ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಜಂಟಿ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಕರಾಟೆ ಪಂದ್ಯಾಟವು ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.

ಉಡುಪಿ: ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಜಂಟಿ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಕರಾಟೆ ಪಂದ್ಯಾಟವು ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಆಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಉದ್ಘಾಟಿಸಿ, ಕ್ರೀಡಾ ಮನೋಭಾವದಿಂದ ಸ್ಪರ್ಧಿಗಳು ಮಾನವೀಯ ಮೌಲ್ಯದೊಂದಿಗೆ ಭಾಗವಹಿಸಬೇಕು ಎಂದರು.

ಮುಖ್ಯ ಅತಿಥಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಪ್ರಖ್ಯಾತ್ ಶೆಟ್ಟಿ ಮಾತನಾಡಿ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಇಂಧನ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ , ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೊಂದಿದರೆ ವಿದ್ಯಾರ್ಥಿ ಜೀವನದಲ್ಲಿ ಇಟ್ಟ ಗುರಿಗಳನ್ನು ಕ್ಲಪ್ತ ಸಮಯದಲ್ಲಿ ಸಾಧಿಸಬಹುದು ಎಂದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ರೈ ಅವರ ಪ್ರಾಯೋಜಕತ್ವದಲ್ಲಿ ಫ್ರೆಂಡ್ಸ್ ಅಂಬಲಪಾಡಿ ತಂಡ ಹುಲಿವೇಷ ಪ್ರದರ್ಶನ ನೀಡಿದರು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಮೀದಾ ಬಾನು, ಹಳೆ ವಿದ್ಯಾರ್ಥಿ ಸಂಘದ ಸಂತೋಷ್ ಸುವರ್ಣ, ನಿರ್ಣಾಯಕ ಮಂಡಳಿಯ ಹಿರಿಯ ಉಪಾಧ್ಯಕ್ಷ ಡಾ. ನಿಶಾಂತ್, ಉಡುಪಿ ಜಿಲ್ಲಾ ಟೀಚರ್ಸ್ ಕರಾಟೆ ಅಸೋಸಿಯೇಶನ್ ಅಧ್ಯಕ್ಷ ರೋಹಿತ್, ಕಾರ್ಯದರ್ಶಿ ವಾಮನ್ ಪಾಲನ್, ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಅಧ್ಯಕ್ಷ ರವಿಕುಮಾರ್ ಉದ್ಯಾವರ, ಮನೋಜ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಯುವಜನ ಕ್ರೀಡಾ ಸಬಲೀಕರಣ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಬಾಲರಾಜ್ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಾರುತಿ ಕಾರ್ಯಕ್ರಮ ನಿರೂಪಿಸಿದರು.