ಸಾರಾಂಶ
ಶ್ರೀಕ್ಷೇತ್ರ ಧರ್ಮಸ್ಥಳದ ಕುರಿತು ಅನಗತ್ಯವಾಗಿ ಸುಳ್ಳು ಸುದ್ದಿಗಳು ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲೆಯ ಧರ್ಮಸ್ಥಳ ಭಕ್ತ ವೃಂದದವರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ಬಾಗಲಕೋಟೆ : ಶ್ರೀಕ್ಷೇತ್ರ ಧರ್ಮಸ್ಥಳದ ಕುರಿತು ಅನಗತ್ಯವಾಗಿ ಸುಳ್ಳು ಸುದ್ದಿಗಳು ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲೆಯ ಧರ್ಮಸ್ಥಳ ಭಕ್ತ ವೃಂದದವರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ನವನಗರದ ಬಾಬು ಜಗಜೀವನ ರಾವ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಧರ್ಮಸ್ಥಳ ಭಕ್ತ ವೃಂದದವರೆಲ್ಲಾ ಸೇರಿ ಜಿಲ್ಲಾಧಿಕಾರಿ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.
ಮಾಜಿ ಶಾಸಕ ವೀರಣ್ಣ ಚರಂತಿಮಠ ಪ್ರತಿಭಟನೆಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ಹಿಂದೂ ದೇವಾಲಯಗಳನ್ನೇ ಗುರಿಯಾಗಿಸಿ ಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಕಾಣದ ಕೈಗಳು ಕೆಲಸ ಮಾಡುತ್ತಿದ್ದು, ಇದನ್ನೆಲ್ಲ ತಡೆಗಟ್ಟಲು ನಾವೆಲ್ಲರೂ ಒಂದಾಗಬೇಕಾಗಿದೆ. ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಮುಖಂಡ ರಾಜು ರಾಯ್ಕರ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಗಿರೀಶ ಮಟ್ಟಣ್ಣವರ, ಮಹೇಶ ಶೆಟ್ಟಿ ತಿಮರೋಡಿ, ಸಮೀರ ಎಂ.ಡಿ.ಸಂತೋಷ್ ಶೆಟ್ಟಿ, ಜಯಂತ.ಟಿ, ಅಜಯ ಅಂಚನ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆ ಉಪಯೋಗಿಸಿ ವೀಡಿಯೋಗಳ ತುಣುಕುಗಳನ್ನು ತಯಾರಿಸಿ ಅದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಡುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮಕೈಗೊಂಡು ತಕ್ಷಣವೇ ಎಸ್ಐಟಿ ನಡೆಸುತ್ತಿರುವ ಗುಂಡಿ ತೋಡುವುದು ನಿಲ್ಲಿಸಬೇಕು. ಭಕ್ತರ ಭಾವನೆಗಳ ಜೊತೆಗೆ ಚೆಲ್ಲಾಟ ಆಡಬೇಡಿ ಇದು ಸಾಂಕೇತಿಕ ಪ್ರತಿಭಟನೆಯಾಗಿದ್ದು ಮುಂದಿನ ದಿನಗಳಲ್ಲಿ ಧರ್ಮಸ್ಥಳಕ್ಕೆ ತೆರಳಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜಿ.ಎನ್.ಪಾಟೀಲ, ಶ್ರೀಕಾಂತ ಸಂದಿಮನಿ, ರಂಗನಗೌಡ ದಂಡನ್ನವರ, ಗೀತಾ ನಾಲತವಾಡ, ರವೀಂದ್ರ ಒಂಟಕುದರಿ, ಸುರೇಶ ಮಜ್ಜಗಿ, ಶ್ರೀಶೈಲಗೌಡ ಪಾಟೀಲ ಸೇರಿ ಧರ್ಮಸ್ಥಳ ಭಕ್ತಾಧಿಮಾನಿಗಳ ಸಮಿತಿಯವರು ಪಾಲ್ಗೊಂಡಿದ್ದರು.