ಸಾರಾಂಶ
ಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರು. ವೆಚ್ಚದ 344 ಉಪಕರಣ ವಿತರಣೆ
ಕನ್ನಡಪ್ರಭ ವಾರ್ತೆ ಮಡಿಕೇರಿಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ವಿಕಲಚೇತನರ ಇಲಾಖೆ ವತಿಯಿಂದ ‘ಸಾಮಾಜಿಕ ಆಧಾರಿತ ಸಿವಿಲ್’ ಯೋಜನೆಯಲ್ಲಿ ದಿವ್ಯಾಂಗರಿಗೆ ಸಾಧನ ಸಲಕರಣೆಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಂಗಳವಾರ ವಿತರಿಸಿದರು.
ನಗರದ ರೆಡ್ಕ್ರಾಸ್ ಭವನದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಮಾತನಾಡಿದ ಸಂಸದರು, ಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರು. ವೆಚ್ಚದ 344 ಸಾಧನ ಸಲಕರಣೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಅವಲಂಬಿತರಾಗಿದ್ದಾರೆ. ಆ ನಿಟ್ಟಿನಲ್ಲಿ ವಿಕಲಚೇತನರಿಗೆ ಇನ್ನೂ ಹೆಚ್ಚಿನ ಅವಕಾಶ ನೀಡಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಸಾಧನ ಉಪಕರಣ ಕಲ್ಪಿಸುತ್ತಿದೆ. ರಾಷ್ಟ್ರದ ಅಭಿವೃದ್ಧಿಗೆ ವಿಕಲಚೇತನರು ಸಹ ಹಲವು ಕೊಡುಗೆ ನೀಡಿದ್ದು, ವಿಕಲಚೇತನರು ಇತರರಂತೆ ಬದುಕು ನಡೆಸುವಂತಾಗಲು ಸರ್ಕಾರ ಹಲವು ಸೌಲಭ್ಯ ನೀಡುತ್ತಿದೆ ಎಂದು ತಿಳಿಸಿದರು.ಭಾರತ ಬಲಿಷ್ಠ ಹಾಗೂ ಆದರ್ಶ ಸಮಾಜ ನಿರ್ಮಾಣ ಮಾಡಲು ಎಲ್ಲರ ಕೊಡುಗೆ ಅಗತ್ಯ. ಆ ನಿಟ್ಟಿನಲ್ಲಿ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ವಿಕಲಚೇತನರಿಗೆ ಸಾಧ್ಯವಾದಷ್ಟು ಸಹಕಾರ ನೀಡುವಂತಾಗಬೇಕು ಎಂದರು.* ವಿಕಸಿತ ಭಾರತಕ್ಕೆ ಎಲ್ಲರ ಕೊಡುಗೆ ಅಗತ್ಯ
ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿ, ವಿಕಲಚೇತನರಿಗಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಸ್ವಾಭಿಮಾನಿ ಮತ್ತು ಸ್ವಾವಲಂಬಿ ಬದುಕು ನಡೆಸಲು ಹಲವು ಕಾರ್ಯಕ್ರಮ ಜಾರಿಗೊಳಿಸಿದೆ ಎಂದರು.2047ರೊಳಗೆ ವಿಕಸಿತ ಭಾರತ ಆಗಬೇಕು ಎಂಬ ದೃಷ್ಟಿಯಿಂದ ಸಮಾಜದ ಕಟ್ಟಕಡೆಯವರನ್ನು ಗುರುತಿಸಿ ವಿಕಲಚೇತನರು ಸೇರಿದಂತೆ ಎಲ್ಲ ಜನ ಸಾಮಾನ್ಯರಿಗೂ ಹಲವು ಕಾರ್ಯಕ್ರಮ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಹೇಳಿದರು.ವಿಕಲಚೇತನರು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರಂತೆ ಬದುಕು ನಡೆಸುವಂತಾಗಬೇಕು ಎಂದು ಕೆ.ಜಿ.ಬೋಪಯ್ಯ ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಸಿರಸಗಿ ಮಾತನಾಡಿ, ವಿಕಲತೆ ಶಾಪವಲ್ಲ. ಆದರೆ ಅದನ್ನು ಮೆಟ್ಟಿ ನಿಲ್ಲುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವ ಉದ್ಯೋಗ ಕೈಗೊಳ್ಳುವಂತಾಗಬೇಕು. ಸ್ವಾವಲಂಬಿ ಬದುಕು ನಡೆಸುವಂತಾಗಬೇಕು ಎಂದರು.ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ, ರೆಡ್ಕ್ರಾಸ್ ಸಂಸ್ಥೆಯಿಂದ ವಿಕಲಚೇತನರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಸದ್ಯ 25 ಜನರಿಗೆ ರೈನ್ಕೋಟ್ ವಿತರಿಸಲಾಗಿದೆ. ಸರ್ಕಾರದ ಸಹಕಾರದಲ್ಲಿ ರೆಡ್ಕ್ರಾಸ್ ಭವನ ನಿರ್ಮಿಸಲಾಗಿದ್ದು, ಕಟ್ಟಡದ ಮೇಲ್ಭಾಗದಲ್ಲಿ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವಂತೆ ಸಂಸದರಲ್ಲಿ ಇದೇ ಸಂದರ್ಭದಲ್ಲಿ ಕೋರಿದರು.ಜಿಲ್ಲಾ ವಿಕಲಚೇತನರ ಅಧಿಕಾರಿ ವಿಮಲಾ ಮಾತನಾಡಿ, ಜಿಲ್ಲೆಯಲ್ಲಿನ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದ್ದು, ಮಳೆ ಇರುವ ಕಾರಣ ಆಯಾಯ ತಾಲೂಕು ಮಟ್ಟದಲ್ಲಿ ಸಾಧನ ಸಲಕರಣೆ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಜಿಲ್ಲಾ ವಿಕಲಚೇತನರ ಸಂಘ ಅಧ್ಯಕ್ಷ ಮಹೇಶ್ವರ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾ ಅಧಿಕಾರಿ ಪ್ರಸನ್ನ ಕುಮಾರ್, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಅಂಕಾಚಾರಿ, ರೆಡ್ಕ್ರಾಸ್ ಸಂಸ್ಥೆಯ ಸಹ ಕಾರ್ಯದರ್ಶಿ ಮಧುಕರ್ ಇತರರು ಇದ್ದರು.--------------
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತದಡಿ ಸಮಗ್ರ ಸಂಪೂರ್ಣ ಅಭಿವೃದ್ಧಿ ಆಗಬೇಕಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಪಾತ್ರವು ಪ್ರಮುಖವಾಗಿದೆ. ನವ ಭಾರತ ನಿರ್ಮಾಣಕ್ಕೆ ಎಲ್ಲರ ಕೊಡುಗೆ ಅಗತ್ಯ.। ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ