ಕನ್ನಡಪ್ರಭ ವಾರ್ತೆ ಮಂಡ್ಯ
ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆಯನ್ನು ಒಂದೇ ವೇದಿಕೆಯಲ್ಲಿ ಉಚಿತವಾಗಿ ಒದಗಿಸುವ ಉದ್ದೇಶದಿಂದ ಜು.೨೭ರಂದು ತಾಲೂಕಿನನ ಕೆರಗೋಡು ಗ್ರಾಮದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಬೃಹತ್ ಆರೋಗ್ಯ ಮೇಳ ಆಯೋಜಿಸಲಾಗಿದೆ.ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಆರೋಗ್ಯ ಸಂಸ್ಥೆಗಳ ಸಹಯೋಗದಲ್ಲಿ ಅಂದು ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ನಡೆಯಲಿರುವ ಈ ಆರೋಗ್ಯ ಮೇಳದಲ್ಲಿ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಆಸ್ಪತ್ರೆಗಳ ನುರಿತ ತಜ್ಞ ವೈದ್ಯರು ಭಾಗವಹಿಸಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ ಹಾಗೂ ಅಗತ್ಯ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಿದ್ದಾರೆ.
ಈ ಮಹತ್ವದ ಆರೋಗ್ಯ ಮೇಳದ ಯಶಸ್ವಿ ಆಯೋಜನೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಪಿ.ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದು ಕಾರ್ಯಕ್ರಮದ ರೂಪುರೇಷೆ, ವಿವಿಧ ಇಲಾಖೆಗಳ ಜವಾಬ್ದಾರಿಗಳು, ವೈದ್ಯಕೀಯ ತಂಡಗಳ ನಿಯೋಜನೆ, ಜನಸಂದಣಿ ನಿರ್ವಹಣೆ, ನೋಂದಣಿ, ಕುಡಿಯುವ ನೀರು, ಶೌಚಾಲಯ, ಆಂಬುಲೆನ್ಸ್, ಔಷಧ ವಿತರಣೆ ಹಾಗೂ ಆರೋಗ್ಯ ತಪಾಸಣಾ ವಿಭಾಗಗಳ ಸಿದ್ಧತೆ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.ಆರೋಗ್ಯ ಮೇಳದಲ್ಲಿ ಗರ್ಭಕೋಶ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಕಿಡ್ನಿ ಕ್ಯಾನ್ಸರ್, ಮೂಳೆ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ಯಾನ್ಸರ್ಗಳ ಪ್ರಾಥಮಿಕ ತಪಾಸಣೆ, ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ, ರಕ್ತದೊತ್ತಡ, ಕಣ್ಣುಗಳ ತಪಾಸಣೆ, ದಂತ ಚಿಕಿತ್ಸಾ ಸೇವೆಗಳು, ಸಾಮಾನ್ಯ ಆರೋಗ್ಯ ತಪಾಸಣೆ, ಸೇರಿದಂತೆ ಹಲವು ವಿಶೇಷ ವೈದ್ಯಕೀಯ ಸೇವೆಗಳು ಉಚಿತವಾಗಿ ಲಭ್ಯವಾಗಲಿವೆ.
ಅಲ್ಲದೇ, ಗಂಭೀರ ಆರೋಗ್ಯ ಸಮಸ್ಯೆಗಳು ಪತ್ತೆಯಾದವರಿಗೆ ಹೆಚ್ಚಿನ ಚಿಕಿತ್ಸೆಗೆ ತಜ್ಞ ಆಸ್ಪತ್ರೆಗಳಿಗೆ ರೆಫರ್ ಮಾಡುವ ವ್ಯವಸ್ಥೆಯೂ ಕಲ್ಪಿಸಲಾಗಿದ್ದು, ಅಗತ್ಯವಿರುವವರಿಗೆ ಔಷಧ ವಿತರಣೆ ಹಾಗೂ ಆರೋಗ್ಯ ಜಾಗೃತಿ ಕುರಿತು ಸಲಹೆ ನೀಡಲಾಗುವುದು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಸಿ.ಬೆಟ್ಟಸ್ವಾಮಿ, ತಹಸೀಲ್ದಾರ್ ವಿಶ್ವನಾಥ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕ್ರಮದ ಸಂಘಟಕರು ಭಾಗವಹಿಸಿದ್ದರು.ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಬೃಹತ್ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ. ಸಣ್ಣ ಆರೋಗ್ಯ ಸಮಸ್ಯೆಗಳನ್ನೂ ನಿರ್ಲಕ್ಷಿಸದೆ ಪ್ರತಿಯೊಬ್ಬರೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉಚಿತ ತಪಾಸಣೆ ಮಾಡಿಸಿಕೊಳ್ಳಬೇಕು. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.
- ಪಿ.ರವಿಕುಮಾರ್, ಶಾಸಕರು, ಮಂಡ್ಯ ವಿಧಾನಸಭಾ ಕ್ಷೇತ್ರ