ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರಾಹುಲ್ ರತ್ನಂ ಪಾಂಡೆ ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಸುಲ್ತಾನ್ ಬತ್ತೇರಿ-ತಣ್ಣೀರುಬಾವಿ ಬೋ ಸ್ಟ್ರಿಂಗ್ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಆಯುಕ್ತರು, ಕಾಮಗಾರಿಯ ಪ್ರಗತಿ ಕುರಿತು ಸ್ಮಾರ್ಟ್ ಸಿಟಿ ಹಾಗೂ ಎಂಜಿನಿಯರಿಂಗ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುಲ್ತಾನ್ ಬತ್ತೇರಿ ಸುತ್ತಮುತ್ತಲಿನ ರಸ್ತೆಗಳಿಗೆ ಭೇಟಿ ನೀಡಿ ರಸ್ತೆ ಪರಿಸ್ಥಿತಿ ಪರಿಶೀಲಿಸಿದರು.ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೈಗೊಳ್ಳಲಾಗುತ್ತಿರುವ 450 ಮೀಟರ್ ಉದ್ದದ ನೇತ್ರಾವತಿ ವಾಟರ್ಫ್ರಂಟ್ ಅಭಿವೃದ್ಧಿ ಯೋಜನೆ ಸ್ಥಳಕ್ಕೂ ಭೇಟಿ ನೀಡಿದ ಅವರು, ಅಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಸಂಭಾವ್ಯ ಅವಕಾಶಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ವೆಲೆನ್ಸಿಯಾ ಜೆರೋಸಾ ಶಾಲೆ ಸಮೀಪದಿಂದ ಸೂಟರ್ಪೇಟೆ ಸಂಪರ್ಕಿಸುವ ಮಾರ್ಗದಲ್ಲಿ ಎಂಜಿಎನ್ವಿವೈ 2.0 ಯೋಜನೆಯಡಿ ಪ್ರಗತಿಯಲ್ಲಿರುವ ಕಾಂಕ್ರಿಟ್ ರಸ್ತೆ ಹಾಗೂ ಒಳಚರಂಡಿ ಕಾಮಗಾರಿ ಪರಿಶೀಲಿಸಿದರು. ನಡೆಯುತ್ತಿರುವ ರಸ್ತೆ ಕಾಮಗಾರಿಯ ಪ್ರಗತಿ ಕುರಿತು ಎಂಜಿನಿಯರಿಂಗ್ ಅಧಿಕಾರಿಗಳು ಆಯುಕ್ತರಿಗೆ ಮಾಹಿತಿ ನೀಡಿದರು.ಪಾಲಿಕೆಯ ಎಂಜಿನಿಯರಿಂಗ್ ಹಾಗೂ ಸ್ಮಾರ್ಟ್ ಸಿಟಿ ಯೋಜನಾ ವಿಭಾಗದ ಅಧಿಕಾರಿಗಳು ಇದ್ದರು.