ಕನ್ನಡಪ್ರಭ ವಾರ್ತೆ ಬೆಂಗಳೂರು

ನಮ್ಮ ಮೆಟ್ರೋ ಹಳದಿ ಮಾರ್ಗದ ಹುಸ್ಕೂರು ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪತ್ರಕರ್ತರೊಬ್ಬರು ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ರಾಯಚೂರು ಮೂಲದ ರಾಜೇಶ್ ಹಿರೇಮಠ (35) ಖಾಸಗಿ ನ್ಯೂಸ್ ಚಾನೆಲ್‌ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ನ್ಯೂಸ್ ಫಸ್ಟ್ ಪ್ರೈಮ್ ಯೂಟ್ಯೂಬ್ ಇಂಗ್ಲಿಷ್ ಚಾನಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ಮೂಲಗಳ ಪ್ರಕಾರ ಕಳೆದು ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದರು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ಇಂದು ಸಂಜೆ ಸುಮಾರು 5:50ರ ವೇಳೆಗೆ ಹುಸ್ಕೂರು ರಸ್ತೆ ಮೆಟ್ರೋ ನಿಲ್ದಾಣಕ್ಕೆ ಬಂದ ರಾಜೇಶ್ ಹಿರೇಮಠ, ಮೆಟ್ರೋ ಹಳಿಗೆ ಹಾರಿದ್ದಾರೆ. ತಕ್ಷಣ ಮೆಟ್ರೋ ಸಿಬ್ಬಂದಿ ಧಾವಿಸಿ, ಹಳಿಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿದರು. ಆದರೆ, ಹಳಿಗೆ ಹಾರಿದ ರಭಸಕ್ಕೆ ರಾಜೇಶ್ ಅವರಿಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದವು. ವಿಷಯ ತಿಳಿದ ತಕ್ಷಣವೇ ಹೆಬ್ಬಗೋಡಿ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹಳಿಯ ಮೇಲೆ ಸಿಲುಕಿದ್ದ ವ್ಯಕ್ತಿಯನ್ನು ಹರಸಾಹಸ ಪಟ್ಟು ಮೇಲಕ್ಕೆತ್ತಿದ್ದರು. ಬಳಿಕ ಆ್ಯಂಬುಲೆನ್ಸ್ ಮೂಲಕ ನಗರದ ಸೇಂಟ್ ಜಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ನೇಯ ವಿಭಾಗದ ಡಿಸಿಪಿ ಮೊಹಮ್ಮದ್ ಸುಜಿತಾ ಹಾಗೂ ಹೆಬ್ಬಗೋಡಿ ಪೊಲೀಸರು ಹುಸ್ಕೂರು ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಈ ಘಟನೆಯಿಂದಾಗಿ ಹಳದಿ ಮಾರ್ಗದ ಮೆಟ್ರೋ ರೈಲು ಸೇವೆಗಳಲ್ಲಿ ಸಂಜೆ 5.55ರಿಂದ ರಾತ್ರಿ ಎಂಟು ಗಂಟೆವರೆಗೆ ವ್ಯತ್ಯಯ ಉಂಟಾಯಿತು. ಈ ಅವಧಿಯಲ್ಲಿ ಎಲೆಕ್ಟ್ರಾನಿಕ್‌ ಸಿಟಿ ಮತ್ತು ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ರೈಲು ನಿಲ್ದಾಣಗಳ ನಡುವೆ ಮಾತ್ರ ಸೇವೆ ಲಭ್ಯವಿತ್ತು. ಸೇವಾ ವ್ಯತ್ಯಯದಿಂದ ಬಾಧಿತರಾದ ಪ್ರಯಾಣಿಕರಿಗೆ ಟಿಕೆಟ್‌ ದರವನ್ನು ಮರುಪಾವಿತಸಲಾಗಿದೆ. ಮೊಟಕುಗೊಂಡ ಪ್ರಯಾಣಕ್ಕೆ ಸಂಬಂಧಿಸಿದ ಆನ್‌ಲೈನ್‌ ಟಿಕೆಟ್‌ಗಳ ಮರುಪಾವತಿಯನ್ನು ಮಂಗಳವಾರದಿಂದ ಆರಂಭಿಸಲಾಗುವುದು ಎಂದು ಮೆಟ್ರೋ ರೈಲು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.