ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲ ಇಲಾಖೆಗಳ ಅನುದಾನ ಒಳಗೊಂಡಂತೆ ನಗರ ಮತ್ತು ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿ ಮುನ್ನೋಟ ತಯಾರಿಸಲು ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಮಹತ್ವ ಪಡೆಯುತ್ತದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.

ಕೊಪ್ಪಳ: ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲ ಇಲಾಖೆಗಳ ಅನುದಾನ ಒಳಗೊಂಡಂತೆ ನಗರ ಮತ್ತು ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿ ಮುನ್ನೋಟ ತಯಾರಿಸಲು ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಮಹತ್ವ ಪಡೆಯುತ್ತದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.

ಇಲ್ಲಿಯ ತಾಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ (ಟಿಪಿಡಿಸಿ) ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಗ್ರಾಮ ಸ್ವರಾಜ್ ಕಲ್ಪನೆಯಂತೆ ಹಳ್ಳಿಯಿಂದ ಯೋಜನೆ ರೂಪುಗೊಳ್ಳಲು ವಾರ್ಡ್ ಸಭೆ ಮತ್ತು ಗ್ರಾಮಸಭೆಗಳು ಪೂರಕವಾಗಿದ್ದು, ಅಧಿಕಾರಿಗಳು ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮಸಭೆಯಲ್ಲಿ ಬಂದ ಕಾಮಗಾರಿಗಳ ಪ್ರಸ್ತಾವನೆಯನ್ನು ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಚರ್ಚಿಸಿ ಜಿಲ್ಲಾ ಸಮಿತಿಗೆ ಕಳುಹಿಸಲಾಗುವುದು. ಈಗಾಗಲೇ 2026-27ನೇ ಸಾಲಿನ ₹468 ಕೋಟಿ ಮೊತ್ತದ ಕಾಮಗಾರಿಗಳ ಪ್ರಸ್ತಾವನೆ ತಯಾರಿಸಿದ್ದು, ಸಭೆಯಲ್ಲಿ ಚರ್ಚಿಸಿ ಆದ್ಯತೀಕರಿಸಿ ಜಿಲ್ಲಾ ಸಮಿತಿಗೆ ಅನುಮೋದನೆಗೆ ಕಳುಹಿಸಲಾಗುವುದು ಎಂದರು.

ಅಧಿಕಾರಿಗಳು ಮುಂಬರುವ ಆರ್ಥಿಕ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಮಾಡದೇ ಕಾಮಗಾರಿಗಳ ಅನುಷ್ಠಾನ ಮಾಡಬೇಕು. ಯಾವುದೇ ಅನುದಾನ ವಾಪಸ್ ಹೋಗದಂತೆ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮಾತನಾಡಿ, ಗ್ರಾಮೀಣ ಮತ್ತು ನಗರದ ಸರ್ವತೋಮುಖ ಅಭಿವೃದ್ಧಿಗೆ ಸಮಿತಿ ನೆರವಾಗಿದ್ದು, ವಿವಿಧ ಇಲಾಖೆಗಳ ಅನುದಾನ ಮತ್ತು ಕೇಂದ್ರ, ರಾಜ್ಯ ಸರ್ಕಾರದ ಅನುದಾನ ಒಳಗೊಂಡಂತೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. 2026-27ನೇ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗುವುದು. ತಳಮಟ್ಟದಿಂದ ಯೋಜನೆ ತಯಾರಿಸಲು ಹಾಗೂ ಜನರ ಸಮಸ್ಯೆ ಬಗೆಹರಿಸಲು ಸಹಾಯಕವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರಾಮಣ್ಣ ಕಲ್ಲಣ್ಣನವರ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ತಾಪಂ ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ತಾಲೂಕು ಯೋಜನಾಧಿಕಾರಿ ರಾಜೇಸಾಬ ನದಾಫ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಉಪಸ್ಥಿತರಿದ್ದರು.