ಹಾವೇರಿ: ಆಧುನಿಕ ಯುಗದಲ್ಲಿ ಆನ್‌ಲೈನ್ ಶಾಪಿಂಗ್ ಅಬ್ಬರದ ನಡುವೆ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸುವುದು ಅಗತ್ಯವಾಗಿದೆ. ಸಾರ್ವಜನಿಕರು ಈ ಉತ್ಪನ್ನಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಸ್ಥಳೀಯ ಕೈಗಾರಿಕೆಗಳನ್ನು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ಪುನೀತ್ ಬಿ. ಹೇಳಿದರು.ನಗರದ ಜಿಲ್ಲಾ ಗುರುಭವನದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಕೈಗಾರಿಕಾ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವಿದ್ಯಮಾನಗಳಲ್ಲಿ ಆನ್‌ಲೈನ್ ಸ್ಪರ್ಧೆ ಹೆಚ್ಚಾಗಿದೆ. ಅಮೇಜಾನ್, ಫ್ಲಿಪ್‌ಕಾರ್ಟ್ ಹಾಗೂ ಮಿಶೋಗಳಂತಹ ಆನ್‌ಲೈನ್ ವೇದಿಕೆಗಳ ಮಾದರಿಯಲ್ಲೇ ಸ್ವ-ಸಹಾಯ ಸಂಘಗಳ ಉತ್ಪನ್ನಗಳು ಲಭ್ಯವಾಗುವಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಉತ್ಪಾದಕರು ಆನ್‌ಲೈನ್ ಪ್ರಸಾರ ಮತ್ತು ಸಾರ್ವಜನಿಕ ಸಂಪರ್ಕಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು. ಜಿಲ್ಲೆಯ ಪ್ರಸಿದ್ಧ ''''''''''''''''ಕಂಬಳಿ'''''''''''''''' ಉತ್ಪನ್ನಗಳು ಮೇಳದಲ್ಲಿ ಭಾಗವಹಿಸದ ಬಗ್ಗೆ ವಿಷಾದ ವ್ಯಕ್ತಪಡಿಸಿದರು.ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಂ.ಎಂ. ಮೈದೂರ ಮಾತನಾಡಿ, ಉತ್ಪಾದನೆ ಎಷ್ಟು ಮುಖ್ಯವೋ ಮಾರುಕಟ್ಟೆಯೂ ಅಷ್ಟೇ ಮುಖ್ಯ. ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಸಣ್ಣ ಕೈಗಾರಿಕೆಗಳು ದೊಡ್ಡ ಮಟ್ಟದಲ್ಲಿ ಬೆಳೆಯಬೇಕು, ಆಗ ಮಾತ್ರ ಉತ್ಪಾದಕರು ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಹೇಳಿದರು. ಗ್ರಾಮೀಣ ಕೈಗಾರಿಕಾ ವಿಭಾಗದ ಉಪನಿರ್ದೇಶಕ ರಾಜೇಂದ್ರ ನಾಮದೇವ ಕದಂ ಮಾತನಾಡಿ, ಫೆ. 28ರಿಂದ ಮಾ.4ರ ವರೆಗೆ ಒಟ್ಟು 5 ದಿನಗಳ ಕಾಲ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, 25 ಮಳಿಗೆಗಳಲ್ಲಿ ವೈವಿಧ್ಯಮಯ ಉತ್ಪನ್ನಗಳ ಪ್ರದರ್ಶನ ಸೌಲಭ್ಯ ಒದಗಿಸಲಾಗಿದೆ. ಹಾವೇರಿ ಜಿಲ್ಲೆಯ ಕುಶಲಕರ್ಮಿಗಳು, ಖಾದಿ ಗ್ರಾಮೋದ್ಯೋಗ, ಕೈಮಗ್ಗ ಹಾಗೂ ಸ್ವ-ಸಹಾಯ ಗುಂಪುಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಮೇಳ ಆಯೋಜಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ಗೃಹ ಉತ್ಪನ್ನಗಳನ್ನು ಖರೀದಿಸುವ ಮೂಲಕ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮುಖಂಡ ಪ್ರಸನ್ನ ಹಿರೇಮಠ ಸೇರಿದಂತೆ ಜಿಲ್ಲೆಯ ಸ್ವ-ಸಹಾಯ ಉತ್ಪಾದಕರು ಹಾಗೂ ಇತರರು ಇದ್ದರು.