ಮಾಜಿ ಶಾಸಕ ಬಿ. ಹರ್ಷವರ್ಧನ್‌ ನೇತೃತ್ವದಲ್ಲಿ ಜನಜಾಗೃತಿ ಕಾರ್ಯಕ್ರಮ

---------------ಕನ್ನಡಪ್ರಭ ವಾರ್ತೆ ನಂಜನಗೂಡುತಾಲೂಕನ್ನು ಗಾಂಜಾ ಹಾಗೂ ಮಾದಕ ವಸ್ತುಗಳಿಂದ ಮುಕ್ತಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಾಜಿ ಶಾಸಕ ಬಿ. ಹರ್ಷವರ್ಧನ್ ನೇತೃತ್ವದಲ್ಲಿ ಗುರುವಾರ “ಗಾಂಜಾ ಮುಕ್ತ, ಸ್ವಚ್ಛ ನಂಜನಗೂಡು” ಘೋಷವಾಕ್ಯದೊಂದಿಗೆ ಬೃಹತ್ ಬೈಕ್ ರ್ಯಾಲಿ ಹಾಗೂ ಜನಜಾಗೃತಿ ಕಾರ್ಯಕ್ರಮ ನಡೆಯಿತು.ಪಟ್ಟಣದ ಚಿಂತಾಮಣಿ ಗಣಪತಿ ದೇವಾಲಯದ ಬಳಿ ಮಾಜಿ ಶಾಸಕ ಬಿ. ಹರ್ಷವರ್ಧನ್ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿ, ನಂಜನಗೂಡು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಗಾಂಜಾ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಒಳಗಾಗುತ್ತಿರುವುದು ಸಮಾಜದ ಭವಿಷ್ಯಕ್ಕೆ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದರು.ಇನ್ನು ಹಳ್ಳಿ ಹಳ್ಳಿಗೂ ಗಾಂಜಾವನ್ನು ಯಾರು ಸರಬರಾಜು ಮಾಡುತ್ತಿದ್ದಾರೆ, ಮಾದಕ ವಸ್ತುಗಳು ಎಲ್ಲಿಂದ ಬರುತ್ತಿವೆ ಹಾಗೂ ಇದರ ಹಿಂದೆ ಇರುವ ಜಾಲ ಯಾವುದು ಎಂಬುದನ್ನು ಪತ್ತೆ ಹಚ್ಚಲು ಸಮಗ್ರ ತನಿಖೆ ನಡೆಸಬೇಕು ಪೊಲೀಸ್ ಇಲಾಖೆ ಸಿಬ್ಬಂದಿಗಳು ವಾಹನ ತಪಾಸಣೆ ಹಾಗೂ ದಾಖಲೆ ಪರಿಶೀಲನೆಗೆ ಸೀಮಿತವಾಗದೆ, ಪಟ್ಟಣ ವ್ಯಾಪ್ತಿಯಲ್ಲಿ ಪರಿಣಾಮಕಾರಿ ಗಸ್ತು ಮತ್ತು ನಿರಂತರ ಕಾರ್ಯಾಚರಣೆ ನಡೆಸುವ ಮೂಲಕ ಮಾದಕ ವಸ್ತುಗಳ ಮಾರಾಟ ಹಾಗೂ ಸರಬರಾಜಿನ ಮೂಲವನ್ನು ಪತ್ತೆ ಹಚ್ಚಬೇಕು ಎಂದು ಅವರು ಒತ್ತಾಯಿಸಿದರು.ಜೊತೆಗೆ ಮಾದಕ ವಸ್ತುಗಳ ಕುರಿತು ಯಾವುದೇ ಮಾಹಿತಿ ದೊರೆತರೂ ಸಾರ್ವಜನಿಕರು ಸಹಾ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ನಂಜನಗೂಡಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಗಾಂಜಾ ಹಾಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ನೆರವಾಗಬೇಕು, ಗಾಂಜಾ ಮುಕ್ತ ಸ್ವಚ್ಚ ನಂಜನಗೂಡು ನಿರ್ಮಾಣಕ್ಕೆ ಬಿಜೆಪಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.ಗಾಂಜಾ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಫಲಕಗಳೊಂದಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ನೂರಾರು ಮಂದಿ ಯುವ ಜನರು ಬೈಕ್ ಗಳಲ್ಲಿ ನಗರದ ಆರ್.ಪಿ. ರಸ್ತೆ ಮೂಲಕ ಶ್ರೀಕಂಠೇಶ್ವರ ದೇವಾಲಯದ ವರೆಗೆ ಬಜಾರ್ ರಸ್ತೆಯ ಮೂಲಕ ಹುಲ್ಲಹಳ್ಳಿ ವೃತ್ತದ ವರೆಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಘೋಷಣೆಗಳನ್ನು ಕೂಗಿದರು.ಗಾಂಜಾ ಮತ್ತು ಮಾದಕ ವಸ್ತುಗಳ ಪೂರೈಕೆ ಹಾಗೂ ಮಾರಾಟ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರೇಡ್ -2 ತಹಸೀಲ್ದಾರ್ ನಂದಕಿಶೋರ್ ಅವರಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ಯುವ ಮೋರ್ಚಾ ಅಧ್ಯಕ್ಷ ಸಿದ್ದರಾಜು, ನಗರಸಭೆ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರ್ಜುನ್ ಪಾರ್ಥ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಲ್ಕುಂಡಿ ಮಹಾದೇವಸ್ವಾಮಿ, ಎಪಿಎಂಸಿ ಮಾಜಿ ಸದಸ್ಯ ಗುರುಸ್ವಾಮಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಣೆನೂರು ಪರಶಿವಮೂರ್ತಿ, ಬಿಜೆಪಿ ಮಾಜಿ ಅಧ್ಯಕ್ಷ ಮಹೇಶ್, ಮುಖಂಡರಾದ ಅರ್ಜುನ್ ರಮೇಶ್, ಬಾಲಚಂದ್ರ, ರವೀಂದ್ರ, ರಾಘವೇಂದ್ರ, ಉಮೇಶ್ ಮೋದಿ, ಅನಂತು, ಮಹೇಶ್, ಶ್ರೀಕಂಠ, ನವೀನ್ ರಾಜ್, ಮಧುರಾಜ್, ಕೃಷ್ಣ, ನಗರಸಭಾ ಮಾಜಿ ಸದಸ್ಯರಾದ ಕಪಿಲೇಶ್, ಮಹದೇವ ಪ್ರಸಾದ್, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.