ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿರುವ ಅಲೆಮಾರಿ ಸಮುದಾಯಕ್ಕೆ ಸರ್ಕಾರದ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸದೃಢರನ್ನಾಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ತಿಳಿಸಿದರು.ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಬೆಳಗಾವಿ ಜಿಲ್ಲೆಯ ಅಲೆಮಾರಿ ಸಮುದಾಯದ ಮುಂಡರರೊಂದಿಗೆ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲೆಮಾರಿ ಹಾಗೂ ಅರೆ ಅಲೆಮಾರಿಗಳಲ್ಲಿ 46 ಜನಾಂಗದವರಿದ್ದು, ಇವರು ಆರ್ಥಿಕ ಮತ್ತು ಅಭಿವೃದ್ಧಿ ಚಟುವಟಿಕೆ ಕೈಗೊಂಡು ಸ್ಥಿರವಾಗಿ ಒಂದು ಕಡೆ ನೆಲೆಸುವಂತೆ ಮಾಡಲು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನಿಗಮ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಪೂರಕವಾಗಿದೆ. ಪ್ರತಿ ಜಿಲ್ಲೆಯಲ್ಲೂ ಪ್ರವಾಸ ಮಾಡಿ ಅಲೆಮಾರಿಗಳ ಸ್ಥಿತಿಗತಿ, ಸಮಸ್ಯೆಗಳಲ್ಲಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಆದ್ಯತೆ ನೀಡಬೇಕು. ಅಲೆಮಾರಿಗಳು ಮನೆ, ಸ್ವಯಂ ಉದ್ಯೋಗ, ಒಟ್ಟಾರೆಯಾಗಿ ಜೀವನದಲ್ಲಿ ಭದ್ರತೆ ದೊರೆತು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತಿ ಹಂತದಲ್ಲಿ ಸರ್ಕಾರ ಸವಲತ್ತುಗಳನ್ನು ಒದಗಿಸುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಲೆಮಾರಿ ಜನಾಂಗದ ಜಿಲ್ಲಾಧ್ಯಕ್ಷ ಭಜಂತ್ರಿ ಮಾತನಾಡಿ, ಅಲೆಮಾರಿ ಹಾಗೂ ಅರೆ ಅಲೆಮಾರಿಗಳಲ್ಲಿ 46 ಜನಾಂಗದವರಿದ್ದು, ಎಲ್ಲಾ ಸಮುದಾಯಕ್ಕೂ ಮೂಲಸೌಲಭ್ಯ ದೊರಯಬೇಕು, ಅಂಬೇಡ್ಕರ್ ನಿಗಮಕ್ಕೆ ಸಿಗುತ್ತಿರುವರುವಂತೆ ಅಲೆಮಾರಿ ನಿಗಮಕ್ಕೂ ಮೂಲ ಸೌಕರ್ಯ ಸಿಗುವುದರ ಜತೆಗೆ ಅಷ್ಟೇ ಪ್ರಮಾಣದ ಅನುದಾನ ದೊರೆಯಬೇಕು. ಪ್ರತ್ಯೇಕ ನಿಗಮದ ಕಚೇರಿ ತೆರೆಯುವುದು, ಅಲೆಮಾರಿ ಜನಾಂಗದ ಕಚೇರಿಗೆ ಸಿಬ್ಬಂದಿ ನೇಮಿಸುವುದು, ಸರ್ಕಾರದಿಂದ ಸವಲತ್ತುಗಳು ದೊರೆಯಬೇಕು. ಅಲೆಮಾರಿಗಳ ಸ್ಥಿತಿಗತಿ, ಸಮಸ್ಯೆಗಳನ್ನು ಪರಿಶೀಲಿಸಿ ಹೆಚ್ಚಿನ ಅನುದಾನ ದೊರೆಯುವಂತೆ ಮಾಡಬೇಕು ಎಂದು ಹೇಳಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಬಸವರಾಜ ಶಿಂಘಾಟಿ , ರವಿಕುಮಾರ, ಯಲ್ಲಪ್ಪ, ಬಾಳೇಶ, ಮುತ್ತಪ್ಪ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.