ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಬಾಹಿರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದು ಸಂವಿಧಾನ ಬಾಹಿರ. ತಕ್ಷಣವೇ ಅದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಗದಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಕಿತ್ತೂರು ಚೆನ್ನಮ್ಮ ವೃತ್ತದಿಂದ ಜಿಲ್ಲಾಡಳಿತ ಭವನದ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ವರ್ತನೆ ಖಂಡಿಸಿದರು.ಪ್ರತಿಭಟನೆಯುದ್ದಕ್ಕೂ ರಾಜ್ಯಪಾಲರ ನಡೆಯನ್ನು ವಿರೋಧಿಸುವ ಕರ ಪತ್ರ, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಬಾಹಿರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್ ಹಿಂಪಡೆಯುವಂತೆ ಆಗ್ರಹಿಸಿದ ಕಾರ್ಯಕರ್ತರು ರಾಜ್ಯಪಾಲರು, ಬಿಜೆಪಿ, ಜೆಡಿಎಸ್ ವಿರುದ್ಧ ಆಕ್ರೋಶ ಹೊರ ಹಾಕಿದರು.ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಜಿಪಂ ಮಾಜಿ ಅಧ್ಯಕ್ಷ ವಾಸಪ್ಪ ಕುರುಡಗಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ, ಬಸವರಾಜ ಕಡೇಮನಿ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ, ವಿ.ಬಿ. ಸೋಮನಕಟ್ಟಿಮಠ, ಬಿ.ಬಿ. ಅಸೂಟಿ, ವಿದ್ಯಾಧರ ದೊಡ್ಡಮನಿ, ಶಾಂತಣ್ಣ ಮುಳವಾಡ, ಸುಜಾತಾ ದೊಡ್ಡಮನಿ, ಸಂಗು ನವಲಗುಂದ, ಎಚ್.ಎಸ್. ಸೋಂಪುರ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಕಾರ್ಯಕರ್ತರು ಹಾಜರಿದ್ದರು.