ಸರ್ಕಾರದ ಸೌಲಭ್ಯ ಬಳಸಿಕೊಂಡು ವಿದ್ಯಾವಂತರಾಗಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

| Published : Feb 13 2024, 12:49 AM IST / Updated: Feb 13 2024, 04:27 PM IST

ಸರ್ಕಾರದ ಸೌಲಭ್ಯ ಬಳಸಿಕೊಂಡು ವಿದ್ಯಾವಂತರಾಗಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಬೋವಿ ಸಮುದಾಯ ಈಗ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮೊದಲು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ಬೋವಿ ಸಮುದಾಯವು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಮುಂದುವರೆದಿದೆ. ಆದರೆ ಸರ್ಕಾರದ ಸೌಲಭ್ಯ ಬಳಸಿಕೊಂಡು ನಿಮ್ಮ ಮಕ್ಕಳನ್ನೂ ವಿದ್ಯಾವಂತರನ್ನಾಗಿ ಮಾಡಿ

ಕನ್ನಡಪ್ರಭ ವಾರ್ತೆ ಮೈಸೂರು

ಬೋವಿ ಸಮುದಾಯದ ಅಭಿವೃದ್ಧಿ ಸರ್ಕಾರ ನೀಡಿರುವ ಸೌಲಭ್ಯವನ್ನು ಬಳಸಿಕೊಂಡು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕಿವಿಮಾತು ಹೇಳಿದರು.

ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವ ಸಮಿತಿ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೋವಿ ಸಮುದಾಯ ಈಗ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮೊದಲು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ಬೋವಿ ಸಮುದಾಯವು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಮುಂದುವರೆದಿದೆ. ಆದರೆ ಸರ್ಕಾರದ ಸೌಲಭ್ಯ ಬಳಸಿಕೊಂಡು ನಿಮ್ಮ ಮಕ್ಕಳನ್ನೂ ವಿದ್ಯಾವಂತರನ್ನಾಗಿ ಮಾಡಿ ಎಂದರು.

ದೇಶದ ಅಭಿವೃದ್ಧಿಗೆ ಬೋವಿ ಸಮುದಾಯದ ಕೊಡುಗೆಯೂ ಸಾಕಷ್ಟಿದೆ. ಸಮಾನತೆ, ಸಹಬಾಳ್ವೆ ಮತ್ತು ಸಹೋದರತೆಗಾಗಿ ಶರಣರು ಶ್ರಮಿಸಿದರು. ಬಸವಣ್ಣನವರ ಅನೇಕಾರು ಅನುಯಾಯಿಗಳು ಸಮಾಜ ಸುಧಾರಣೆಗೆ ಶ್ರಮಿಸಿದರು. 

ಅವರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರೂ ಕೂಡ ಒಬ್ಬರು ಎಂದರು.ಶಿವಶರಣರು ಸಮಾಜದ ಅಂಕುಡೊಂಕು ತಿದ್ದಲು ತಮ್ಮ ವಚನಗಳ ಮೂಲಕ ಶ್ರಮಿಸಿದ್ದಾರೆ.

ನಿವೃತ್ತ ಪ್ರಾಧ್ಯಾಪಕ ಡಾ.ಎಸ್. ಶಿವರಾಜಪ್ಪ ಮಾತನಾಡಿ, ಮಹಾರಾಷ್ಟ್ರದ ಸೊಲ್ಲಾಪುರ ಸಮೀಪದ ಸೊನ್ನಲಗಿಯೆಲ್ಲಿ ಜನಿಸಿದ ಸಿದ್ದರಾಮೇಶ್ವರರು, 12ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಒಬ್ಬರು. 

ತಂದೆ ಮುದ್ದುಗೌಡ. ತಾಯಿ ಸುಗ್ಗಲೆಯ ಪುತ್ರರಾದ ಇವರು ತಮ್ಮ ಅವಧಿಯಲ್ಲಿ ಅನೇಕ ಕೆರೆಕಟ್ಟೆ ಕಟ್ಟಿಸಿದರು. ಸಕಲ ಜೀವಿಗಳ ನೆಮ್ಮದಿಯ ಬದುಕಿಗಾಗಿ ಶ್ರಮಿಸಿದರು.

ಚನ್ನಬಸವಣ್ಣನವರಿಂದ ಇಷ್ಟಲಿಂಗ ದೀಕ್ಷೆ ಪಡೆದ ಸಿದ್ದರಾಮೇಶ್ವರರು ಪ್ರಭುದೇವರು ಅವರನ್ನು ಕಲ್ಯಾಣಕ್ಕೆ ಕರೆದೊಯ್ಯುತ್ತಾರೆ. ಅವರು ಅನುಭವ ಮಂಟಪದಲ್ಲಿ ಪಾಲ್ಗೊಂಡು ಮಹಾ ಶಿವಯೋಗಿ ಆಗುತ್ತಾರೆ ಎಂದರು.

ಜಿಪಂ ಉಪ ಕಾರ್ಯದರ್ಶಿ ಸವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಜಿ. ನಾಗರಾಜು, ಗೌರವಾಧ್ಯಕ್ಷ ಡಿ. ಸಿದ್ದರಾಮಯ್ಯ, ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ. ಸೀತಾರಾಂ, ನಗರ ಪಾಲಿಕೆ ಉಪ ಆಯುಕ್ತ ಜಿ.ಎಸ್. ಸೋಮಶೇಖರ್ ಮೊದಲಾದವರು ಇದ್ದರು.