ಹಿರೇಕೆರೂರು ಪಟ್ಟಣದ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಮಿತಿಯಿಂದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಹಿರೇಕೆರೂರು: ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸಮಾನತೆ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುತ್ತವೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.ಪಟ್ಟಣದ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಮಿತಿಯು ಎರಡನೇ ವರ್ಷದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಘಟನೆ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಆಡಂಬರ, ದುಂದುವೆಚ್ಚ ಮತ್ತು ವರದಕ್ಷಿಣೆ ಪದ್ಧತಿಗೆ ಕಡಿವಾಣ ಹಾಕಿ, ಸರಳ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗತ್ತವೆ. ಸಂಘಟನೆಗಳ ಮೂಲಕ ಇಂಥ ಕಾರ್ಯಕ್ರಮಗಳನ್ನು ಮಾಡುವುದು ಪುಣ್ಯದ ಕೆಲಸ ಡಾ. ಬಿ.ಆರ್.ಅಂಬೇಡ್ಕರ್ ಅವರು ಈ ದೇಶದ ಸಂವಿಧಾನ ರಚನೆ ಮಾಡಿ ಎಲ್ಲಾ ಧರ್ಮಗಳು ಒಗ್ಗೂಡು ಕೊಂಡು ಹೋಗುವ ಹಾಗೆ ಮಾಡಿದ್ದಾರೆ. ಶಿಕ್ಷಣ ಸಂಘಟನೆ ಹೋರಾಟದ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮಾಡಬಹುದು ಎಂದು ತಿಳಿಸಿದ್ದಾರೆ. ಅವರ ಆಶಯಗಳನ್ನು ಈಡೇರಿಸಿ ದೇಶವನ್ನು ಮುನ್ನಡೆಸಬೇಕು ಎಂದರು. ಹೊಸ ಜೀವನಕ್ಕೆ ಕಾಲಿಡುತ್ತಿರುವ ನವ ದಂಪತಿಗಳು ಜೀವನದಲಿ ಬರುವ ಕಷ್ಟ ಸುಖಗಳನ್ನು ಸಮಾನವಾಗಿ ಸ್ವೀಕರಿಸಿ ಮುಂದೆ ಸಾಗಬೇಕು ಎಂದು ಶುಭ ಹಾರೈಸಿದರು.ಸಾಮೂಹಿಕ ವಿವಾಹದಲ್ಲಿ ನವ 9 ಜೋಡಿ ನವದಂಪತಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.ರಟ್ಟೀಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ತಿಪ್ಪಾಯಿಕೊಪ್ಪದ ಮಹಾಂತ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಭರಮಪ್ಪ ಹರಿಜನ, ಪ್ರಧಾನ ಕಾರ್ಯದರ್ಶಿ ಶಿವಾಜಿ ದೊಡ್ಡಮನಿ, ನಿವೃತ್ತ ಐಎಫ್ಎಸ್ ಅಧಿಕಾರಿ ಮಂಜುನಾಥ್ ತಂಬಾಕದ, ಜಿ.ಪಿ. ಪ್ರಕಾಶ, ಶಿವರಾಜ ಹರಿಜನ, ಪ್ರಶಾಂತ ತಿರಕಪ್ಪನವರ, ಗಿರೀಶ ಬಾರ್ಕಿ, ಮಾಲತೇಶ ಬಿಲ್ಲಳ್ಳಿ, ಪಿ.ನಾಗೇಂದ್ರ ಚೆನ್ನೇಶ್ ಬಾಲಣ್ಣನವರ್ ಹಾಗೂ ಅಂಬೇಡ್ಕರ್ ಸೇವಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಮಾಜದ ಮುಖಂಡರು ಇದ್ದರು.