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಕೇಂದ್ರ ಸಚಿವರು, ಜೆಡಿಎಸ್ ಸೇರುವುದು ಅಸಮಾಧಾನಿತ ಶಾಸಕರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ ಎಂದರು.

ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಬಿಡದಿ ಟೌನ್ ಶಿಪ್, ನೈಸ್ ಯೋಜನೆ ಒಳಗೊಂಡಂತೆ ರಾಜ್ಯ ಸರ್ಕಾರದ ಹಲವು ವೈಫಲ್ಯಗಳ ಬಗ್ಗೆ ಪ್ರಸ್ತಾಪಿಸಿ ಜೆಡಿಎಸ್ ಮತ್ತು ಬಿಜೆಪಿ ಜಂಟಿ ಹೋರಾಟ ನಡೆಸಲಿದೆ. ಈ ಬಗ್ಗೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ಮುಖಂಡರಾದ ಕೂಳಗೆರೆ ಶೇಖರ್, ಶಂಕರ್ ಮತ್ತಿತರರು ಇದ್ದರು.