ಅಥ್ಲೆಟಿಕ್ ಚಾಂಪಿಯನ್ ಶಿಪ್‌ನ 5,000, 10,000 ಮೀನಲ್ಲಿ ಬೆಳ್ಳಿ ಪದಕ ಪಡೆದ ಸಾಧಕನಿಗೆ ಅಭಿನಂದನಾ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಕಾರವಾರ

ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ 5,000 ಮತ್ತು 10,000 ಮೀ ನಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ, ರಾಜ್ಯ ಮತ್ತು ಜಿಲ್ಲೆಯ ಕೀರ್ತಿಯನ್ನು ಬೆಳಗಿರುವ ಜಿಲ್ಲೆಯ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಕ್ರೀಡಾಪಟು ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಲಿ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕ್ರೀಡಾಪಟು ಶಿವಾಜಿ ಅವರಿಗೆ ಅವರ ಸಾಧನೆಯನ್ನು ಅಭಿನಂದಿಸಿ ಜಿಲ್ಲಾಡಳಿತದ ಮೂಲಕ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದಲ್ಲಿ ಮಾತ್ರವಲ್ಲದೇ ಕ್ರೀಡೆ ಮತ್ತು ಸಾಂಸ್ಕೃತಿಕ ರಂಗದಲ್ಲೂ ಕೂಡಾ ತೊಡಗಿಕೊಳ್ಳಬೇಕು ಎಂದರು.


ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕ್ರೀಡಾಪಟು ಶಿವಾಜಿ, ಕಾರವಾರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸುಸಜ್ಜಿತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಗೆ ಮತ್ತು ದೇಶಕ್ಕಾಗಿ ಇನ್ನೂ ಉತ್ತಮ ಸಾಧನೆ ಮಾಡುತ್ತೇನೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಇದ್ದರು.

ಆರಂಭಿಕ ಹಂತದಲ್ಲಿ ಶಿವಾಜಿ ಅವರಲ್ಲಿದ್ದ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಕೋಚ್ ಪ್ರಕಾಶ್ ಅವರಿಗೆ ಅಭಿನಂದಿಸಲಾಯಿತು. ಕಾರವಾರದ ರೋಟರಿ ಸೀಸೈಡ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಶಿವಾಜಿ ಅವರನ್ನು ಅಭಿನಂದಿಸಿ, ನಗದು ಬಹುಮಾನ ನೀಡಲಾಯಿತು.