ಸಾರಾಂಶ
ಸೂಲಿಬೆಲೆ: ಗ್ರಾಮೀಣ ಭಾಗದಲ್ಲಿನ ಅನೇಕ ಅಚರಣೆಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ ಸಂಗತಿ. ಇವುಗಳನ್ನು ಜೀವಂತವಾಗಿಡುವ ಕೆಲಸಕ್ಕೆ ಯುವ ಸಮುದಾಯ ಮುಂದಾಗಬೇಕು ಎಂದು ಉಪನ್ಯಾಸಕ ಡಾ.ಅಮೀರ್ ಪಾಷಾ ಹೇಳಿದರು. ಸೂಲಿಬೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾನಪದ ಉತ್ಸವ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ರೈತರು ಬಳಸುವ ಸಿರಿಧಾನ್ಯಗಳಿಗೆ ಪೂಜೆ ಸಲ್ಲಿಸಲಾಯಿತು. ರೈತಾಪಿ ವರ್ಗದ ಪರಿಕರಗಳು ಹಾಗೂ ಜನಪದ ನೃತ್ಯ ಪ್ರಕಾರಗಳ ಪ್ರದರ್ಶನ ನಡೆಯಿತು, ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರಭಾರಿ ಪ್ರಾಚಾರ್ಯರಾದ ಡಾ.ಸಂಗೀತಾ ಮಾತನಾಡಿ, ಜಾನಪದ ಕಲೆ ಮತ್ತು ಸಂಸ್ಕೃತಿಯು ಹಿಂದಿನಿಂದಲೂ ಮನುಷ್ಯನ ಜೀವನದೊಂದಿಗೆ ಸಂಬಂಧ ಹೊಂದಿದ್ದು, ಇಂದಿನ ಪೀಳಿಗೆಯ ಮಕ್ಕಳು ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಕಲ್ಪನಾ, ಶಶಿಕಲಾ, ಡಾ.ಚನ್ನಕೃಷ್ಣ, ವೆಂಕಟೇಶಪ್ಪ, ಪುಲ್ಲಯ್ಯ, ಜಯರಾಮ್, ಡಾ.ರವಿ, ಶ್ರೀಮೂರ್ತಿ ಇತರರು ಇದ್ದರು.