ಸಾರಾಂಶ
ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಅಂಗಡಿ, ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಫಲಕಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಅಂಗಡಿ, ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಫಲಕಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಿದ್ದಾರೆ.ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಅಂಗಡಿ, ವಾಣಿಜ್ಯ ಸಂಕೀರ್ಣಗಳ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ಅಂಗಡಿಕಾರರಿಗೆ ನೋಟಿಸ್ ಜಾರಿಗೊಳಿಸಲಾಗುತ್ತಿದೆ. ಇದನ್ನು ಸಹಿಸದ ಭಾಷಾಂಧ ಶಿವಸೇನೆ ಕಾರ್ಯಕರ್ತರು ಶುಕ್ರವಾರ ಕೊಲ್ಲಾಪುರದಲ್ಲಿರುವ ವಾಣಿಜ್ಯ ಸಂಕೀರ್ಣಗಳ ಕನ್ನಡ ನಾಮಫಲಕ ಕಿತ್ತು ಹಾಕಿದ್ದಾರೆ. ನಾಮಫಲಕಗಳಿಗೆ ಬೆಂಕಿ ಹಚ್ಚಿ ಪುಂಡಾಟಿಕೆ ಮೆರೆದಿದ್ದಾರೆ. 10ಕ್ಕೂ ಅಧಿಕ ಕನ್ನಡ ಫಲಕಗಳನ್ನು ಕಿತ್ತು ಹಾಕಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಕೊಲ್ಲಾಪುರ ಶಿವಸೇನೆ ಮುಖಂಡ ಸಂಜಯ ಪವಾರ, ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದಲ್ಲಿರುವ ಬೆಳಗಾವಿ ಸೇರಿದಂತೆ ಮರಾಠಿ ಬಹುಭಾಷಿಕ ಪ್ರದೇಶಗಳಲ್ಲಿ ಕನ್ನಡ ಕಡ್ಡಾಯಗೊಳಿಸಲಾಗುತ್ತಿದೆ. ಮರಾಠಿ ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ಮರಾಠಿಗರ ಮೇಲೆ ಕರ್ನಾಟಕ ಸರ್ಕಾರ ದೌರ್ಜನ್ಯ ಮುಂದುವರಿಸಿದೆ ಎಂದು ಆರೋಪಿಸಿದರು.ಬೆಳಗಾವಿ ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ಬೆಳಗಾವಿ ಸೇರಿದಂತೆ ಗಡಿಭಾಗದಲ್ಲಿರುವ ಮರಾಠಿ ಬಹುಭಾಷಿಕ ಪ್ರದೇಶಗಳು ಮಹಾರಾಷ್ಟ್ರ ರಾಜ್ಯಕ್ಕೆ ಸೇರ್ಪಡೆಯಾಗಲಿವೆ. ಮಹಾರಾಷ್ಟ್ರ ರಾಜ್ಯದಲ್ಲಿ ಮರಾಠಿ ಜೊತೆಗೆ ಇಂಗ್ಲಿಷ್ ನಾಮಫಲಕ ಹಾಕಿದರೆ ನಮ್ಮದೇನೂ ಅಭ್ಯಂತರ ಇಲ್ಲ. ಆದರೆ, ಯಾವುದೇ ಕಾರಣಕ್ಕೂ ನಾವು ಕನ್ನಡ ನಾಮಫಲಕ ಹಾಕಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.