ಕನ್ನಡಪ್ರಭ ವಾರ್ತೆ ಅಥಣಿ
ಮಹಾಶಿವರಾತ್ರಿ ಪ್ರಯುಕ್ತ ರವಿವಾರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಶಿವನ ದೇವಸ್ಥಾನಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮಹಾ ಶಿವರಾತ್ರಿಯನ್ನು ಆಚರಣೆ ಮಾಡಲಾಯಿತು. ಶಿವಲಿಂಗಕ್ಕೆ ಹೋಮ, ಹವನ, ಅಭಿಷೇಕ ಹಾಗೂ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.ಪಟ್ಟಣದ ಹೆಸ್ಕಾಂ ಕಚೇರಿ ಆವರಣದ ಮಹಾದೇವ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ಕ್ಷೀರಾಭಿಷೇಕ, ಗಂಧಾಬಿಷೇಕ, ಕುಂಕುಮಾರ್ಚನೆ ಮಾಡಿ ಬಿಲ್ಪತ್ರೆ ಹಲವಾರು ವಿಧದ ಹೂವುಗಳೊಂದಿಗೆ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದಲೆ ಭಕ್ತರು ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಧ್ಯಾನದಲ್ಲಿ ಮಘ್ನರಾಗಿದ್ದರು.
ತಾಲೂಕಿನ ಪುರಾತನ ದೇವಸ್ಥಾನ ರಾಮತೀರ್ಥ ಗ್ರಾಮದ ಉಮಾರಾಮೇಶ್ವರ ದೇವರಿಗೆ ವಿಶೇಷ ಪೂಜೆ, ರುದ್ರಾಭಿಷೇಕ ಸಲ್ಲಿಸಲಾಯಿತು. ಸುತ್ತಮುತ್ತಲಿನ ಸಾವಿರಾರು ಭಕ್ತರು ದೇವಸ್ಥಾನದ ಶಿವಲಿಂಗದ ದರ್ಶನ ಪಡೆದು ಪುನೀತರಾದರು. ಅಥಣಿ ಪಟ್ಟಣದ ಆರಾಧ್ಯ ದೈವ ಸಿದ್ಧೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಅಭಿಷೇಕ ನಡೆಸಲಾಯಿತು. ದೇವರ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.ಸಾಮೂಹಿಕ ಇಷ್ಟಲಿಂಗ ಪೂಜೆ:ಪಟ್ಟಣದ ಸುಕ್ಷೇತ್ರ ಗಚ್ಚಿನಮಠದಲ್ಲಿ ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳ ಕರ್ತೃ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ಸಲ್ಲಿಸಿ, ಬಿಲ್ವಪತ್ರೆ ಮತ್ತು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಮುಂಜಾನೆ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮುರುಘೇಂದ್ರ ಶಿವಯೋಗಿಗಳ ಬೆಳ್ಳಿ ಪಲ್ಲಕ್ಕಿ ಉತ್ಸವ ಜರುಗಿತು. ಮಧ್ಯಾಹ್ನದವರೆಗೆ ಮಹಾಶಿವರಾತ್ರಿ ಪ್ರಸಾದ ಸಂಪರ್ಪಣೆ ಜರುಗಿತು. ಗಚ್ಚಿನ ಮಠದ ಶಿವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಸೇವಾರ್ಥಿಗಳಿಗೆ ಸನ್ಮಾನಿಸಲಾಯಿತು.