ಕೇಂದ್ರ ಸರ್ಕಾರದಿಂದ ಮನ್‌ರೇಗಾ ಸ್ವರೂಪ ಬದಲಾವಣೆ ಹಾಗೂ ಮಹಾತ್ಮ ಗಾಂಧೀಜಿ ಹೆಸರು ಬದಲಿಸಿದ್ದನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸುಳ್ಯದಿಂದ ಮೂಲ್ಕಿವರೆಗೆ 4 ದಿನಗಳ 100 ಕಿಮೀ ಪಾದಯಾತ್ರೆ ಫೆ.9ರಿಂದ 12ರವರೆಗೆ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ

ಮಂಗಳೂರು: ಕೇಂದ್ರ ಸರ್ಕಾರದಿಂದ ಮನ್‌ರೇಗಾ ಸ್ವರೂಪ ಬದಲಾವಣೆ ಹಾಗೂ ಮಹಾತ್ಮ ಗಾಂಧೀಜಿ ಹೆಸರು ಬದಲಿಸಿದ್ದನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸುಳ್ಯದಿಂದ ಮೂಲ್ಕಿವರೆಗೆ 4 ದಿನಗಳ 100 ಕಿಮೀ ಪಾದಯಾತ್ರೆ ಫೆ.9ರಿಂದ 12ರವರೆಗೆ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೃಹತ್‌ ಪಾದಯಾತ್ರೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರಾದ ದಿನೇಶ್‌ ಗುಂಡೂರಾವ್‌, ಸಂತೋಷ್‌ ಲಾಡ್‌, ಪ್ರಿಯಾಂಕ್‌ ಖರ್ಗೆ, ಕೃಷ್ಣ ಭೈರೇಗೌಡ ಮತ್ತಿತರ ಪ್ರಮುಖರು ವಿವಿಧ ದಿನಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮೊದಲ ದಿನ ಫೆ.9ರಂದು ಬೆಳಗ್ಗೆ 8.30ಕ್ಕೆ ಸುಳ್ಯದ ಗಾಂಧಿನಗರದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಅಂದು ಗಾಂಧಿನಗರದಿಂದ ಕುಂಬ್ರ ಜಂಕ್ಷನ್‌ವರೆಗೆ ಪಾದಯಾತ್ರೆ ನಡೆಯಲಿದೆ. 2ನೇ ದಿನವಾದ ಫೆ.10ರಂದು ಕುಂಬ್ರದಿಂದ ಮಾಣಿ, ಫೆ.11ರಂದು ಕಲ್ಲಡ್ಕದಿಂದ ಫರಂಗಿಪೇಟೆ, ಫೆ.12ರಂದು ಮಂಗಳೂರಿನ ಲಾಲ್‌ಬಾಗ್‌ನಿಂದ ಮೂಲ್ಕಿವರೆಗೆ ಪಾದಯಾತ್ರೆ ನಡೆಯಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಹರೀಶ್‌ ಕುಮಾರ್‌ ಮಾಹಿತಿ ನೀಡಿದರು.

ಪ್ರತಿದಿನ 25- 28 ಕಿಮೀ ಪಾದಯಾತ್ರೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಉಪಹಾರ ಮುಗಿಸಿ, 8.30 ಗಂಟೆಗೆ ಪಾದಯಾತ್ರೆ ಆರಂಭಿಸಲಾಗುವುದು. ಮಧ್ಯಾಹ್ನ 2 ಗಂಟೆ ಭೋಜನ ವಿರಾಮದ ಬಳಿಕ ಸಂಜೆ 6 ಗಂಟೆವರೆಗೆ ಮುಂದುವರಿಯಲಿದೆ. ಪ್ರತಿದಿನ ಪಾದಯಾತ್ರೆಯ ಕೊನೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. ಫೆ.9ರಂದು ಕುಂಬ್ರ, ಫೆ.10ರಂದು ಮಾಣಿ, ಫೆ.11ರಂದು ಫರಂಗಿಪೇಟೆ, ಫೆ.12ರಂದು ಮೂಲ್ಕಿಯಲ್ಲಿ ಸಮಾವೇಶ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾತ್ರವಲ್ಲದೆ, ಸಾರ್ವಜನಿಕರು ಕೂಡ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಮೂಲಕ ಜನರಿಗೆ ಕೇಂದ್ರ ಸರ್ಕಾರ ಮಾಡಿರುವ ಮೋಸವನ್ನು ಮನವರಿಕೆ ಮಾಡಲಾಗುವುದು ಎಂದು ಹೇಳಿದರು.

ವಿಧಾನ ಪರಿಷತ್‌ ಶಾಸಕ ಐವನ್ ಡಿಸೋಜ ಮಾತನಾಡಿ, ಕೇಂದ್ರ ಸರ್ಕಾರವು ಸರಿಯಾದ ಚರ್ಚೆಯನ್ನೇ ನಡೆಸದೆ ತರಾತುರಿಯಲ್ಲಿ ವಿಬಿ ಜಿರಾಮ್‌ಜಿ ಕಾಯ್ದೆ ಜಾರಿಗೆ ತಂದಿದೆ. ಜನಪ್ರಿಯ ಕಾರ್ಯಕ್ರಮದಿಂದ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆಸುವುದು ಮತ್ತು ಬಡವರನ್ನು ಮತ್ತಷ್ಟು ಬಡವರನ್ನಾಗಿಸುವುದೇ ಕೇಂದ್ರ ಸರ್ಕಾರದ ಉದ್ದೇಶ. ಈ ಕಾಯ್ದೆಯನ್ನು ಹಿಂಪಡೆಯುವವರೆಗೂ ಹೋರಾಟ ನಡೆಸಲಾಗುವುದು ಎಂದರು.

ಮಾಜಿ ಶಾಸಕ ಜೆಆರ್‌ ಲೋಬೊ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ಪದ್ಮರಾಜ್‌ ಆರ್‌. ಪೂಜಾರಿ, ಶಶಿಧರ ಹೆಗ್ಡೆ, ಭಾಸ್ಕರ ಕೆ., ಶುಭೋದಯ ಆಳ್ವ, ನವಾಝ್‌, ಸುಹಾನ್‌ ಆಳ್ವ ಮತ್ತಿತರರಿದ್ದರು.