ಜಿಲ್ಲೆಯ ಯುವ ಕ್ರೀಡಾಳುಗಳು ಹಾಕಿಯ ದಂತಕತೆ ಮೇಜರ್ ಧ್ಯಾನ್‌ಚಂದ್ ಅವರ ಸಾಧನೆಯಿಂದ ಸ್ಫೂರ್ತಿ ಪಡೆದು ಒಲಂಪಿಕ್‌ನಲ್ಲಿ ಸ್ವರ್ಣ ಪದಕಗಳನ್ನು ಗೆದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲೆಯ ಯುವ ಕ್ರೀಡಾಳುಗಳು ಹಾಕಿಯ ದಂತಕತೆ ಮೇಜರ್ ಧ್ಯಾನ್‌ಚಂದ್ ಅವರ ಸಾಧನೆಯಿಂದ ಸ್ಫೂರ್ತಿ ಪಡೆದು ಒಲಂಪಿಕ್‌ನಲ್ಲಿ ಸ್ವರ್ಣ ಪದಕಗಳನ್ನು ಗೆದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.ಅವರು ಶನಿವಾರ ಜಿಲ್ಲಾಡಳಿತ ವತಿಯಿಂದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ, ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.ಕ್ರೀಡೆಯಲ್ಲಿ ಇಂದು ವಿಪುಲ ಅವಕಾಶಗಳಿದ್ದು ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಅತ್ಯುನ್ನತ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಬಹುದು ಎಂದರು.ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ ಫಿಟ್ ಇಂಡಿಯಾ ಪ್ರತಿಜ್ಞಾವಿಧಿ ಬೋಧಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಕಾರ್ಯದರ್ಶಿ ಗಣನಾಥ್ ಶೆಟ್ಟಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಅಧ್ಯಕ್ಷ ಡಾ. ಜಯಕರ್ ಶೆಟ್ಟಿ, ಜಿಲ್ಲಾ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡೆಂಟ್ ರಾಜೇಶ್ ಕೆ. ಸಿ., ಹೋಂ ಗಾರ್ಡ್ ಇನ್ಸ್ಪೆಕ್ಟರ್ ಬಸವರಾಜ್, ರೆಡ್‌ಕ್ರಾಸ್ ಖಜಾಂಜಿ ಶಿವರಾಂ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಾಲಿನಿ, ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಶ್ರೀದೇವಿ ಮತ್ತಿತರರಿದ್ದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ರೋವರ್ಸ್ ಮತ್ತು ರೇಂಜರ್ಸ್ ಸಂಚಾಲಕ ಮೆರ್ವಿನ್ ವಿಕ್ಟರ್ ಡಿಸೋಜಾ ವಂದಿಸಿ, ಎನ್.ಎಸ್.ಎಸ್ ಅಧಿಕಾರಿ ಬಾಲರಾಜ್ ಡಿಬಿ ನಿರೂಪಿಸಿದರು.