ಸಾರಾಂಶ
ಬೆಂಗಳೂರು : ಮೆಟ್ರೋ ಕಂಬ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಭಾನುವಾರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ ಲೋಕಾರ್ಪಣೆ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
ಸರ್ಕಾರದ ಆಸ್ತಿಗಳಿಗೆ ದೀಪಾಲಂಕಾರ ಮಾಡುತ್ತೇವೆ, ಖಾಸಗಿ ಸ್ಥಳ, ಕಟ್ಟಡಗಳಲ್ಲಿ ದೀಪಾಲಂಕಾರ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ ಸುಮಾರು 40 ಕಡೆ ದೀಪಾಲಂಕಾರಕ್ಕೆ ಸ್ಥಳಗಳನ್ನು ಗುರುತಿಸಲಾಗಿದೆ. ಯಾವ ಸ್ಥಳಗಳು ಎಂದು ಅಧಿಕಾರಿಗಳು ತಿಳಿಸಲಿದ್ದಾರೆ. ಬೆಂಗಳೂರು ನಗರದಲ್ಲಿ ಎಲ್ಇಡಿ ದೀಪ ಬಳಸಲಾಗುವುದು. ಈ ಹಿಂದೆ ಕರೆಯಲಾಗಿದ್ದ ಟೆಂಡರ್ ವಿಫಲವಾಗಿದೆ, ಮರು ಟೆಂಡರ್ ಕರೆಯಲಾಗುವುದು. ಡಿಪಿಆರ್ ಕೂಡ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.
ಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಮ್ಮ ಕಾಲದಲ್ಲಿ ಸಾಕ್ಷಿಗುಡ್ಡೆಗಳನ್ನು ಸೃಷ್ಟಿ ಮಾಡಬೇಕು ಎಂದು ಸುವರ್ಣಸೌಧ ಹಾಗೂ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಿಸಿದ್ದಾರೆ. ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆ ಸ್ಥಾಪನೆ ವೇಳೆ ತಾವು ಹಾಗೂ ಯು.ಟಿ.ಖಾದರ್ ಅವರು ಈ ಬಗ್ಗೆ ಚರ್ಚೆ ನಡೆಸಿದ್ದೆವು. ಇಂದು ಈ ಕೆಲಸ ಕಾರ್ಯಗತವಾಗಿದೆ ಎಂದರು.