ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮಾಧ್ಯಮಗಳು ಓದುಗರು ಮತ್ತು ಸಮಾಜದ ಜೊತೆ ವಿಶ್ವಾಸಾರ್ಹತೆ ಉಳಿಸಿಕೊಳ್ಳವುದು ಅಗತ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ ದೊರಕುತ್ತದೆ ಎಂದರು.
ಮಾಧ್ಯಮಗಳು ಜನರ ವಿಶ್ವಾಸಕ್ಕೆ ಹತ್ತಿರವಾಗಬೇಕು. ಜನರು ಮಾಧ್ಯಮಗಳನ್ನು ಅತಿ ಸೂಕ್ಷ್ಮವಾಗಿ ಗಮನಿಸುತ್ತಾರೆ. ಜನಸಾಮಾನ್ಯರಲ್ಲಿ ಇಂದು ಟಿವಿ ಹಾಗೂ ಪತ್ರಿಕೆಗಳ ಸುದ್ದಿಗಳನ್ನು ಅನುಮಾನದ ದೃಷ್ಠಿಯಿಂದ ನೋಡುವ ಪರಿಸ್ಥಿತಿ ಉಂಟಾಗಿದೆ. ಮಾಧ್ಯಮಗಳಲ್ಲಿ ಪ್ರಕಟವಾಗುವುದು ಸುಳ್ಳು ಎನ್ನುವ ಭಾವನೆ ಜನರಲ್ಲಿ ಮೂಡುತ್ತಿರುವುದು ಆತಂಕಕಾರಿಯಾಗಿದೆ ಎಂದರು.ಮುಖ್ಯ ವಾಹಿನಿ ಮಾಧ್ಯಮಗಳ ಜೊತೆಗೆ, ಸಾಮಾಜಿಕ ಮಾಧ್ಯಮಗಳು, ಯೂಟ್ಯೂಬ್ಗಳಲ್ಲಿಯೂ ಸುದ್ದಿಗಳು ಪ್ರಸಾರವಾಗುತ್ತಿದೆ. ಇವು ಮುಖ್ಯ ವಾಹಿನಿ ಮಾಧ್ಯಮಗಳಿಗೆ ಸಮಾನಾಂತರವಾಗಿ ಕಾರ್ಯ ನಿರ್ವಹಿಸುತ್ತಿವೆ. ಬದಲಾದ ಈ ಪರಿಸ್ಥಿತಿಯಿಂದ ಟಿವಿ ಹಾಗೂ ಪತ್ರಿಕಾ ಮಾಧ್ಯಮಗಳು ಹೊರಬರಬೇಕು. ವಸ್ತುನಿಷ್ಠ, ನಿಖರ ಹಾಗೂ ಸತ್ಯವಾದ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಜನರ ನಂಬಿಕೆ ಗಳಿಸಬೇಕು. ಪತ್ರಿಕೆ ಮತ್ತು ಮಾಧ್ಯಮ ಪ್ರಜಾಪ್ರಭುತ್ವ ಹಾಗೂ ಸಮಾಜದಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆ ಅಭಿವೃದ್ಧಿ ಬಗ್ಗೆ ಪತ್ರಕರ್ತರು ಕಾಳಜಿ ಹೊಂದಿದ್ದಾರೆ. ಜಿಲ್ಲೆ ಪತ್ರಕರ್ತರಿಗೆ ಅಗತ್ಯವಾಗಿರುವ ನಿವೇಶನ ಮಂಜೂರಾತಿ ಮಾಡಲು ಸ್ಥಳ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಸಚಿವನಾಗಿ ಕಾರ್ಯನಿರ್ವಹಿಸುವ ಅವಧಿಯಲ್ಲಿಯೇ ನಿವೇಶನ ಹಂಚಿಕೆ ಪೂರ್ಣಗೊಳಿಸುವುದಾಗಿ ಸಚಿವರು ಭರವಸೆ ನೀಡಿದರು.ಸಂಸದ ಗೋವಿಂದ ಎಂ.ಕಾರಜೋಳ ಮಾತನಾಡಿ, ಪತ್ರಿಕೆಗಳು ಸಮಾಜದ ಪ್ರತಿಬಿಂಬ ಹಾಗೂ ಪ್ರಜಾಪ್ರಭುತ್ವದ ರಕ್ಷಾ ಕವಚವಾಗಿ ಕಾರ್ಯನಿರ್ವಹಿಸುತ್ತಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸಿವೆ. ಕನ್ನಡ ನಾಡಿನ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪತ್ರಿಕೆಯನ್ನು 1843 ಜುಲೈ 1 ರಂದು ಪಾದ್ರಿ ಹರ್ಮನ್ ಮೋಗ್ಲಿಂಗ್ ಅವರು ಪ್ರಾರಂಭಿಸಿದರು. ಗೋಪಾಲಕೃಷ್ಣ ಗೋಖಲೆ ಹಾಗೂ ಬಾಲಗಂಗಾಧರ ತಿಲಕ್ ಬ್ರಿಟಿಷರ ದುರಾಡಳಿತ, ಬ್ರಿಟಿಷರು ಜನರಿಗೆ ಮಾಡುತ್ತಿರುವ ಶೋಷಣೆಯನ್ನು ಪತ್ರಿಕೆಗಳ ಮೂಲಕ ಜನರಿಗೆ ತಿಳಿಸಿದರು ಎಂದರು. ಇಂದು ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗಿದೆ. ಟಿವಿ ಮಾಧ್ಯಮಗಳು ಹೆಚ್ಚಿನ ಪರಿಣಾಮ ಬೀರುತ್ತಿವೆ. ಇಂದಿನ ಮಕ್ಕಳಿಗೆ ಟಿವಿ ಮಾಧ್ಯಮಗಳೇ ಮೊದಲ ಪಾಠಶಾಲೆ ಎನ್ನುವಂತಾಗಿದೆ. ಮಾಧ್ಯಮಗಳು ಹೆಚ್ಚಿನ ಪ್ರಭಾವ ಬೀರುವ ಶಕ್ತಿ ಹೊಂದಿದ್ದು, ಇದು ಸಮಾಜದ ಏಳಿಗೆ ಬಳಕೆಯಾಗಲಿ ಎಂದು ಹೇಳಿದರು.ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಜಿಲ್ಲೆಯಲ್ಲಿ ಕೆಲವು ಪತ್ರಿಕೆಗಳು ಮಾತ್ರ ಪರಿಚಯವಿತ್ತು. ಆದರೆ ಪತ್ರಿಕಾ ರಂಗ ಇಷ್ಟೊಂದು ದೊಡ್ಡದು ಎಂಬುದು ನನಗೆ ಇಂದು ತಿಳಿಯಿತು. ಪತ್ರಕರ್ತರು ಮತ್ತು ಪತ್ರಿಕಾ ವಿತರಕರಿಗೆ ನಾನು ಸದಾ ಸಹಕಾರ ನೀಡುತ್ತೇನೆ. ವಿತರಕರು ನಮಗೆ ಒಂದಿಷ್ಟು ಸಮಸ್ಯೆ ಕುರಿತು ನನ್ನ ಗಮನಕ್ಕೆ ತಂದಿದ್ದು ಮುಂದಿನ ದಿನದಲ್ಲಿ ಚರ್ಚಿಸುತ್ತೇನೆ ಎಂದರು.ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಸರ್ಕಾರದ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗ ಕೆಲಸ ಮಾಡುತ್ತಿದೆ. ಜಿಲ್ಲೆ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಎಚ್ಚರಿಸುವ ಕೆಲಸ ಮಾಧ್ಯಮ ಮಾಡುತ್ತಿದೆ. ಈ ಬಾರಿ ಪತ್ರಿಕಾ ದಿನಾಚರಣೆ ತುಂಬಾ ವಿಶೇಷವಾಗಿ ನಡೆಯುತ್ತಿರುವುದು ಸಂತೋಷ ತಂದಿದೆ ಎಂದರು.
ದುಡಿಮೆಗೆ ಹಲವಾರು ದಾರಿಗಳಿವೆ. ಆದರೆ ಮಾಧ್ಯಮ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುವವರಿಗೆ ಮಾತ್ರ ಸಾಮಾಜಿಕ ಕಾಳಜಿ ಹೆಚ್ಚಿರುತ್ತದೆ. ಅಂತಹ ವ್ಯಕ್ತಿಗಳು ಮಾತ್ರ ಈ ಕ್ಷೇತ್ರ ಬರಲು ಸಾಧ್ಯ. ಸಮಾಜದ ಮತ್ತು ಸರ್ಕಾರವನ್ನು ಸರಿ ದಾರಿಯಲ್ಲಿ ಕೊಂಡೊಯ್ಯುವ ಹೊಣೆಗಾರಿಕೆ ಪತ್ರಕರ್ತರ ಮೇಲಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಜೊತೆಯಾಗಿ ಹೆಜ್ಜೆ ಹಾಕೋಣ ಎಂದು ಹೇಳಿದರು.ವಿಧಾನಪರಿಷತ್ ಶಾಸಕ ಕೆ.ಎಸ್.ನವೀನ್ ಮಾತನಾಡಿ, ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅಗತ್ಯ ಇರುವ ಸಲಕರಣೆಗಳನ್ನು ನೀಡಲು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ₹5 ಲಕ್ಷ ಅನುದಾನ ಮಂಜೂರು ಮಾಡಿರುವುದಾಗಿ ತಿಳಿಸಿದರು. ಜಿಲ್ಲೆ 157 ಪತ್ರಿಕಾ ವಿತರಕರಿಗೆ ರೇಡಿಯಂ ಸ್ಟಿಕರ್ ರಿಫ್ಲೆಕ್ಟರ್ ಹೊಂದಿರುವ ಜಾಕೇಟ್ ನೀಡುವುದಾಗಿ ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಕರ್ನಾಟಕ ಮಾಧ್ಯಮ ಅಕಾಡೆಮಿ ನೂತನ ಸದಸ್ಯ ಎಂ.ಎನ್.ಅಹೋಬಲ ಪತಿ, ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ ತುಕಾರಾಂರಾವ್, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಉಪಸ್ಥಿತರಿದ್ದರು.